ಕೊಪ್ಪಳ: ನಗರದ ರೈಲ್ವೆ ಗೇಟ್ 63ಕ್ಕೆ ನಿರ್ಮಾಣ ಮಾಡಲಾಗಿರುವ ಸೇತುವ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಮಾಡುವಂತೆ ಆಗ್ರಹಿಸಿ ರೈಲ್ವೆ ಗೇಟ್ 63 ಮೇಲ್ಸೇತುವೆ ಹೋರಾಟ ಸಮಿತಿ ಗುರುವಾರ ಕೊಪ್ಪಳ ನಗರದಲ್ಲಿ ಪ್ರತಿಭಟನೆ ನಡೆಸಿ ಸಂಸದರ ನಿವಾಸದ ಎದುರು ಧರಣಿ ನಡೆಸಿದರು.
ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸೇತುವ ಕಾಮಗಾರಿ, ಕಳೆದೊಂದುವರೆ ವರ್ಷದ ಹಿಂದೆ ಸೇತುವೆ ನಿರ್ಮಾಣ ಮಾಡಿ ಅದಕ್ಕೆ ಬೇಕಾಗಿರುವ ರಸ್ತೆ ಮಾಡದೆ ಸೇತುವೆ ಬಂದ್ ಮಾಡಿರುವುದರ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ನಗರದ ಹೆದ್ದಾರಿ ಯುದ್ದಕ್ಕೂ ಮೆರವಣಿಗೆಯಲ್ಲಿ ಸಾಗಿ ಕೊಪ್ಪಳ ಬಿ.ಟಿ.ಪಾಟೀಲ್ ನಗರದಲ್ಲಿರುವ ಸಂಸದ ರಾಜಶೇಖರ ಹಿಟ್ನಾಳ ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ ನಿವಾಸದ ಎದುರು ಧರಣಿ ನಡೆಸಿದರು.ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಸಮಸ್ಯೆಯಾಗಿರುವುದು ನಿಜ. ಇದನ್ನು ಇತ್ಯರ್ಥ ಮಾಡುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಬನ್ನಿಮಠ, ಕಾರ್ಯದರ್ಶಿ ಬಸವರಾಜ ಶೀಲವಂತರ, ಎಸ್.ಜಿ.ಹೊಸಭಾವಿ, ಮೋಯಿದ್, ಗೀತಾ ಪಾಟೀಲ್ ಸೇರಿದಂತೆ ಮೊದಲಾದವರು ಇದ್ದರು.
ಮಹಿಳೆಯರ ಆಕ್ರೋಶ: ಸಂಸದ ರಾಜಶೇಖರ ಹಿಟ್ನಾಳ ಎದುರು ಧರಣಿಯಲ್ಲಿ ಭಾಗವಹಿಸಿದ್ದ ನೂರಾರು ಸಂಖ್ಯೆಯ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಮಗೆ ತೀವ್ರ ಸಮಸ್ಯೆಯಾಗುತ್ತದೆ. ಸೇತುವೆ ಕಾಮಗಾರಿ ಪೂರ್ಣಗೊಳಿಸುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಕಿಡಿಕಾರಿದರು.