ಬಜರಂಗದಳ ವತಿಯಿಂದ ಪ್ರತಿಭಟನೆ

KannadaprabhaNewsNetwork | Published : Apr 23, 2024 12:51 AM

ಸಾರಾಂಶ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಹಾಗೂ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಹಾಗೂ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕೆಲ ಕಾಲ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಬಸವರಾಜು ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ವಿಶ್ವಹಿಂದೂ ಪರಿಷತ್, ರಾ.ಸತೀಶ್ ಮತ್ತು ಭಜರಂಗದಳದ ಪೃಥ್ವಿರಾಜ್‌, ರಾಜ್ಯದಲ್ಲಿ ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಹಿಂದೂ ಸಮಾಜದ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿರುವರನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್‌ ಸರ್ಕಾರ ಅಧಿಕಾರ ವಹಿಸಿಕೊಂಡ ದಿನದಿಂದಲೂ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಹನುಮಾನ್ ಚಾಲೀಸಾ ಹಾಕಿದ್ದಾರೆಂದು ಕೆಲವು ಮುಸ್ಲಿಂ ಯುವಕರಿಂದ ನುಗ್ಗಿ ಮನಸೋ ಇಚ್ಛೆ ಹಲ್ಲೆ ಮಾಡಿದ್ದರು. ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ, ರಾಮನವಮಿ ಆಚರಣೆಗೆ ಕಾರಿನಲ್ಲಿ ಹೋಗುತ್ತಿದ್ದ ಹಿಂದೂಗಳನ್ನು ಜೈ ಶ್ರೀರಾಮ ಅಲ್ಲ, ಅಲ್ಲಾ ಹು ಅಕ್ಟರ್‌ ಎನ್ನಬೇಕೆಂದು ಹಲ್ಲೆ ನಡೆಸಿದ್ದರು. ಹಿಂದೂ ಕಾರ್ಯಕರ್ತನ ಮೇಲೆ ಕಾರು ಹರಿಸಿ ಹತ್ಯೆ ಗೈದಿದ್ದರು. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಎಂಬ ಹಿಂದೂ ಹೆಣ್ಣು ಮಗಳನ್ನು ಫಯಾಸ್ ಎಂಬ ಮತಾಂಧ ಬರ್ಬರವಾಗಿ ಹತ್ಯೆ ಮಾಡಿದ್ದ. ಬೆಂಗಳೂರಿನ ಪ್ರೇಜರ್‌ ಟೌನ್‌ನಲ್ಲಿ ಚಲನಚಿತ್ರ ನಟಿ ಹರ್ಷಿಕಾ ಪೂಣಚ್ಚ ಮತ್ತು ಕುಟುಂಬದವರ ಮೇಲೆ ಹಲ್ಲೆ ಮಾಡಿದಕ್ಕೆ ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆಯೇ ಕಾರಣ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಮಧುಜೀ, ಚೆನ್ನಿಗಣ್ಣ, ರಮೇಶ್‌ ನಾಯಕ, ಬಾಲಸುಬ್ರಹ್ಮಣ್ಯಂ, ಬಂಗಾರು, ಮಣಿಕಂಠ, ವೆಂಕಿ, ಶ್ರೀನಿವಾಸ್, ಅನಿಲ್, ವಿನೋದ್, ರಾಜೇಶ್, ಶ್ರೇಯಸ್, ಚಂದ್ರುಚೇತನ್‌ ಇತರರು ಭಾಗವಹಿಸಿದ್ದರು.

Share this article