ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

KannadaprabhaNewsNetwork | Published : Jan 24, 2024 2:01 AM

ಸಾರಾಂಶ

ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸಂಸದರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸಂಸದರಿಗೆ ಮನವಿ ಸಲ್ಲಿಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಯಾಯಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ, ನಂತರ ಜಿಲ್ಲಾಡಳಿತ ಭವನದ ಆವರಣಕ್ಕೆ ತೆರಳಿ ಅಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸಂಸದ ಶ್ರೀನಿವಾಸಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ಸುಜಾತ ಬಜೆಟ್‌ನಲ್ಲಿ ಐಸಿಡಿಎಸ್‌ಗೆ ಅನುದಾನ ಹೆಚ್ಚಳ ಮತ್ತು ಕನಿಷ್ಠ ವೇತನವನ್ನು ಘೋಷಿಸುವಂತೆ ಒತ್ತಾಯಿಸಿದರು.

ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಕೊಡಲು ಕಾನೂನು ರೂಪಿಸಬೇಕು, ೪೯ ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ ೨೧ ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗೆ, ೩೧ ಸಾವಿರ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಮತ್ತು ಕನಿಷ್ಠ ೧೦ ಸಾವಿರ ಪಿಂಚಣಿ ಕೊಡಬೇಕು ಎಂದು ಆಗ್ರಹಿಸಿದರು,

ಯೋಜನೆಗಳಲ್ಲಿ ದುಡಿಯುವ ಗುತ್ತಿಗೆ, ಒಳಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು. ಹೊಸ ಮೊಬೈಲ್‌ಗಳನ್ನು ಕೊಡಬೇಕು ಮತ್ತು ಮೊಬೈಲ್‌ನಲ್ಲಿ ಮಾಹಿತಿ ಕೊಟ್ಟ ನಂತರ ಪುಸ್ತಕದಲ್ಲಿ ಬರೆಯುವುದನ್ನು ನಿಲ್ಲಿಸಬೇಕು ಎಂದರು.

ಏಪ್ರೀಲ್‌ನಲ್ಲಿ ಸುರ್ಪ್ರೀಂ ಕೋರ್ಟ್ ನೀಡಿರುವ ತೀರ್ಪಿನಂತೆ ಎಲ್ಲ ಅಂಗನವಾಡಿ ನೌಕರರನ್ನು ಉದ್ಯೋಗಸ್ಥರೆಂದು ಪರಿಗಣಿಸಿ ಗ್ರಾಜ್ಯುಟಿ ಕಾಯ್ದೆಯನ್ನು ದೇಶದೆಲ್ಲೆಡೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು..

ವಿದ್ಯುತ್ ರೈಲ್ವೆ ಸೇರಿದಂತೆ ಯಾವುದೇ ಸಾರ್ವಜನಿಕ ವಲಯಗಳ ಖಾಸಗೀಕರಣ ನಿಲ್ಲಬೇಕು. ಕಾರ್ಮಿಕ ಕಾನೂನುಗಳ ಸಂಹಿತೆಗಳಾಗಿ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು.

ರಾಜ್ಯದಲ್ಲಿ ಕೆಲಸದ ಅವಧಿಯ ಹೆಚ್ಚಳ ತಂದಿರುವ ಕಾರ್ಖಾನೆ ಕಾಯ್ದೆ ತಿದ್ದುಪಡಿ ಕೈ ಬಿಡಬೇಕು. ಕೆಲಸದ ಅವಧಿ ಹೆಚ್ಚಿಸುವ ಮಹಿಳೆಯರನ್ನು ರಾತ್ರಿಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ನೀಡುವುದು ಸೇರಿದಂತೆ ಎಲ್ಲ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು.

ರಾಜ್ಯ ಸರ್ಕಾರ ಮ.ಮ.ಇ ೧೪ ಐಸಿಡಿ ೨೦೨೩ ಬೆಂಗಳೂರು ೪/೨/೨೦೨೩ರ ಆದೇಶದ ಪ್ರಕಾರ ನಿವೃತ್ತಿಯಾದ ಅಂಗನವಾಡಿ ನೌಕರರಿಗೆ ಗ್ರಾಜ್ಯುಟಿ ಹಣವನ್ನು ಪಾವತಿಸಬೇಕು. ವಿಧಾನ ಸಭೆ ಚುನಾವಣೆಯಲ್ಲಿ ಕೊಟ್ಟ ಕಾಂಗ್ರೇಸ್‌ನ ೬ ಗ್ಯಾರಂಟಿಯಂತೆ ೧೫ ಸಾವಿರಕ್ಕೆ ವೇತನ ಹೆಚ್ಚಳ ಮತ್ತು ೩-೨ ಲಕ್ಷ ರು. ಗಳ ನಿವೃತ್ತಿ ಸೌಲಭ್ಯವನ್ನು ನೀಡಬೇಕು ಎಂದು ಆಗ್ರಹಿಸಿದರು.

ಆರು ವರ್ಷದ ಮಕ್ಕಳು ಅಂಗನವಾಡಿ ಫಲಾನುಭವಿಗಳಾಗಿರುವುದರಿಂದ ಅವೈಜ್ಞಾನಿಕ ಕೂಸಿನ ಮನೆಯ ಅಗತ್ಯತೆ ಇಲ್ಲ. ಇದರಿಂದ ಸರ್ಕಾರಕ್ಕೆ ಹೆಚ್ಚುವರಿ ವೆಚ್ಚ ಮತ್ತು ಎರಡು ಕಡೆ ಫಲಾನುಭವಿಗಳಾಗುತ್ತಾರೆ. ಆದ್ದರಿಂದ, ಕೂಸಿನ ಮನೆ ರದ್ದು ಮಾಡಬೇಕೆಂದು ಒತ್ತಾಯಿಸಿದರು

ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ. ಪೂರ್ವ ಪ್ರಾಥಮಿಕ ಶಿಕ್ಷಣ ಗರ್ಭಿಣಿ-ಬಾಣಂತಿಯರ ಆರೈಕೆ ಹೊರತುಪಡಿಸಿ ಉಳಿದ ಕೆಲಸಗಳನ್ನು ನಿರ್ಬಂಧಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ನೀಡಿ, ಖಾಲಿ ಹುದ್ದೆಗಳಿಗೆ ೩ ತಿಂಗಳೊಳಗೆ ನೇಮಕಾತಿಯಾಗಬೇಕು. ಇಲ್ಲದಿದ್ದರೆ ಹೆಚ್ಚುವರಿ ವೇತನ ಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಎ. ನಾಗಮಣಿ ಪದಾಧಿಕಾರಿಗಳಾದ ಶಾಯಿದಬಾನು, ಪಾರ್ವತಮ್ಮ, ಶಾಂತಮ್ಮ, ಭಾಗ್ಯ, ಸುಜಿಯಾ, ತುಳಸಮ್ಮ, ಮೀನಾಕ್ಷಿ, ಗುರುಮಲ್ಲಮ್ಮ, ಜಯಮಾಲ, ಗುರುಲಿಂಗಮ್ಮ, ಸುಮಿತ್ರ, ಇತರರು ಭಾಗವಹಿಸಿದ್ದರು.

Share this article