ಕೊಟ್ಟೂರು ತಾಲೂಕು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Sep 01, 2026, 03:00 AM IST
ಕೊಟ್ಟೂರು ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಕೈ ಬಿಟ್ಟಿರುವುದಕ್ಕೆ ರೈತ ಸಂಘದವರು ಪಟ್ಟಣದಲ್ಲಿ ಪ್ರತಿಭಟನೆ ವ್ಯಕ್ತಪಡಿಸಿರುವುದು. | Kannada Prabha

ಸಾರಾಂಶ

ಸರ್ಕಾರ ಘೋಷಿಸಿರುವ ಪಟ್ಟಿಯಲ್ಲಿ ಕೊಟ್ಟೂರು ತಾಲೂಕನ್ನು ಸೇರಿಸದೇ ಇರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ವಾಸುದೇವ ಮೇಟೆ ಬಣದ ನೇತೃತ್ವದಲ್ಲಿ ರೈತರು, ಮಹಿಳೆಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕೊಟ್ಟೂರು: ಸರ್ಕಾರ ಘೋಷಿಸಿರುವ ಪಟ್ಟಿಯಲ್ಲಿ ಕೊಟ್ಟೂರು ತಾಲೂಕನ್ನು ಸೇರಿಸದೇ ಇರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ವಾಸುದೇವ ಮೇಟೆ ಬಣದ ನೇತೃತ್ವದಲ್ಲಿ ರೈತರು, ಮಹಿಳೆಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಇಲ್ಲಿನ ಆರಾಧ್ಯ ದೈವ ಶ್ರೀಗುರುಕೊಟ್ಟೂರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿದ್ದ ಮಹಿಳೆಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ರೈತರ ಸಹಾಯಕ್ಕೆ ಬನ್ನಿ ಎಂದು ಒತ್ತಾಯಿಸಿದರು.

ಮಳೆ ಅಭಾವ ಇದ್ದರೂ ಕೊಟ್ಟೂರು ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಜಮ್ಮೀರ್ ಅಹಮ್ಮದ್ ಬರ ಪರಿಸ್ಥಿತಿ ಅಧ್ಯಯನ ನಡೆಸಿ ಇಲ್ಲಿನ ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಆದರೂ ಸರ್ಕಾರ ಈ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸದಿರುವುದು ರೈತರನ್ನು ವಂಚಿಸುವ ಪ್ರಯತ್ನವಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲವರು ರಸ್ತೆಯಲ್ಲಿ ಬರಿ ಮೈಯಲ್ಲಿ ಹೊರಳಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘ ಹಸಿರು ಸೇನೆ ವಾಸುದೇವ ಮೇಟೆ ಬಣದ ಜಿಲ್ಲಾಧ್ಯಕ್ಷ ಸಿ.ಎ.ಗಾಳಪ್ಪ, ಸರ್ಕಾರ ಕೂಡಲೇ ರೈತರಿಗೆ ಬೆಳೆ ಪರಿಹಾರ, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಕೂಡ್ಲಿಗಿಗೆ ಸೆ. 5ರಂದು ಬರಲಿರುವ ಮುಖ್ಯಮಂತ್ರಿಗಳಿಗೆ ಈ ಸಂಬಂಧ ಮುತ್ತಿಗೆ ಹಾಕಿ ಪ್ರತಿಭಟನೆ ವ್ಯಕ್ತಪಡಿಸುತ್ತೇವೆ. ಕೊಟ್ಟೂರು ತಾಲೂಕಿನಲ್ಲಿ ಸರಿಯಾಗಿ ಬರ ಪರಿಶೀಲನೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಂತರ ಗ್ರೇಡ್ -2 ತಹಸೀಲ್ದಾರ್ ಪ್ರತಿಭಾ ಎಂ.ಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷೆ ಸಿ. ರೇಖಾ, ಕೆ. ಪವಿತ್ರಾ, ಸಿದ್ದೇಶ, ನಾಗಮ್ಮ, ರೇಖಾ, ನಿಂಗಮ್ಮ, ರೇಣುಕಮ್ಮ, ಸಾಕಮ್ಮ, ಚಂದ್ರಮ್ಮ, ತಿಮ್ಮಪ್ಪ, ಹನುಮಂತಪ್ಪ, ಅಂಜಿನಪ್ಪ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂಗಳ ಧಾರ್ಮಿಕ ಆಚರಣೆ ಮೇಲೆ ಅತಿಯಾದ ನಿಯಂತ್ರಣ ಬೇಡ: ಸಂಸದ ಕೋಟ
ಪಶ್ಚಿಮ ಘಟ್ಟದ ಜನರಿಗೆ ತೊಂದರೆಯಾಗದಂತೆ ಸರ್ಕಾರಕ್ಕೆ ಪತ್ರ: ಸ್ವರೂಪ