ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಐದುದೀಪ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಶ್ರೀರಂಗಪಟ್ಟಣ- ಜೇವರ್ಗಿ ಮುಖ್ಯರಸ್ತೆ ತಡೆದು ಮಾನವ ಸರಪಳಿ ನಿರ್ಮಿಸಿ, ಸಚಿವ ಜಮೀರ್ ವಿರುದ್ಧ ಘೋಷಣೆ ಕೂಗಿದರು. ಜಮೀರ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಿ ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಜೆಡಿಎಸ್ ಅಧ್ಯಕ್ಷ ಎಸ್.ಮಲ್ಲೇಶ್ ಮಾತನಾಡಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಜಮೀರ್ ದೇಶದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಹಾಗೂ ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿದರು.ಎಲುಬು ಇಲ್ಲದ ನಾಲಗೆಯಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರ ಮೈಬಣ್ಣದ ಬಗ್ಗೆ ಕೀಳಾಗಿ ಮಾತನಾಡಿದ್ದಲ್ಲದೆ ಅವರ ಕುಟುಂಬವನ್ನೇ ಹಣದಿಂದ ಕೊಂಡುಕೊಳ್ಳುವುದಾಗಿ ಹೇಳಿರುವುದು ಸರಿಯಲ್ಲ. ಜಮೀರ್ ಸಮಾಜದಲ್ಲಿ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಚುನಾವಣೆಯ ಪ್ರಚಾರದಲ್ಲಿ ಪ್ರತಿಯೊಬ್ಬರಿಗೂ ಪ್ರಚಾರ ನಡೆಸಿ ಮತಕೇಳುವ ಹಕ್ಕುಇದೆ. ಅದನ್ನು ಬಿಟ್ಟು ಮತ್ತೊಬ್ಬರ ಮೈಬಣ್ಣದ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಜಮೀರ್ ಎಚ್.ಡಿ.ದೇವೇಗೌಡರ ಗರಡಿಯಲ್ಲಿಯೇ ಬೆಳೆದು ಈಗ ಅವರ ಕುಟುಂಬವನ್ನೇ ಕೊಂಡುಕೊಳ್ಳುವ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಕೂಡಲೇ ಸಚಿವ ಜಮೀರ್ ಅವರನ್ನು ಸಚಿವ ಸ್ಥಾನದಿಂದ ಹೊರಹಾಕಿ ಕಾನೂನು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಅಧ್ಯಕ್ಷ ಧನಂಜಯ್ ಮಾತನಾಡಿ, ಚುನಾವಣೆಗಳು ಆರೋಗ್ಯಕರವಾಗಿ ನಡೆಯಬೇಕು. ಆದರೆ, ಜಮೀರ್ ಕೇಂದ್ರ ಸಚಿವ, ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಉಲ್ಲೇಖ ಮಾಡಿ ಅವಮಾನ ಮಾಡಿರುವುದು ಶೋಭೆಯಲ್ಲ. ಇಂತವರು ದೇಶದಲ್ಲಿರಲು ಯೋಗ್ಯರಲ್ಲ ಎಂದು ಕಿಡಿಕಾರಿದರು.ವಸತಿ ಸಚಿವನಾಗಿ ಜಮೀರ್ ತಮ್ಮ ಜವಾಬ್ದಾರಿ ಮರೆತು ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಾಡಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾನೆ. ಸಿಎಂ ಸಿದ್ದರಾಮಯ್ಯ ಕೂಡಲೇ ಸಚಿವ ಸ್ಥಾನದಿಂದ ಜಮೀರ್ ಅವರನ್ನು ವಜಾಗೊಳಿಸಿ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ಉಪಾಧ್ಯಕ್ಷ ಅಶೋಕ್, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ನಿರ್ದೇಶಕ ರಾಮಕೃಷ್ಣ, ಪುರಸಭೆ ಸದಸ್ಯರಾದ ಗಿರೀಶ್, ಸೋಮಶೇಖರ್, ಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗುರುಸ್ವಾಮಿ, ಚಲುವರಾಜ್, ಹಳೇಬೀಡು ಗ್ರಾಪಂ ಅಧ್ಯಕ್ಷ ಧನಂಜಯ್, ಮುಖಂಡರಾದ ಪಿ.ಎಸ್.ಲಿಂಗರಾಜು, ಸಗಾಯಂ, ಹೊಸಕೋಟೆಪುಟ್ಟಣ್ಣ, ಚಿಕ್ಕಾಡೆ ರಾಜಪ್ಪ, ಎಸ್.ಎನ್.ನಾರಾಯಣಗೌಡ, ಬಿ.ಎಸ್.ಜಯರಾನು, ಶಿವಕುಮಾರ್, ರವಿಕರ, ಮಾಣಿಕ್ಯನಹಳ್ಳಿ ಅಶೋಕ್, ಕೆ.ಬೆಟ್ಟಹಳ್ಳಿ ಮನು, ಮಂಚೇಗೌಡ, ಅಶ್ವಥ್ ಕುಮಾರೇಗೌಡ, ಸಿದ್ದೇಗೌಡ, ಚಿಕ್ಕಮರಳಿ ಚಂದ್ರಶೇಖರ್, ಬಿಜೆಪಿ ಮುಖಂಡರಾದ ಕಾಂತರಾಜ್, ಆನಂದ್, ಚಿಕ್ಕಣ್ಣ, ನವೀನ್ ಸೇರಿದಂತೆ ಹಲವರು ಭಾಗವಹಿಸಿದ್ದರು.