.ಇಂದು ಎಸ್ಐಆರ್ ವಿರೋಧಿಸಿ ಪ್ರತಿಭಟನೆ

KannadaprabhaNewsNetwork |  
Published : May 30, 2026, 01:45 AM IST
ಸಿಕೆಬಿ-3  ಸುದ್ದಿಗೋಷ್ಠಿಯಲ್ಲಿ  ಶ್ರೀರಂಗಾಚಾರಿ ಮಾತನಾಡಿದರು      | Kannada Prabha

ಸಾರಾಂಶ

ಎಸ್‌ಐಆರ್ ವಿರುದ್ಧ ಈ ಪ್ರತಿಭಟನೆಗೆ ಹತ್ತಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರತಿರೋಧವು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಹಾಗೂ ಬದುಕುವ ಹಕ್ಕನ್ನು ರಕ್ಷಿಸಿಕೊಳ್ಳಲು ನಡೆಯುತ್ತಿರುವ ಪ್ರಜಾತಾಂತ್ರಿಕ ಹೋರಾಟವಾಗಿದೆ.

-ಮತದಾನ ಹಕ್ಕು

-ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳ ಒಕ್ಕೂಟದಿಂದ ಮೊದಲ ಸುತ್ತಿನ ಕರ್ನಾಟಕ ಪ್ರತಿರೋಧ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಮೇ 30ರಂದು ಶನಿವಾರ ಎಸ್‌ಐಆರ್ ವಿರೋಧಿಸಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕ ಪ್ರತಿರೋಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಖಜಾಂಚಿ ಶ್ರೀರಂಗಾಚಾರಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್‌ಐಆರ್ ವಿರುದ್ಧ ಈ ಪ್ರತಿಭಟನೆಗೆ ಹತ್ತಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರತಿರೋಧವು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಹಾಗೂ ಬದುಕುವ ಹಕ್ಕನ್ನು ರಕ್ಷಿಸಿಕೊಳ್ಳಲು ನಡೆಯುತ್ತಿರುವ ಪ್ರಜಾತಾಂತ್ರಿಕ ಹೋರಾಟವಾಗಿದೆ. ಜವಾಬ್ದಾರಿಯುತ ನಾಗರಿಕರು, ಪ್ರಗತಿಪರ ಚಿಂತಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಸಂವಿಧಾನದ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ತನ್ನ ನಿಯಂತ್ರಣದಲ್ಲಿ ಇಟ್ಟುಕೊಂಡು ತಮ್ಮ ಅನುಕೂಲಕ್ಕೆ ತಕ್ಕಂತೆ ನಿಯಮ ರೂಪಿಸಿ ಈ ಪ್ರಕ್ರಿಯೆ ನಡೆಸುತ್ತಿದೆ. 2002ರ ಪಟ್ಟಿಯಲ್ಲಿ ಹೆಸರು ಇಲ್ಲದೆ ಮತದಾರರಿಗೆ ಭಾರತೀಯ ನಾಗರಿಕರೆಂದು ಸಾಬೀತುಪಡಿಸಲು ದಾಖಲೆಗಳನ್ನು ಕೇಳಲಾಗುತ್ತಿದೆ. ಅಲ್ಲದೆ, ಹೆಸರಿನಲ್ಲಿನ ಸಣ್ಣಪುಟ್ಟ ತಪ್ಪುಗಳನ್ನು ಕಾರಣವನ್ನಾಗಿ ಮಾಡಿ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ. ಬಿಹಾರ ಹಾಗೂ ಪಶ್ಚಿಮ ಬಂಗಾಳ ಚುನಾವಣೆಗಳಲ್ಲಿ ಲಕ್ಷಾಂತರ ಮತದಾರರನ್ನುಪಟ್ಟಿಯಿಂದ ಹೊರಗಿಡಲಾಗಿದೆ. ನುಸುಳುಕೋರರು ಎಂಬ ಆರೋಪಗಳನ್ನು ಮುಂದಿಟ್ಟು ಮತದಾನದ ಹಕ್ಕಿನಿಂದ ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.

ಇಂತಹ ಅಸಂವಿಧಾನಿಕ ಪ್ರಕ್ರಿಯೆಯ ವಿರುದ್ಧ ಎದ್ದೇಳು ಕರ್ನಾಟಕ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಈಗಾಗಲೇ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ್ದರೂ ಸರ್ಕಾರ ಯಾವುದೇ ಗಂಭೀರತೆ ತೋರಲಿಲ್ಲ. ಹಾಗಾಗಿ ಕೊಡಲೆ ಎಸ್ಐಆರ್ ಪ್ರಕ್ರಿಯೆ ನಿಲ್ಲಿಸಿ ಅಥವಾ ಜನಸ್ನೇಹಿ ರೀತಿಯಲ್ಲಿ ಎಸ್‌ಐಆರ್ ಜಾರಿಗೆ ತರಬೇಕು ಎಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಜಿಲ್ಲಾ ವಿಭಾಗದ ಪ್ರಧಾನ ಕಾರ್ಯದರ್ಶಿ ಮಹಮದ್ ನೂರುಲ್ಲಾ, ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಶಾಮೀರ್, ವೆಂಕಟೇಶ್, ದಸಂಸ ತಾಲೂಕು ಸಂಚಾಲಕ ಪರಮೇಶ್, ರಾಜು, ಜೀವಿಕ ಸಂಘಟನೆ ತಾಲೂಕು ಸಂಚಾಲಕ ಶ್ರೀನಿವಾಸ್, ಎಸ್‌ಡಿಪಿಐನ ಮಹಮದ್ ಮುಸ್ತಪಾ, ಅಫ್ ಝಲ್, ಮತ್ತಿತರರು ಇದ್ದರು.

ಕೋಟ್‌....

ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಎಸ್‌ಐಆರ್ ಬಗ್ಗೆ ಎಚ್ಚರಿಕೆ ವಹಿಸಿ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಂಡಿದ್ದವು. ಆದರೆ ಪಶ್ಚಿಮ ಬಂಗಾಳದಲ್ಲಿ ಅಂತಹ ಕ್ರಮ ಕೈಗೊಳ್ಳದ ಕಾರಣ ಲಕ್ಷಾಂತರ ಮತದಾರರು ಮತದಾನದಿಂದ ವಂಚಿತರಾದರು.

ಶ್ರೀರಂಗಾಚಾರಿ. ರಾಜ್ಯ ಖಜಾಂಚಿ. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ.

ಸಿಕೆಬಿ-3 ಸುದ್ದಿಗೋಷ್ಠಿಯಲ್ಲಿ ಶ್ರೀರಂಗಾಚಾರಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಿಷ್ಠ ವೇತನ ಕರಡು ಅಧಿಸೂಚನೆಗೆ ವಿರೋಧ
ಮನುಷ್ಯನ ಸಂಸ್ಕಾರ ತಿದ್ದಿ ತೀಡಲು ಪುಸ್ತಕ ಸಹಕಾರಿ: ಮ.ನಿ.ಪ್ರ. ಮಹಾಂತ ಸ್ವಾಮೀಜಿ