ಯುವತಿ ಸಾವು ಪ್ರಕರಣ: ಎಸ್ಐಟಿ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jan 21, 2026, 02:45 AM IST
 | Kannada Prabha

ಸಾರಾಂಶ

ಯುವತಿ ಆತ್ಮಹತ್ಯೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಕಾರವಾರದಲ್ಲಿಂದು ಕಾರವಾರ ಕ್ಯಾಥೋಲಿಕ್ ಧರ್ಮಪ್ರಾಂತ್ಯ ಮಹಿಳಾ ಆಯೋಗದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.

ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ । ಆಮೆಗತಿಯಲ್ಲಿ ತನಿಖೆ: ಕುಟುಂಬಸ್ಥರ ಅಸಮಾಧಾನಕನ್ನಡಪ್ರಭ ವಾರ್ತೆ ​ಕಾರವಾರ

ತಾಲೂಕಿನ ಕದ್ರಾ ಗ್ರಾಮದ ಯುವತಿ ಆತ್ಮಹತ್ಯೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಕಾರವಾರದಲ್ಲಿಂದು ಕಾರವಾರ ಕ್ಯಾಥೋಲಿಕ್ ಧರ್ಮಪ್ರಾಂತ್ಯ ಮಹಿಳಾ ಆಯೋಗದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಮಿತ್ರಸಮಾಜ ಮೈದಾನದಿಂದ ಆರಂಭವಾದ ಮೆರವಣಿಗೆಯಲ್ಲಿ ಕಾರವಾರ ಹಾಗೂ ಕದ್ರಾ ಸೇರಿದಂತೆ ವಿವಿಧ ಭಾಗಗಳ ಕ್ಯಾಥೋಲಿಕ್ ಹಾಗೂ ಸಾರ್ವಜನಿಕರು ಸೇರಿ ಐನೂರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆ ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡಿತು.

ಜ. 9ರಂದು ಯುವತಿ ರೀಶಲ್ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದರು. ಆಕೆಯ ಸಾವಿಗೆ ಯುವಕ ಚಿರಾಗ್ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಕದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ದೂರು ದಾಖಲಾಗಿ 11 ದಿನಗಳೇ ಕಳೆದರೂ ಸಹ ಇದುವರೆಗೂ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ವಿಫಲವಾಗಿದ್ದು, ತನಿಖೆ ಆಮೆಗತಿಯಲ್ಲಿ ಸಾಗುತ್ತಿರುವ ಕುರಿತು ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕರ್ತವ್ಯ ಲೋಪದಡಿ ಕದ್ರಾ ಪಿಎಸ್ಐ ಅವರನ್ನು ಅಮಾನತುಗೊಳಿಸಿರುವುದು ತನಿಖೆ ಸಮರ್ಪಕವಾಗಿ ನಡೆಯದ್ದಕ್ಕೆ ಸಾಕ್ಷಿ ಎನ್ನುವಂತಾಗಿದೆ. ಹೀಗಾಗಿ ಸ್ಥಳೀಯ ಪೊಲೀಸರ ನಿಷ್ಪಕ್ಷಪಾತ ತನಿಖೆಯ ಮೇಲಿರುವ ವಿಶ್ವಾಸ ಕಳೆದುಹೋಗಿದ್ದು, ಕೂಡಲೇ ಪ್ರಕರಣವನ್ನು ಎಸ್‌ಐಟಿ ಅಥವಾ ಬೇರೆ ದಕ್ಷ ಅಧಿಕಾರಿಗಳ ತಂಡಕ್ಕೆ ವಹಿಸಿ ಮಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ರೀಶಲ್ ಪೋಷಕರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಪ್ರತಿಭಟನೆ ಹಿನ್ನಲೆ ಸ್ಥಳಕ್ಕೆ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಆಗಮಿಸಿದ್ದು, ಮೃತ ಯುವತಿ ಕುಟುಂಬಸ್ಥರ ಮನವಿಗೆ ಬೆಂಬಲ ವ್ಯಕ್ತಪಡಿಸಿದರು. ಯುವತಿ ರೀಶಲ್ ಸಾವಿನ ತನಿಖೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಶಾಸಕರು, ಕುಟುಂಬಸ್ಥರ ಬೇಡಿಕೆಯಂತೆ ಮರು ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ಸಿಕ್ಕಿದ್ದಾಗಿ ತಿಳಿಸಿದರು. ಅಲ್ಲದೇ ಈ ಹಿಂದೆ ನೀಡಲಾದ ಮರಣೋತ್ತರ ಪರೀಕ್ಷೆಯಲ್ಲಿ ಇದ್ದ ಲೋಪದೋಷ ತನ್ನ ಗಮನಕ್ಕೂ ಬಂದಿದ್ದು, ಈ ಕುರಿತು ವರದಿ ನೀಡಿದ ವೈದ್ಯರಿಗೂ ಎಚ್ಚರಿಕೆ ನೀಡಲಾಗಿದೆ. ಮತ್ತೆ ಇದು ಮರುಕಳಿಸದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಪೊಲೀಸರ ನಾಲ್ಕು ತಂಡಗಳನ್ನು ರೂಪಿಸಿದ್ದು, ಸೂಕ್ತ ರೀತಿಯಲ್ಲಿ ಪ್ರಕರಣದ ತನಿಖೆ ನಡೆಸಿ ಯುವತಿ ಸಾವಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ಬಳಿಕ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸಹ ಹಾಜರಿದ್ದರು. ಕ್ಯಾಥೋಲಿಕ್ ಸಮುದಾಯದ ಪ್ರಮುಖರು, ಮಹಿಳೆಯರು, ಯುವತಿಯರು ಉಪಸ್ಥಿತರಿದ್ದರು.

ಪ್ರತಿಭಟನೆ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಆಯಕಟ್ಟಿನ ಸ್ಥಳಗಳಲ್ಲಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೊಳಿಸಿದ್ದು ಯಾವುದೇ ಅವಘಡಗಳಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.

ಮರು ಮರಣೋತ್ತರ ಪರೀಕ್ಷೆ

ಜ.10ರಂದು ಯುವತಿಯ ಅಂತ್ಯಕ್ರಿಯೆ ನಡೆಸಲಾಗಿದ್ದು, ಮೃತದೇಹದ ಮೇಲೆ ಕಚ್ಚಿದ ಗಾಯದ ಗುರುತುಗಳು ಹಾಗೂ ರಕ್ತದ ಕಲೆಗಳು ಕಂಡುಬಂದಿರುವುದರಿಂದ ತಮ್ಮ ಮಗಳ ಮೇಲೆ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ತಾಯಿ ರೀನಾ ಡಿಕೋಸ್ತಾ ಶಂಕೆ ವ್ಯಕ್ತಪಡಿಸಿದ್ದರು. ಮೊದಲು ನಡೆಸಲಾದ ಮರಣೋತ್ತರ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳಾಗಿವೆ. ಅಲ್ಲದೇ ವರದಿ ನೀಡಲು ವಿಳಂಬ ಮಾಡಲಾಗುತ್ತಿದ್ದು, ಇದು ತನಿಖೆಯ ಹಾದಿ ತಪ್ಪಿಸುವ ಹುನ್ನಾರ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ ಹಿನ್ನಲೆ ಜಿಲ್ಲಾಧಿಕಾರಿ ಸೂಚನೆಯಂತೆ ಮಂಗಳೂರು ಹಾಗೂ ಹುಬ್ಬಳ್ಳಿಯ ವೈದ್ಯರನ್ನೊಳಗೊಂಡ ತಂಡದಿಂದ ಮಂಗಳವಾರ ಮರು ಮರಣೋತ್ತರ ಪರೀಕ್ಷೆ ಕೈಗೊಳ್ಳಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೋಲ್ಡನ್‌ ಅವರ್‌ನಲ್ಲಿ 2.16 ಕೋಟಿ ರು, ರಕ್ಷಣೆ
ಇಂದಿನಿಂದ ಲಂಡನ್‌ ಮಾದರಿ ಡಬಲ್‌ ಡೆಕ್ಕರ್‌ ಬಸ್‌ ಸಂಚಾರ