ಕಾಂಗ್ರೆಸ್‌ ಸರ್ಕಾರದ ಹಗರಣ ವಿರೋಧಿಸಿ ಪ್ರತಿಭಟನೆ

KannadaprabhaNewsNetwork | Published : Jun 28, 2025 12:18 AM

ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ಓಲೈಕೆಗಳು ಜೊತೆಯಾಗಿ ಮುಂದಡಿ ಇಡುತ್ತಿವೆ. ಈಗ ಕಾಂಗ್ರೆಸ್‌ನ ಮುಖವಾಡ ಕಳಚಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಸತಿ ಸಚಿವ ಜಮೀರ್ ಅಹಮ್ಮದ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ಜಿಲ್ಲಾ ಪಂಚಾಯಿತಿ ಕಚೇರಿಗೆ ತೆರಳಿದರು. ಈ ವೇಳೆ ಜಿಪಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಡವರ ಮನೆ ಹಂಚಿಕೆಗೆ ಹಣ ಪಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ವಸತಿ ಸಚಿವ ಜಮೀರ ಅಹ್ಮದ ಭಾವಚಿತ್ರ ಪ್ರದರ್ಶಿಸಿ, ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಪಂ ಕಚೇರಿಗೆ ಪ್ರತಿಭಟನಾ ಮೆರವಣಿಗೆ ತೆರಳುತ್ತಿದ್ದಂತೆಯೇ ಕಚೇರಿ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ಓಲೈಕೆಗಳು ಜೊತೆಯಾಗಿ ಮುಂದಡಿ ಇಡುತ್ತಿವೆ. ಈಗ ಕಾಂಗ್ರೆಸ್‌ನ ಮುಖವಾಡ ಕಳಚಿದೆ. ಇದು, ವಿರೋಧ ಪಕ್ಷಗಳಿಂದ ಆದುದಲ್ಲ. ಬದಲಾಗಿ ಕಾಂಗ್ರೆಸ್ಸಿನ ಶಾಸಕರೊಬ್ಬರ ಸ್ವಂತ ಸ್ಫೋಟಕ ಆಡಿಯೋ ಬಹಿರಂಗ ಪಡಿಸುವಿಕೆಯಿಂದ ಆಗಿದೆ. ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿನ ಬೇರು ಬಿಟ್ಟ ಭ್ರಷ್ಟಾಚಾರವನ್ನು ಸ್ವತಃ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಆಡಿಯೋ ಮೂಲಕ ಬಹಿರಂಗಪಡಿಸಿದ್ದಾರೆ. ಮನೆ ಹಂಚಿಕೆಗೆ ಲಂಚವನ್ನು ಬಹಿರಂಗವಾಗಿ ಕೇಳಲಾಗುತ್ತದೆ ಎಂದು ಆರೋಪಿಸಿದ್ದಾರೆ. ಆಘಾತಕಾರಿಯಾಗಿ, ಲಂಚ ನೀಡದ ಕಾರಣಕ್ಕಾಗಿ, ಅವರ ಅಧಿಕೃತ ಶಿಫಾರಸು ಪತ್ರಗಳನ್ನು ಸಹ ನಿರ್ಲಕ್ಷಿಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.

ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಮುಖಂಡ ಸಂಕಲ್ಪ ಶೆಟ್ಟರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೋನಾಲಿ ಸರ್ನೋಬತ್, ಜ್ಯೋತಿ ಶೆಟ್ಟಿ, ಶ್ವೇತಾ ಜಗದಾಳೆ, ಹನುಮಂತ ಕೊಂಗಾಲಿ ಮೊದಲಾದವರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.