ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Dec 06, 2024, 08:59 AM IST
5ಎಚ್‌ಪಿಟಿ4-ಹೊಸಪೇಟೆಯಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಹಾಗೂ ಶೋಷಿತರ ಧ್ವನಿ ಸಂಘಟನೆ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಹಾಗೂ ಶೋಷಿತರ ಧ್ವನಿ ಸಂಘಟನೆ ಹಾಗೂ ಹಿಂದೂಪರ ಸಂಘಟನೆಯಿಂದ ಹೊಸಪೇಟೆ ನಗರದ ವಾಲ್ಮೀಕಿ ವೃತ್ತದಲ್ಲಿ ಗುರುವಾರ ಜನಾಂದೋಲನ ಸಭೆ ನಡೆಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹೊಸಪೇಟೆ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಹಾಗೂ ಶೋಷಿತರ ಧ್ವನಿ ಸಂಘಟನೆ ಹಾಗೂ ಹಿಂದೂಪರ ಸಂಘಟನೆಯಿಂದ ನಗರದ ವಾಲ್ಮೀಕಿ ವೃತ್ತದಲ್ಲಿ ಗುರುವಾರ ಜನಾಂದೋಲನ ಸಭೆ ನಡೆಯಿತು.

ನಂತರ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾದೇಶದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿನ ಕಾರಣದಿಂದ ಅಲ್ಲಿನ ಪ್ರಧಾನಿ ಶೇಖ್ ಹಸಿನಾ ಪಲಾಯನ ಮಾಡಿದ್ದಾರೆ. ಈ ನಡುವೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಇಸ್ಕಾನ್ ಮುಖ್ಯಸ್ಥ ಚಿನ್ಮಯ ಕೃಷ್ಣದಾಸ್‌ ಅವರನ್ನು ದೇಶದ್ರೋಹದ ಆರೋಪದಲ್ಲಿ ಬಂಧಿಸಲಾಗಿದೆ. ರಾಷ್ಟ್ರಧ್ವಜದ ಮೇಲೆ ಇಸ್ಕಾನ್ ಧ್ವಜ ಹಾರಿಸಿದ್ದ ಆರೋಪವನ್ನು ಚಿನ್ಮಯ ಕೃಷ್ಣದಾಸ್ ಅವರ ಮೇಲೆ ಹೊರಿಸಲಾಗಿದೆ ಎಂದು ದೂರಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆ ಆಗಬೇಕಿದೆ. ಬಾಂಗ್ಲಾದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಎರಡು ತಿಂಗಳಲ್ಲಿ ಆರು ಸಾವಿರ ದಾಳಿಗಳು ನಡೆದಿವೆ. ಜಗತ್ತನ್ನು ಇಸ್ಲಾಮೀಕರಣ ಮಾಡಬೇಕು ಎಂದು ಹಿಂದುತ್ವದ ನಾಶ ಮಾಡಲು ಪ್ರಯತ್ನಗಳು ನಡೆಯುತ್ತಿವೆ. ಅಲ್ಲಿಯ ಸಂಸ್ಕೃತಿ, ನಾಗರಿಕತೆ, ಪರಂಪರೆ ನಾಶ ಮಾಡಿದೆ. ಭಾರತದ ಹಿಂದೂಗಳಿಗೆ ಇದು ಪಾಠವಾಗಿದೆ. ಭಾರತ ಸರ್ಕಾರವು ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಲಿ, ಹಿಂದೂಗಳ ಸ್ವಾಭಿಮಾನ ರಕ್ಷಣೆಯಾಗಲಿ ಎಂದು ಆಗ್ರಹಿಸಿದರು.

ನಗರದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನಾ ಸಭೆ ನಂತರ ನೆಹರು ಕಾಲನಿ, ಎಂಪಿಎಂಸಿ ಮಾರುಕಟ್ಟೆ, ಸಾಯಿಬಾಬಾ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಅವರಿಗೆ ಮನವಿಪತ್ರ ಸಲ್ಲಿಸಿದರು.

ಸಂಡೂರು ತಾಲೂಕಿನ ಜೋಗದ ದೇವರಕೊಳ್ಳ ಶ್ರೀ ಅನ್ನಪೂರ್ಣೇಶ್ವರಿ ಮಠದ ದಿಗಂಬರ ಶ್ರೀ ರಾಜ ಭಾರತಿ ಸ್ವಾಮೀಜಿ, ದಲಿತ ಹಾಗೂ ಶೋಷಿತರ ಧ್ವನಿ ಸಂಘಟನೆ ಅಧ್ಯಕ್ಷ ಕಟ್ಟಗಿ ರಾಮಕೃಷ್ಣ, ಮುಖಂಡರಾದ ಭೂಪಾಲ್ ಪ್ರಹ್ಲಾದ್ ಶೆಟ್ಟಿ, ಎನ್.ಟಿ. ರಾಜಣ್ಣ, ಕಾಸಟ್ಟಿ ಉಮಾಪತಿ, ಭೋಜ, ಅಶೋಕ್ ಜೀರೆ, ನರಸಿಂಹ ಮೂರ್ತಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ