ಎಸ್ಸಿ, ಎಸ್ಟಿ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ತಮ್ಮ ಸದಸ್ಯತ್ವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಎಸ್ಸಿ, ಎಸ್ಟಿ ಮೋರ್ಚಾ ವತಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಹತ್ತಿರ ಪ್ರತಿಭಟನೆ ನಡೆಸಿದರು.
ಬಿಜೆಪಿಯ ಯಲಬುರ್ಗಾ ತಾಲೂಕು ಎಸ್ಸಿ, ಎಸ್ಟಿ ಮೋರ್ಚಾ ವತಿಯಿಂದ ಆಕ್ರೋಶ
ಕನ್ನಡಪ್ರಭ ವಾರ್ತೆ ಯಲಬುರ್ಗಾ
ಎಸ್ಸಿ, ಎಸ್ಟಿ ಜನಾಂಗದ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ತಮ್ಮ ಸದಸ್ಯತ್ವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಶನಿವಾರ ತಾಲೂಕು ಎಸ್ಸಿ, ಎಸ್ಟಿ ಮೋರ್ಚಾ ವತಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಹತ್ತಿರ ಪ್ರತಿಭಟನೆ ನಡೆಸಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಿಂದ ಹೊರಟ ಪ್ರತಿಭಟನಾಕಾರರು ಪ್ರಮುಖ ರಸ್ತೆಗಳ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗುತ್ತ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಸಚಿವ ಹಾಲಪ್ಪ ಆಚಾರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಸ್ಸಿ, ಎಸ್ಟಿ ಜನಾಂಗದವರಿಗೆ ಮೀಸಲಾತಿ ದೊರಕಿಸಿ ಕೊಟ್ಟಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದ ಕೋಟ್ಯಂತರ ಹಣವನ್ನು ಕಬಳಿಸಿದೆ. ಮುಖ್ಯಮಂತ್ರಿ ತಮ್ಮ ಪತ್ನಿ ಹೆಸರಿನಲ್ಲಿ ೧೪ ಸೈಟ್ಗಳನ್ನು ಅಕ್ರಮವಾಗಿ ಪಡೆದು ವಂಚನೆ ಮಾಡಿದ್ದಾರೆ. ಇಂತಹ ಭ್ರಷ್ಟ ಸರ್ಕಾರದ ವಿರುದ್ಧ ರಾಜ್ಯದ ಜನತೆ ರೋಸಿ ಹೋಗಿದ್ದಾರೆ. ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ಸಿನವರ ಬಣ್ಣ ಬಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರಾದ ವೀರಣ್ಣ ಹುಬ್ಬಳ್ಳಿ, ಬಸವಲಿಂಗಪ್ಪ ಭೂತೆ, ಶಿವಶಂಕರರಾವ್ ದೇಸಾಯಿ, ಮಲ್ಲನಗೌಡ ಕೋನನಗೌಡ್ರ, ಅರವಿಂದಗೌಡ ಪಾಟೀಲ ಮಾತನಾಡಿದರು. ಬಳಿಕ ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಅವರಿಗೆ ಮನವಿ ಸಲ್ಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.