ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ಕಮಲ ಪಡೆಯ ಮುಖಂಡರು- ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ, ಮಾನವಸರಪಳಿ ರಚಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಮಾತನಾಡಿ, ನೀಟ್ ಪರೀಕ್ಷೆ ಸೋರಿಕೆಗೆ ಕಾರಣರಾದವರನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ನೀಟ್ ಮರುಪರೀಕ್ಷೆ ನಡೆಸಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿದೆ. ದೇಶದಲ್ಲಿ ಕಾಂಗ್ರೆಸ್ ವಿರೋಧ ಪಕ್ಷವಾಗಿದ್ದುಕೊಂಡು ಸಿಜೆಪಿ ನಡೆಸುತ್ತಿರುವ ಹೋರಾಟದಲ್ಲಿ ಪಾಲ್ಗೊಂಡಿರುವುದು ನಾಚಿಕೆಗೇಡಿನ ವಿಚಾರ ಎಂದು ಟೀಕಿಸಿದರು.ಸಿಜೆಪಿ ಪಕ್ಷದವರನ್ನು ಈಗಾಗಲೇ ಕೇಂದ್ರ ಸರ್ಕಾರ ಮೂರು ಬಾರಿ ಮಾತುಕತೆಗೆ ಆಹ್ವಾನಿಸಿದೆ. ಮುಕ್ತ ಚರ್ಚೆಗೆ ಸದನದಲ್ಲಿ ಅವಕಾಶ ನೀಡಿದೆ. ಮಾತುಕತೆಗೂ ಹೋಗದೆ ಸದನವನ್ನು ಸುಗಮವಾಗಿ ನಡೆಯಲೂ ಬಿಡದೆ ವಿನಾಕಾರಣ ಕಾಂಗ್ರೆಸ್ನವರು ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಂಡು ಎನ್ಡಿಎ ಸರ್ಕಾರದ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ದೂರಿದರು.
ಉಗ್ರ ಸಂಘಟನೆಯವರು ಪರೋಕ್ಷವಾಗಿ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಇದು ವಿದ್ಯಾರ್ಥಿಗಳ ಪರವಾದ ಹೋರಾಟದಂತೆ ಕಂಡುಬರುತ್ತಿಲ್ಲ. ಮೋದಿ ಸರ್ಕಾರದ ವಿರುದ್ಧ ಹೋರಾಟದ ಹಿಂದೆ ನಿಂತು ಒಳಸಂಚು ನಡೆಸುತ್ತಿರುವುದು ಕಂಡುಬರುತ್ತಿದೆ. ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದರು.
ಪ್ರತಿಭಟನೆಯಲ್ಲಿ ಮುಖಂಡರಾದ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ಗೌಡ, ಎಸ್.ಪಿ.ಸ್ವಾಮಿ, ಶ್ರೀಧರ್, ಅಶೋಕ್ ಜಯರಾಂ, ವಿದ್ಯಾನಾಗೇಂದ್ರ, ಶಿವಕುಮಾರ ಕೆಂಪಯ್ಯ, ಎಂ.ಕೆ.ನಾಗಾನಂದ್, ಬಿ.ಸಿದ್ದರಾಜು ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.