ಸಂಡೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲಾ ಪ್ಯಾಕ್ಸ್ ನೌಕರರ ಕ್ಷೇಮಾಭಿವೃದ್ಧಿ ಒಕ್ಕೂಟದ ಮುಖಂಡರು ಸೋಮವಾರ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳು ಹಾಗೂ ಸಹಕಾರಿ ಸಂಘಗಳ ಉಪ ನಿಬಂಧಕರು ಮತ್ತು ಸಹಾಯಕ ನಿಬಂಧಕರ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.
ರಾಜ್ಯ ಸರ್ಕಾರದ 2018ನೇ ಸಾಲಿನ ಸಾಲಾಮನ್ನಾ ಯೋಜನೆಯಲ್ಲಿ ಅರ್ಹತೆಯ ಪಟ್ಟಿಯಲ್ಲಿರುವ ರೈತರ ಸಾಲಾಮನ್ನಾ ಮೊತ್ತ ಬಿಡುಗಡೆ ಮಾಡಬೇಕು. ಯಶಸ್ವಿನಿ ಯೋಜನೆಯಲ್ಲಿನ ಸಂಘಗಳಿಗೆ ಪ್ರೋತ್ಸಾಹ ಧನವನ್ನು ಪ್ರತಿ ಕುಟುಂಬಕ್ಕೆ ₹100ಕ್ಕೆ ನಿಗದಿಗೊಳಿಸಬೇಕು. ಕೆಸಿಸಿ ಸಾಲಗಳ ವಿತರಣೆಯನ್ನು ಸರಳೀಕರಣಗಳಿಸಿ, ಸಂಪೂರ್ಣ ಆನ್ಲೈನ್ ವ್ಯವಸ್ಥೆ ಮಾಡಬೇಕು ಎಂಬುವು ನಮ್ಮ ಪ್ರಮುಖ ಬೇಡಿಕೆಗಳಾಗಿದ್ದು, ಅವುಗಳ ಈಡೇರಿಕೆಗೆ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ದ್ಯಾಮನಗೌಡರ ಬಸವರಾಜ, ಖಜಾಂಚಿ ಕಟ್ಟೆ ಯರಿಸ್ವಾಮಿ, ಸಂಡೂರು ತಾಲೂಕು ಘಟಕದ ಅಧ್ಯಕ್ಷ ಕೆ.ಶಿವಲಿಂಗಪ್ಪ, ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.