ಸ್ಲಂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ: ಎಚ್ಚರಿಕೆ

KannadaprabhaNewsNetwork |  
Published : Apr 04, 2026, 02:15 AM IST
ಪದಾಧಿಕಾರಿಗಳು ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಗದಗ- ಬೆಟಗೇರಿ ನಗರದಲ್ಲಿ 80ಕ್ಕೂ ಹೆಚ್ಚು ಕೊಳಗೇರಿಗಳಿದ್ದು, ಇದರಲ್ಲಿ 48 ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಅಡಿಯಲ್ಲಿ ಘೋಷಿಸಲಾಗಿದೆ.

ಗದಗ: ನಗರದ ಘೋಷಿತ ಹಾಗೂ ಅಘೋಷಿತ ಕೊಳಗೇರಿ ಪ್ರದೇಶಗಳ ಅಭಿವೃದ್ಧಿಯಲ್ಲಿ ನಗರಸಭೆಯು ತೋರುತ್ತಿರುವ ತಾರತಮ್ಯ ನೀತಿಯನ್ನು ಖಂಡಿಸಿ, ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿಯ ಪದಾಧಿಕಾರಿಗಳು ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಲಂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಮಾನ್ವಿ ಅವರು, ಗದಗ- ಬೆಟಗೇರಿ ನಗರದಲ್ಲಿ 80ಕ್ಕೂ ಹೆಚ್ಚು ಕೊಳಗೇರಿಗಳಿದ್ದು, ಇದರಲ್ಲಿ 48 ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಅಡಿಯಲ್ಲಿ ಘೋಷಿಸಲಾಗಿದೆ. ಆದರೆ, ಘೋಷಣೆಯಾಗಿ ದಶಕಗಳೇ ಕಳೆದರೂ ಈ ಭಾಗದಲ್ಲಿ ರಸ್ತೆ, ಚರಂಡಿ, ಬೀದಿದೀಪ ಹಾಗೂ ಕುಡಿಯುವ ನೀರಿನಂತಹ ಕನಿಷ್ಠ ಸೌಲಭ್ಯ ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ.

2014ರಿಂದ ವಸತಿಗಾಗಿ ಹೋರಾಟ ನಡೆಸುತ್ತಿದ್ದರೂ ನಗರಸಭೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ 348 ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ. 2019ರಲ್ಲಿಯೇ ಶಾಸಕರಿಂದ ಮಂಜೂರಾತಿ ಪತ್ರ ಪಡೆದ ನೈಜ ಫಲಾನುಭವಿಗಳನ್ನು ಕೈಬಿಟ್ಟು, ಅನರ್ಹರಿಗೆ ಮನೆ ನೀಡಲಾಗಿದೆ ಎಂದರು.

ಮಹಿಳಾ ಸಮಿತಿ ಅಧ್ಯಕ್ಷೆ ಪರವೀಬಾನು ಹವಾಲ್ದಾರ್ ಮಾತನಾಡಿ, ಸ್ವಚ್ಛ ಭಾರತ ಯೋಜನೆಯಡಿ ಕೋಟ್ಯಂತರ ರೂಪಾಯಿ ಅನುದಾನ ಬಂದಿದ್ದರೂ ಸ್ಲಂ ಪ್ರದೇಶದ ಮಹಿಳೆಯರಿಗೆ ಶೌಚಾಲಯ ನಿರ್ಮಿಸಿಲ್ಲ. ಇಂದಿಗೂ ಸಾವಿರಾರು ಮಹಿಳೆಯರು ಬಯಲು ಶೌಚಾಲಯ ಅವಲಂಬಿಸುವಂತಾಗಿರುವುದು ನಗರಸಭೆಗೆ ನಾಚಿಕೆಗೇಡಿನ ಸಂಗತಿ ಎಂದರು.

ಮುಖಂಡ ಶರಣಪ್ಪ ಸೂಡಿ ಮಾತನಾಡಿ, 2026- 27ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡದಿದ್ದರೆ ಸಾವಿರಾರು ನಿವಾಸಿಗಳೊಂದಿಗೆ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಶೋಕ ಕುಸಬಿ, ಅಶೋಕ ಕುಡತಿನ್ನಿ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಫೈರುಜಾ ನಾಗನೂರ, ಶಿವಪ್ಪ ಹಾತಲಗೇರಿ, ಮೆಹಬೂಬಸಾಬ ಬಳ್ಳಾರಿ, ಖಾಜಾಸಾಬ ಇಸ್ಮಾಯಿಲನವರ, ಗೌಸಸಾಬ ಅಕ್ಕಿ, ಸಾಕ್ರುಬಾಯಿ ಗೋಸಾವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಷ್ಟಗಿಯಿಂದ ಬೆಂಗಳೂರಿಗೆ ರೈಲ್ವೆ ಓಡಿಸಲು ಮನವಿ
ಡಾ. ಆರ್.ಕೆ. ಕುಲಕರ್ಣಿ ಆರೋಗ್ಯ ಸೇವೆ ಸದಾ ಸ್ಮರಣೀಯ: ಅಶುತೋಷ್ ಕುಮಾರ್ ರಾಯ್