ಒಂದು ಟನ್ ಕಬ್ಬಿಗೆ ₹5,500 ದರ ನಿಗದಿಗೆ ಆಗ್ರಹಿಸಿ ಹೋರಾಟ

KannadaprabhaNewsNetwork |  
Published : Sep 03, 2026, 02:15 AM IST
ಹಾವೇರಿ ತಾಲೂಕಿನ ಹೊಸರಿತ್ತಿಯಲ್ಲಿ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ಹೊಸರಿತ್ತಿ ಭಾಗದ ಕಬ್ಬು ಬೆಳೆಗಾರರು ಸಾಂಕೇತಿಕ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟುವುದು, ಕಬ್ಬಿನ ರಿಕವರಿಯಲ್ಲಿ ಸಕ್ಕರೆ ಕಾರ್ಖಾನೆಗಳು ನಡೆಸುತ್ತಿರುವ ವಂಚನೆಗೆ ಕಡಿವಾಣ ಹಾಕುವುದು ಹಾಗೂ ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ₹5,500 ದರ ನಿಗದಿಪಡಿಸುವಂತೆ ಒತ್ತಾಯಿಸಿ ಹೋರಾಟ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕ ನಿರ್ಧರಿಸಿತು.

ಹಾವೇರಿ: ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟುವುದು, ಕಬ್ಬಿನ ರಿಕವರಿಯಲ್ಲಿ ಸಕ್ಕರೆ ಕಾರ್ಖಾನೆಗಳು ನಡೆಸುತ್ತಿರುವ ವಂಚನೆಗೆ ಕಡಿವಾಣ ಹಾಕುವುದು ಹಾಗೂ ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ₹5,500 ದರ ನಿಗದಿಪಡಿಸುವಂತೆ ಒತ್ತಾಯಿಸಿ ಹೋರಾಟ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕ ನಿರ್ಧರಿಸಿತು.

ತಾಲೂಕಿನ ಹೊಸರಿತ್ತಿ ಗ್ರಾಮದಲ್ಲಿ ಮಂಗಳವಾರ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ನೇತೃತ್ವದಲ್ಲಿ ಸುತ್ತಲಿನ 20ಕ್ಕೂ ಹೆಚ್ಚು ಗ್ರಾಮಗಳ ಕಬ್ಬು ಬೆಳೆಗಾರರ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಜಿಲ್ಲೆಯ ಪ್ರತಿಯೊಂದು ಹೋಬಳಿಯಲ್ಲಿ ರೈತರ ಸಭೆ ನಡೆಸಿ, ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಸಂಘಟಿಸಿ ಹೋರಾಟ ರೂಪಿಸಲು ನಿರ್ಧರಿಸಲಾಯಿತು.

ಕಬ್ಬಿನ ರಿಕವರಿಯಲ್ಲಿ ಕಾರ್ಖಾನೆಗಳು ಪದೇ ಪದೇ ಮೋಸ ಮಾಡುತ್ತಿವೆ. ಸರ್ಕಾರದ ಆದೇಶವಿದ್ದರೂ ರೈತರಿಗೆ ಸರಿಯಾಗಿ ಹಣ ಪಾವತಿಸುತ್ತಿಲ್ಲ. ರಿಕವರಿ ಪ್ರಮಾಣದ ಕುರಿತು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಈ ವರ್ಷವೂ ಕಬ್ಬಿನ ಬೆಲೆ ಕಡಿಮೆ ಮಾಡುವ ಹುನ್ನಾರ ನಡೆಯುತ್ತಿದೆ ಎಂಬುದು ರೈತರ ಆರೋಪವಾಗಿದೆ. ಇದನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಹೊಸರಿತ್ತಿ, ಕೊರಡೂರು, ಕೊಡಬಾಳ, ಮರೋಳ, ನೆಗಳೂರು, ನೀರಲಗಿ, ಬೆಳವಿಗಿ, ಗುಯಿಲಗುಂದಿ, ಮೇಲ್ಮುರಿ, ಕಲಿವಾಳ, ಚೆನ್ನೂರು, ಕೆಸರಹಳ್ಳಿ, ಕೋಣನತಂಬಗಿ, ಮಣ್ಣೂರು, ಹಳೇರಿತ್ತಿ, ಕಡಕೋಳ, ಕಿತ್ತೂರು, ಮರಡೂರು, ಹಾಲಗಿ ಸೇರಿದಂತೆ ಹಲವು ಗ್ರಾಮಗಳ 300ಕ್ಕೂ ಹೆಚ್ಚು ಕಬ್ಬು ಬೆಳೆಗಾರರು ಪಾಲ್ಗೊಂಡಿದ್ದರು.ರೈತರ ಪ್ರಮುಖ ಬೇಡಿಕೆಗಳು: ಕಬ್ಬು ಬೆಳೆಗೆ ವಿಮಾ ಸೌಲಭ್ಯ ಕಲ್ಪಿಸಬೇಕು. ಎಲ್ಲ ಸಕ್ಕರೆ ಕಾರ್ಖಾನೆಗಳ ಎದುರು ಸರ್ಕಾರದ ವತಿಯಿಂದ ತೂಕದ ಯಂತ್ರ ಅಳವಡಿಸಬೇಕು. ಬೆಳಗಾವಿಯ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಮಾದರಿಯಲ್ಲಿ ಹಾವೇರಿ ಜಿಲ್ಲೆಯಲ್ಲಿ ರಿಕವರಿ ಲ್ಯಾಬ್ ಸ್ಥಾಪಿಸಬೇಕು. ಕಬ್ಬಿನ ರಿಕವರಿ ಪ್ರಮಾಣವನ್ನು ಹಿಂದಿನಂತೆ ಶೇ. 10.25ಕ್ಕೆ ತರಬೇಕು. ಕಬ್ಬು, ಭತ್ತ, ಮೆಕ್ಕೆಜೋಳದಿಂದ ಎಥನಾಲ್ ಉತ್ಪಾದನೆಗೆ ಆಲೆಮನೆಗಳಿಗೂ ಅವಕಾಶ ನೀಡಬೇಕು. ಆಲೆಮನೆಗಳಲ್ಲಿ ಉತ್ಪಾದನೆಯಾಗುವ ಎಥನಾಲ್‌ನ್ನು ಸರ್ಕಾರ ರೈತರಿಂದ ಖರೀದಿಸುವ ವ್ಯವಸ್ಥೆ ಮಾಡಬೇಕು. ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳನ್ನು ನವೆಂಬರ್ 1ರ ನಂತರ ಆರಂಭಿಸಬೇಕು. ಪ್ರಸಕ್ತ ಸಾಲಿನ ಎಫ್‌ಆರ್‌ಪಿ ದರ ₹3,650 ರು. ಇದ್ದು, ಇದರ ಮೇಲೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹800 ನೀಡಬೇಕು. ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಹಣವನ್ನು ಕೂಡಲೇ ರೈತರಿಗೆ ಪಾವತಿಸಬೇಕು ಎಂಬುದು ಕಬ್ಬು ಬೆಳೆಗಾರರ ಪ್ರಮುಖ ಬೇಡಿಕೆಯಾಗಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯುತ್ ನಿಯಮ ತಿದ್ದುಪಡಿ ಕೈಬಿಡಲು ಆಗ್ರಹ
ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಕ್ರೀಡೆ ಪೂರಕ: ಸುನೀಲ ಮಹಾಂತಶೆಟ್ಟರ