ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಡಳಿತ ಭವನ ಎದುರು ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಮತದಾನದ ಹಕ್ಕನ್ನು ರಕ್ಷಿಸಬೇಕು ಎಂದು ಘೋಷಣೆ ಕೂಗಲಾಯಿತು. ಈಗಾಗಲೇ 13 ರಾಜ್ಯಗಳಲ್ಲಿ ಎಸ್ಐಆರ್ ನಡೆಸಿ 6.5 ಕೋಟಿ ಜನ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಹಾಕಲಾಗಿದೆ. ಇದರಲ್ಲಿ ಕನಿಷ್ಠ 5 ಕೋಟಿ ಅರ್ಹ ಮತದಾರರನ್ನು ಕೈಬಿಡಲಾಗಿದೆ ಎಂದು ಆರೋಪಿಸಿದರು.
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಯಾರ ವಿರೋಧವೂ ಇಲ್ಲ. ಒಂದು ವೇಳೆ ವಿದೇಶಿಯರಿದ್ದರೆ ಅವರಿಗೆ ಮತದಾನದ ಹಕ್ಕು ಕೊಡಿ ಎಂದು ಯಾರೂ ಹೇಳುತ್ತಿಲ್ಲ. ಆದರೆ, ಅರ್ಹರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಕೆಲಸ ನಡೆದಿದೆ ಎಂದು ದೂರಿದರು.ಮತದಾರರ ಪಟ್ಟಿಯಿಂದ ಹೊರಗಿಡುವುದು ಮಾತ್ರವಲ್ಲ. ಅಂತಹವರಿಗೆ ಯಾವುದೇ ಸರಕಾರಿ ಸೌಲಭ್ಯಗಳು ನೀಡಲಾಗುವುದಿಲ್ಲ ಎಂದು ವಿವಿಧ ರಾಜ್ಯಗಳ ಬಿಜೆಪಿಯ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇಂತಹ ಆಘಾತಕಾರಿ ಪ್ರಕ್ರಿಯೆಗೆ ಕರ್ನಾಟಕದಲ್ಲಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದ ಅವರು, ವ್ಯವಸ್ಥಿತವಾಗಿ ಮತದಾನದ ಹಕ್ಕನ್ನು ಕಸಿಯಲಾಗುತ್ತಿದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿದರು.