ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾರ್ಯಕರ್ತರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸಹಾಯಕರಿಗೆ ಮನವಿ ಸಲ್ಲಿಸಿದರು.
೨೦೦೪- ೨೦೦೫ರಲ್ಲಿ ಎಡಪಕ್ಷಗಳ ಬೆಂಬಲದ ಮೇಲೆ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಿತ್ತು. ಈ ಕಾಯ್ದೆಯನ್ನು ಗ್ರಾಮೀಣ ಭಾಗದ ಕೃಷಿ ಕೂಲಿಕಾರರು, ಬಡ ರೈತರು ಹಾಗೂ ಇನ್ನಿತರೆ ಗ್ರಾಮೀಣ ದುಡಿಮೆಗಾರರಲ್ಲಿ ಶೇ.೩೦ ರಷ್ಟು ಜನರು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿದ್ದರು. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದುಹಾಕಿ ಕೇವಲ ಸರ್ಕಾರದ ಅಣತಿಯ ಯೋಜನೆಯಾಗಿ ಹೊಸದಾಗಿ ವಿಕಸಿತ ಭಾರತ ರೋಜ್ಗಾರ್ ಮತ್ತು ಆಜೀವಿಕ ಮಿಷನ್ ಗ್ರಾಮೀಣ ಖಾತರಿ ( ವಿ.ಬಿ.ಜಿ. ರಾಮ್ ಜಿ) ಕಾಯ್ದೆಯನ್ನು ಜಾರಿಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಹೊಸ ಕಾಯ್ದೆಯಿಂದ ಕೂಲಿಕಾರರ ಮೇಲೆ ಹಲವು ದುಷ್ಪರಿಣಾಮಗಳು ಬೀರುತ್ತವೆ. ೧೨೫ ದಿನಗಳ ಕೆಲಸ ಸಿಗುವುದಿಲ್ಲ ಮತ್ತು ಕೆಲಸದಿಂದ ವಂಚಿತರಾಗುತ್ತಾರೆ. ಕೇಂದ್ರ ಸರ್ಕಾರ ಶೇ.೬೦, ರಾಜ್ಯ ಸರ್ಕಾರ ಶೇ.೪೦ರಷ್ಟು ಮೊತ್ತವನ್ನು ಖರ್ಚು ಮಾಡಬೇಕೆಂಬ ಅಂಶಗಳಿಂದ ಕೂಲಿಕಾರರಿಗೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಹಣ ನೀಡಿಲ್ಲವೆಂದು, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವು ಹಣ ಕೊಟ್ಟಿಲ್ಲವೆಂದು ಹೇಳುವ ಮೂಲಕ ಕೂಲಿ ಕಾರ್ಮಿಕರನ್ನು ಕೂಲಿಯಿಂದ ವಂಚಿತರಾಗಿ ಮಾಡುವ ಹುನ್ನಾರವಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾಧ್ಯಕ್ಷ ಬಿ.ಎಂ. ಶಿವಮಲ್ಲಯ್ಯ, ಉಪಾಧ್ಯಕ್ಷ ಆರ್.ರಾಜು, ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಮುಖಂಡರಾದ ವೈ.ಎಸ್. ಶೋಭಾ, ಟಿ.ಪಿ. ಅರುಣ್ ಕುಮಾರ್, ಅಮಾಸಯ್ಯ, ಟಿ.ಎಸ್. ಆನಂದ್, ಅಬ್ದುಲ್ಲಾ, ರಾಮಯ್ಯ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.