ನ್ಯಾಷಿನಲ್ ಹೆರಾಲ್ಡ್ ಪ್ರಕರಣ ಕೇವಲ ಕಾನೂನು ಪ್ರಕ್ರಿಯೆ ಅಲ್ಲ, ಬಿಜೆಪಿಯ ಸೇಡಿನ ರಾಜಕಾರಣವಾಗಿ ಮಾರ್ಪಟ್ಟಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಕೇಂದ್ರ ಬಿಜೆಪಿ ಸರ್ಕಾರ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ವಶಪಡಿಸಿಕೊಂಡು ಸೋನಿಯಾ ಹಾಗೂ ರಾಹುಲ್ ಗಾಂಧಿ ವಿರುದ್ಧ ಕೊಟ್ಟಿ ದಾಖಲೆ ಸೃಷ್ಟಿಸಿ ಸೇಡಿನ ರಾಜಕಾರಣ ಮಾಡಲು ಹೊರಟಿರುವುದೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹಾಗೂ ಕಾಂಗ್ರೆಸ್ ವಿರುದ್ಧ ಸೇಡಿನ ರಾಜಕಾರಣ ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದೆ. ಬಡವರು, ಕೂಲಿ ಕಾರ್ಮಿಕರು ಸರ್ಕಾರದ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದರೆ, ವ್ಯಾಪಾರಿಗಳು ಜಿಎಸ್ಟಿ ಬರೆಗೆ ಸೋತು ಸುಣ್ಣವಾಗಿದ್ದಾರೆ. ಸರ್ಕಾರ ಬೆಲೆ ಏರಿಕೆ, ಉದ್ಯೋಗ ಸೃಷ್ಟಿ, ಬಡತನ ನಿರ್ಮೂಲನೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡುವುದನ್ನು ಬಿಟ್ಟು ಕಾಂಗ್ರೆಸ್ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯವಾದಿ ಕೆ.ಎಫ್.ಅಂಕಲಗಿ ಮಾತನಾಡಿ, ನ್ಯಾಷಿನಲ್ ಹೆರಾಲ್ಡ್ ಪ್ರಕರಣದ ಮೂಲಕ ಕಾಂಗ್ರೆಸ್ ನಾಯಕರನ್ನು ಇದೊಂದು ರಾಜಕೀಯ ಪ್ರೇರಿತ, ಉದ್ದೇಶಪೂರ್ವಕ ಗುರಿಯಾಗಿಸಲಾಗಿದೆ. ವಿರೋಧ ಪಕ್ಷದ ಧ್ವನಿಯನ್ನು ಅಡಗಿಸಲು ಬಿಜೆಪಿ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಾ ಇದೆ. ನಮಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ನಾವು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇವೆ ಎಂದು ಗುಡುಗಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.