ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಆಗಮಿಸಿದ ದಸಂಸ ಮುಖಂಡರು ಕಾಂಗ್ರೆಸ್ ಪಕ್ಷ, ಹೈಕಮಾಂಡ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಬಂದಾಗಿನಿಂದ ಕಳೆದ 79 ವರ್ಷಗಳಿಂದಲೂ ದಲಿತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಮತ ಹಾಕುತ್ತಾ ಬಂದಿದ್ದಾರೆ. ಆದರೆ, ಸಿಎಂ ಆಗುವ ಹಲವು ಅವಕಾಶಗಳು ಇದ್ದರೂ ದಲಿತರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡದೇ ಪಕ್ಷ ವಂಚಿಸುತ್ತಲೇ ಬಂದಿದೆ ಕಿಡಿಕಾರಿದರು.ರಾಜ್ಯವನ್ನು ಕಾಂಗ್ರೆಸ್ ಪಕ್ಷ ಹೆಚ್ಚಾಗಿ ಆಳಿದೆ. ಆದರೆ, ಹಿರಿಯ ನಾಯಕರಾದ ಬಸವಲಿಂಗಪ್ಪ, ರಾಚಯ್ಯ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ್ದಾರೆ. ಈಗ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ವಂಚಿಸಲಾಗುತ್ತಿದೆ ಎಂದು ದೂರಿದರು.
ಕೇಂದ್ರ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿರುವ ಎಐಸಿಸಿ ಅಧ್ಯಕ್ಷ ಸ್ಥಾನವು ಯಾವುದೇ ಅಧಿಕಾರವಿಲ್ಲದ, ಪ್ರಯೋಜನಕ್ಕೆ ಬಾರದ ಹುದ್ದೆಯಾಗಿದೆ. ಕೂಡಲೇ ಎಸ್ಸಿ, ಎಸ್ಟಿ ಸಮುದಾಯಗಳಲ್ಲಿ ಯಾರೇ ಆದರೂ ಅವರಿಗೆ ಸಿಎಂ ಸ್ಥಾನ ಕೊಡದಿದ್ದರೆ ರಾಜ್ಯಾದ್ಯಂತ ದಲಿತರು ತಮ್ಮ ಶಕ್ತಿ ತೋರಿಸುತ್ತಾರೆ ಎಂದು ಎಚ್ಚರಿಸಿದರು.
ಪ್ರತಿ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಶೇ.70ರಷ್ಟು ದಲಿತರ ಮತಗಳನ್ನು ಪಡೆದು ದಲಿತರಿಗೆ ಅಧಿಕಾರ ನೀಡದೆ ಮೋಸ ಮಾಡುತ್ತಿದೆ. ರಾಹುಲ್ ಗಾಂಧಿ ಸಂವಿಧಾನ ಪರ ಎಂದು ಹೇಳುತ್ತಿರುತ್ತಾರೆ. ಆದರೆ, ಅಸ್ಪೃಶ್ಯರಂತೆ ಕಾಣುತ್ತಿದ್ದಾರೆ. ಸಿಎಲ್ ಪಿ ಸಭೆಯಲ್ಲಿ ದಲಿತ ಸಿಎಂ ಆಯ್ಕೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಾಠ ಕಲಿಸುವ ಜೊತೆಗೆ ಯಾವ ನಾಯಕರು ದಲಿತರ ಮತಗಳನ್ನು ಕೇಳದಂತೆ ಜನಾಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಲಕ್ಷ್ಮಣ್ ಚೀರನಹಳ್ಳಿ, ನರಸಿಂಹಮೂರ್ತಿ, ಎಂ.ವಿ.ಕೃಷ್ಣ, ಅಂದಾನಿ ಸೋಮನಹಳ್ಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.