ಕನ್ನಡಪ್ರಭ ವಾರ್ತೆ ಬೇಲೂರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಬಳಿಕ ಮೈದಾನದಲ್ಲಿ ಶುದ್ಧೀಕರಣ ಹೋಮ ನಡೆಸಿದ ಘಟನೆಯನ್ನು ಖಂಡಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ಶಿವರಾಂ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದರು. ಅಂಬೇಡ್ಕರ್ ಅವರು ಸ್ವತಃ ಅಸ್ಪೃಶ್ಯತೆಯನ್ನು ಅನುಭವಿಸಿ, ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಸಂವಿಧಾನದಲ್ಲಿ ಅಸ್ಪೃಶ್ಯತೆ ನಿವಾರಣೆಗಾಗಿ ವಿಧಿಗಳನ್ನು ತಂದರು. ಆದರೆ ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಹ ಹಿರಿಯ ನಾಯಕರು ಹಾಗೂ ದಲಿತ ಸಮುದಾಯದ ನಾಯಕರಿಗೆ ಅವಮಾನವಾಗುವ ರೀತಿಯ ಘಟನೆಗಳು ನಡೆದಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುವ ಇಂತಹ ಕೃತ್ಯಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಈ ರೀತಿ ಅವಮಾನವಾದರೆ ನಮ್ಮಂತಹ ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಏನು ಎನ್ನುವುದನ್ನು ನಾವು ಪ್ರಧಾನಿ ಮೋದಿ ಅವರಿಗೆ ಪ್ರಶ್ನೆ ಮಾಡುತ್ತಿದ್ದೇವೆ. ನಿಮಗೆ ನಿಜವಾಗಲೂ ಜನಸಾಮಾನ್ಯರ ಮೇಲೆ ಕಾಳಜಿ ಇದ್ದರೆ, ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂಬ ಭಾವನೆ ಇದ್ದರೆ, ಈ ಲೋಪ ಮಾಡಿದವರಿಗೆ ಕಠಿಣ ಶಿಕ್ಷೆ ಕೊಡುವ ಮೂಲಕ ಇಡೀ ರಾಷ್ಟ್ರಕ್ಕೆ ಸಹಬಾಳ್ವೆಯ ಸಂದೇಶ ಕೊಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ ಆರ್ ವೆಂಕಟೇಶ್, ಪುರಸಭಾ ಅಧ್ಯಕ್ಷ ಅಕ್ರಂ, ಬೇಲೂರು ಹಳೇಬೀಡು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ತೌಫಿಕ್, ಪುರಸಭಾ ಸದಸ್ಯರಾದ ಜಮಾಲ್, ಕೆಡಿಪಿ ಸದಸ್ಯ ಚೇತನ್ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.