ಬೀದರ್: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಸಯ್ಯದ್ ನಾಸೇರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಖಂಡಿಸಿ, ಸರ್ಕಾರ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.
ಕೆಲವು ದಿನಗಳ ಹಿಂದೆ ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ. ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದೆ ಇರುವದಕ್ಕೆ ಪದೇ ಪದೇ ಇಂತಹ ಘಟನೆಗಳು ನಡೆಯುತ್ತವೆ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಒತ್ತಾಯಿಸುತ್ತದೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯ ಮೇಲೆ ದೇಶದ್ರೋಹದ ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಮತ್ತು ಈ ಪ್ರಕರಣದ ಸೂಕ್ತ ತನಿಖೆ ನಡೆದು ತೀರ್ಪು ಪ್ರಕಟವಾಗುವ ತನಕ ನಾಸೇರ್ ಹುಸೇನ್ಗೆ ರಾಜ್ಯ ಸಭೆಯ ಸದಸ್ಯರಾಗಿ ಪ್ರಮಾಣ ವಚನವನ್ನು ನೀಡಬಾರದು ಎಂದು ಅಗ್ರಹಿಸುತ್ತೇವೆ ಎಂದು ಎಬಿವಿಪಿ ಕಾರ್ಯಕರ್ತರು ತಿಳಿಸಿದರು.ಸರ್ಕಾರ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ರಾಜ್ಯದಾಧ್ಯಂತ ತೀವ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.