ಕೊಪ್ಪಳ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿ ಹಾಗೂ ಸಂವಿಧಾನದ 371(ಜೆ) ಕಲಂ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸೋಮವಾರ ನಗರದ ಅಶೋಕ ವೃತ್ತದಲ್ಲಿ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೇಮಕಾತಿ ಕೈಗೊಂಡು ಮೂಲಸೌಕರ್ಯ ಕಲ್ಪಿಸಬೇಕು. ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿ ಯೋಜನೆ ರೂಪಿಸಿ ಉದ್ಯೋಗಾವಕಾಶ ಸೃಷ್ಟಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಚಟುವಟಿಕೆಗೆ ಉತ್ತೇಜನ ನೀಡಲು ವಿಶೇಷ ಯೋಜನೆ ಘೋಷಿಸಬೇಕು ಎಂದು ಒತ್ತಾಯಿಸಲಾಯಿತು.
ಕೊಪ್ಪಳ ನಗರಕ್ಕೆ ಹೊಂದಿಕೊಂಡು ನಿರ್ಮಾಣವಾಗುತ್ತಿರುವ ಬಲ್ಡೋಟ್ ಕಾರ್ಖಾನೆಯ ಅನುಮತಿ ರದ್ದುಪಡಿಸಬೇಕು. ಮಾಲಿನ್ಯಕಾರಕ ಕಾರ್ಖಾನೆಗಳ ವಿಸ್ತರಣೆಗೆ ಅನುಮತಿ ನೀಡಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಧರಣಿ ಸತ್ಯಾಗ್ರಹ ಬೆಂಬಲಿಸಿ ಮಾತನಾಡಿದ ಮಾಜಿ ಶಾಸಕ ಮಹಿಮ ಪಟೇಲ್, ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಇಲ್ಲಿನ ಜನರ ಬೇಡಿಕೆಗಳಿಗೆ ಅನುಗುಣವಾಗಿ ಸರ್ಕಾರ ಯೋಜನೆಗಳನ್ನು ರೂಪಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ವಕೀಲರ ಸಂಘದ ರಾಜ್ಯ ಪರಿಷತ್ ಸದಸ್ಯೆ ಸಂಧ್ಯಾ ಮಾದಿನೂರು ಮಾತನಾಡಿ, ಕಲ್ಯಾಣ ಕರ್ನಾಟಕಕ್ಕೆ 371(ಜೆ) ಜಾರಿಯಾಗಿ 13 ವರ್ಷ ಕಳೆದರೂ ಯುವಕರ ಬೇಡಿಕೆಗಳು ಈಡೇರಿಲ್ಲ. ಪ್ರತಿಯೊಂದು ಅಭಿವೃದ್ಧಿ ಕಾರ್ಯಕ್ಕೂ ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಸಾಹಿತಿ ಸಿದ್ದು ಯಾಪಲಪರವಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರತಿವರ್ಷ ಕನಿಷ್ಠ ₹5 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಹೋರಾಟ ಸಮಿತಿಯ ಹಿರಿಯ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು, ಸಾಹಿತಿಗಳಾದ ಡಿ.ಎಂ. ಬಡಿಗೇರ, ಮಾಲಾ ಬಡಿಗೇರ, ಸಾವಿತ್ರಿ ಮುಜುಮದಾರ್, ರವಿ ಕಾಂತನವರ್, ಜಿಲ್ಲಾ ಅಧ್ಯಕ್ಷ ಸಂತೋಷ ದೇಶಪಾಂಡೆ, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕುಕನೂರು, ರಮೇಶ ತುಪ್ಪದ, ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಗೋಂಡಬಾಳ, ಹುಲಗಪ್ಪ ಕಟ್ಟಿಮನಿ, ಬಸವರಾಜ ಸಂಕನಗೌಡ್ರ, ಸೋಮನಗೌಡ ಹೊಗರನಾಳ, ಮಂಜುನಾಥ ಅಂಗಡಿ, ಆನಂದ ಹಳ್ಳಿಗುಡಿ, ಹನುಮೇಶ ಕಲ್ಮಂಗಿ, ರಾಜೇಶ ಸಸಿಮಠ ಉಪಸ್ಥಿತರಿದ್ದರು.