ವಿವಿಧ ಸಂಘಟನೆ ನೇತೃತ್ವದಲ್ಲಿ ಹರಪನಹಳ್ಳಿಯಲ್ಲಿ ಎತ್ತಿನ ಗಾಡಿ ಮೆರವಣಿಗೆ
ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಹಾಗೂ ಸಿಪಿಐಎಂಎಲ್ ನೇತೃತ್ವದಲ್ಲಿ ಪಟ್ಟಣದಲ್ಲಿ ಎತ್ತಿನಗಾಡಿ ಮೆರವಣಿಗೆ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಹರಿಹರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಮಿನಿ ವಿಧಾನಸೌಧದ ವರೆಗೆ ತೆರಳಿ ಆನಂತರ ಉಪವಿಭಾಗಾಧಿಕಾರಿ ಹಾಗೂ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ಹರಪನಹಳ್ಳಿ ತಾಲೂಕು ಸೇರಿದಂತೆ ಜಿಲ್ಲೆಯ ಹೂವಿನಹಡಗಲಿ, ಕೊಟ್ಟೂರು ತಾಲೂಕುಗಳಲ್ಲಿ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಎಗ್ಗಿಲ್ಲದೇ ಡೊನೇಷನ್ ಹಾವಳಿ ನಡೆಯುತ್ತಿದ್ದು, ಇದನ್ನು ತಡೆಗಟ್ಟಬೇಕು. ಅನುದಾನ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿ ಶುಲ್ಕ ಫಲಕವನ್ನು ಅಳವಡಿಸಬೇಕು ಎಂದು ಆಗ್ರಹಿಸಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಶಾಲಾ, ಕಾಲೇಜುಗಳು ವಿಫಲವಾಗಿದ್ದು, ನುರಿತ ಉಪನ್ಯಾಸಕರು, ಶಿಕ್ಷಕರನ್ನು ನೇಮಕ ಮಾಡಿ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂಎಲ್ನ ಜಿಲ್ಲಾ ಕಾರ್ಯದರ್ಶಿ ಸಂದೇರ ಪರಶುರಾಮ, ಎಐಎಸ್ಎ ರಾಜ್ಯ ಸಮಿತಿ ಸದಸ್ಯ ಸಂತೋಷ, ಮುಖಂಡರಾದ ಹುಲಿಕಟ್ಟಿ ಮೈಲಪ್ಪ, ಬಾಲಗಂಗಾಧರ, ಇಬ್ರಾಹಿಂ, ಮಂಗಳಮ್ಮ, ಅಂಜಲಿ, ರೂಪಾ, ಮೋಹನ್, ಫಕೀರಪ್ಪ ಇದ್ದರು.