ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ, ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಕೃತಿ ದಹನ ಮಾಡಿ ಆಕ್ರೋಶ
ಕನ್ನಡಪ್ರಭ ವಾರ್ತೆ ಕೊಪ್ಪಳ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ, ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ ಮಾತನಾಡಿ, ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ನಿಂತು ದಲಿತರ ಮೀಸಲಾತಿ ತೆಗೆಯುತ್ತೇವೆ ಎಂದು ಹೇಳಿಕೆ ನೀಡಿರುವುದು ಖಂಡನೀಯವಾಗಿದೆ. ಇದು ಅಕ್ಷಮ್ಯ ಅಪರಾಧವಾಗಿದೆ ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿಯು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕು ಅಂದರೆ ಜಿಲ್ಲಾ ಕೇಂದ್ರವಾದ ಕೊಪ್ಪಳ ನಗರದಲ್ಲಿ ಅವರ ಕಚೇರಿಯೂ ಸಹಿತ ಇಲ್ಲ. ಕೊಪ್ಪಳದಲ್ಲಿ ಇವರಿಗೆ ನೆಲೆಯಿಲ್ಲ. ಇಂತಹ ಪಕ್ಷದ ನಾಯಕ ವಿದೇಶಿ ನೆಲದಲ್ಲಿ ಕುಳಿತು ದಲಿತರ ಮೀಸಲಾತಿ ತೆಗೆಯುವೆವು ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಮಾತನಾಡಿ, ರಾಹುಲ್ ಗಾಂಧಿ ಅಮೇರಿಕಾದಲ್ಲಿ ಕುಳಿತು ಮುಂದೆ ಭಾರತದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿ ತೆಗೆಯುತ್ತೇನೆ ಎನ್ನುವುದು ಎಷ್ಟರ ಮಟ್ಟಿಗೆ ಸರಿ, ಇಂತವರು ಲೋಕಸಭಾ ಸದಸ್ಯರಾಗಿರಲು ಅನರ್ಹರಾಗಿದ್ದಾರೆ. ಲೋಕಸಭೆ ಸಭಾಪತಿಗಳು ರಾಹುಲ್ ಗಾಂಧಿ ಅವರನ್ನು ಸ್ಥಾನದಿಂದ ಅನರ್ಹ ಮಾಡಬೇಕು. ಅವರ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ರಾಹುಲ್ ಗಾಂಧಿಗೆ ದಲಿತ ಹಾಗೂ ದೇಶ ವಿರೋಧಿ ನೀತಿ ರಕ್ತಗತವಾಗಿದೆ. ಬೇರೆ ದೇಶಕ್ಕೆ ಹೋಗಿ ಭಾರತ ಮಾತೆಯ ಬಗ್ಗೆ ಹಗುರವಾಗಿ ಮಾತನಾಡುವುದು ತಪ್ಪು ಎಂದರು.
ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿದರು.
ರಾಹುಲ್ ಗಾಂಧಿಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವರಾಜ ದಡೇಸಗೂರು, ನಗರಸಭೆ ಮಾಜಿ ಸದಸ್ಯ ಪ್ರಾಣೇಶ ಮಾದಿನೂರು, ಪ್ರದೀಪ್ ಹಿಟ್ನಾಳ, ತಾಪಂ ಮಾಜಿ ಸದಸ್ಯ ವೀರೇಶ ಸಜ್ಜನ, ಮುಖಂಡರಾದ ಗಣೇಶ ಹೊರತಟ್ನಾಳ್, ಕೀರ್ತಿ ಪಾಟೀಲ್, ಹುಲಗಪ್ಪ ಕಟ್ಟಿಮನಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.