ಕೊಪ್ಪಳ: ಮಾನವ ಹಕ್ಕು ಸಂರಕ್ಷಣೆ ಮಾಡುವಲ್ಲಿ ನಮ್ಮ ಮತ್ತು ನಿಮ್ಮ ಮೇಲೆ ಹೆಚ್ಚಿನ ರೀತಿಯ ಜವಾಬ್ದಾರಿ ಇವೆ.ಅದನ್ನು ಎಲ್ಲರೂ ಅರಿತುಕೊಂಡು ಇನ್ನೂ ಹೆಚ್ಚಿನ ರೀತಿಯ ಕ್ರಮ ಕೈಗೊಳ್ಳುವುದರ ಜತೆಗೆ ಎಲ್ಲರೂ ಒಟ್ಟಾಗಿ ಮಾನವ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಹೇಳಿದರು.
ಹುಟ್ಟಿನಿಂದಲೇ ಎಲ್ಲರೂ ಮಾನವ ಹಕ್ಕುಗಳನ್ನು ಪಡೆದಿರುತ್ತಾರೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಕ್ಕುಗಳು ಎಷ್ಟು ಮುಖ್ಯವೋ ಅಷ್ಟೇ ಕರ್ತವ್ಯಗಳು ಕೂಡ ಬಹಳ ಮುಖ್ಯ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಮಾತನಾಡಿ, ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಒಬ್ಬ ಮನುಷ್ಯನನ್ನು ಮನುಷ್ಯನಾಗಿ ನೋಡಿಕೊಳ್ಳಲು ಅವಕಾಶಬೇಕು ಎನ್ನುವ ಕಾರಣಕ್ಕೆ ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡಲಾಗಿದೆ. ಇಂತಹ ಅವಕಾಶ ನೀಡಿದ್ದರೂ ಸಹ ಇಂದಿನ ದಿನಗಳಲ್ಲಿ ನಾವು ತಾರತಮ್ಯ ಕಾಣಬಹುದಾಗಿದೆ. ವಿಶೇಷವಾಗಿ ನಮ್ಮ ಭಾಗದಲ್ಲಿ ಕೆಲವು ಕಡೆ ಇಂದಿಗೂ ಅಸ್ಪೃಶ್ಯತೆ ಆಚರಣೆ ಅನುಸರಿಸಲಾಗುತ್ತಿದೆ. ಇದು ಒಂದು ಮಾನವ ಹಕ್ಕುಗಳ ಉಲ್ಲಂಘನೆಗೆ ಉದಾಹರಣೆಯಾಗಿದೆ. ಇಂತಹ ಆಚರಣೆ ನಿರ್ಮೂಲನೆ ಮಾಡಿದಾಗ ಮಾನವ ಹಕ್ಕುಗಳ ರಕ್ಷಣೆಯಾಗುತ್ತದೆ ಎಂದರು.ಒಬ್ಬರ ಹಕ್ಕು ಮತ್ತೊಬ್ಬರು ಉಲ್ಲಂಘನೆ ಮಾಡದಂತೆ ನೊಡಿಕೊಳ್ಳಬೇಕು. ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಬಹಳಷ್ಟು ಹೋರಾಟ ನಾವು ಕಾಣುತ್ತೇವೆ. ಆ ಎಲ್ಲ ಹೋರಾಟಗಳ ಫಲ ಈ ಸಂವಿಧಾನದಲ್ಲಿ ಕಂಡಿದ್ದೇವೆ.ಹಾಗಾಗಿ ಸಂವಿಧಾನದ ಆಶಯ ನಾವು ಸರಿಯಾಗಿ ಪಾಲನೆ ಮಾಡಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಚರಿಸಲಾಗುತ್ತದೆ ಎಂದು ಹೇಳಿದರು.
ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳದ ವ್ಯವಸ್ಥಾಪಕ ಹರೀಶ್ ಜೋಗಿ, ಕೊಪ್ಪಳ ತಹಸೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.