ಸಿದ್ದಾಪುರ: ವಿದ್ಯುತ್ ಇಲಾಖೆಯ ಖಾಸಗೀಕರಣವನ್ನು ವಿರೋಧಿಸಿ ಉತ್ತರ ಕನ್ನಡ ರೈತ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಕೆಪಿಟಿಸಿಎಲ್ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆಂಥೋನಿ ಮಾತನಾಡಿ, ಇಂದು ವಿದ್ಯುತ್ ಎನ್ನುವುದು ಒಂದು ಮೂಲಭೂತ ಸೌಲಭ್ಯ ಆಗಿದೆ. ಲಕ್ಷಾಂತರ ಜನರ ಶ್ರಮದಿಂದ ಈ ಸಂಸ್ಥೆ ಬೆಳೆದು ಬಂದಿದೆ. ಆದರೆ ಈಗ ಕೇವಲ ಲಾಭದ ಉದ್ದೇಶಕ್ಕಾಗಿ ಖಾಸಗಿ ಕಂಪನಿ ಅದನ್ನು ಹತೋಟಿಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಎಲ್ಲರಿಗೂ ತೊಂದರೆ ಉಂಟಾಗುತ್ತದೆ ಎಂದರು.
ತಾಲ್ಲೂಕು ಕಸಾಪ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕುಂಬ್ರಿಗದ್ದೆ, ಕರವೇ ಜನಧ್ವನಿಯ ಹೇಮಂತ ಗೋಳಗೊಡು, ರವಿ ಕೊಠಾರಿ, ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ವಿಠ್ಠಲ ನಾಯ್ಕ, ಹೊಳಿಯಪ್ಪ ಕೆ., ಪಿ.ಬಿ. ಹೊಸೂರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು, ಹೆಸ್ಕಾಂ ಸಿಬ್ಬಂದಿ ಮತ್ತು ಸಾರ್ವಜನಿಕರು ಇದ್ದರು.ಜೋಯಿಡಾ: ರಾಜ್ಯದಲ್ಲಿ ವಿದ್ಯುತ್ ವಿತರಣೆ ಪರವಾನಗಿ ಪಡೆಯಲು ಟಾಟಾ ಪವರ್ ಕಂಪನಿ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸುವುದು ರೈತಾಪಿ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಅಪಾಯಕಾರಿ ಸಂಗತಿ. ಈ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜೋಯಿಡಾ ತಾಲೂಕು ಸಮಿತಿ ವತಿಯಿಂದ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜೋಯಿಡಾ ತಾಲೂಕಾಧ್ಯಕ್ಷ ಪ್ರೇಮಾನಂದ ವೇಳಿಪ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯುತ್ ಖಾಸಗೀಕರಣವಾದರೆ ಸರ್ಕಾರದಿಂದ ಅನುಷ್ಠಾನ ಗೊಳ್ಳುತ್ತಿರುವ ವಿವಿಧ ಕಲ್ಯಾಣ ಯೋಜನೆಗಳು ಬಂದ್ ಆಗುವ ಸಾಧ್ಯತೆಗಳಿವೆ. ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಬಂದ ಆಗಲಿದೆ. ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯಿಂದ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಟಾಟಾ ಕಂಪನಿಯು ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಪರವಾನಗಿ ಕೋರಿದೆ. ಈ ಕಂಪನಿಯ ಯಾವುದೇ ವಿಶ್ವಾಸಾರ್ಹ ಅಂಶಗಳನ್ನು ಹೊಂದಿರದೇ ಇರುವದರಿಂದ ಅವರ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.