ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Dec 24, 2025, 02:00 AM IST
23ಎಚ್ಎಸ್ಎನ್14 | Kannada Prabha

ಸಾರಾಂಶ

ವಿಜಯನಗರ ಬಡಾವಣೆಯಲ್ಲಿರುವ ಕೆರೆಯನ್ನು ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದು, ದಟ್ಟವಾದ ಹುಲ್ಲುಗಾವಲು ಬೆಳೆದು ಕೆರೆ ಅವನತಿಯತ್ತ ಸಾಗುತ್ತಿದೆ. ಇದರಿಂದ ದುರ್ವಾಸನೆ ಉಂಟಾಗಿ ರೋಗ ಹರಡುವ ಭೀತಿ ಎದುರಾಗಿದೆ. ಅಲ್ಲದೆ ದನ-ಕರುಗಳು ಕೂಡ ಕೆರೆಯ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಬಡಾವಣೆಯ ಏಕೈಕ ಕೆರೆಯನ್ನು ಉಳಿಸಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಷ್ಟೇ ಅಲ್ಲದೆ ಮಹಾನಗರ ಪಾಲಿಕೆಯ ಕರ್ತವ್ಯವೂ ಆಗಿದೆ. ಅಧಿಕಾರಿಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ತಣ್ಣೀರುಹಳ್ಳದ ಬಳಿ ಇರುವ ವಿಜಯನಗರ ಬಡಾವಣೆಯಲ್ಲಿನ ಹಲವು ಮೂಲಭೂತ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಒತ್ತಾಯಿಸಿ ಬಡಾವಣೆಯ ನಿವಾಸಿಗಳು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ಬಡಾವಣೆಯಲ್ಲಿ ಅನೇಕ ಸಮಸ್ಯೆಗಳಿದ್ದರೂ ಹಲವು ಬಾರಿ ಮನವಿ ಮಾಡಿದರೂ ಸಂಬಂಧಪಟ್ಟ ಇಲಾಖೆಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು.ಈ ವೇಳೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಂಗಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯನಗರ ಬಡಾವಣೆಯಲ್ಲಿರುವ ಕೆರೆಯನ್ನು ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದು, ದಟ್ಟವಾದ ಹುಲ್ಲುಗಾವಲು ಬೆಳೆದು ಕೆರೆ ಅವನತಿಯತ್ತ ಸಾಗುತ್ತಿದೆ. ಇದರಿಂದ ದುರ್ವಾಸನೆ ಉಂಟಾಗಿ ರೋಗ ಹರಡುವ ಭೀತಿ ಎದುರಾಗಿದೆ. ಅಲ್ಲದೆ ದನ-ಕರುಗಳು ಕೂಡ ಕೆರೆಯ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಬಡಾವಣೆಯ ಏಕೈಕ ಕೆರೆಯನ್ನು ಉಳಿಸಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಷ್ಟೇ ಅಲ್ಲದೆ ಮಹಾನಗರ ಪಾಲಿಕೆಯ ಕರ್ತವ್ಯವೂ ಆಗಿದೆ. ಅಧಿಕಾರಿಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಬಡಾವಣೆಯ ಪಶ್ಚಿಮ ದಿಕ್ಕಿನಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕಿಡಿಗೇಡಿಗಳು ಹಾಳು ಮಾಡಿದ್ದು, ಸರಿಯಾದ ನಿರ್ವಹಣೆ ಇಲ್ಲದ ಕಾರಣ ನೀರು ಕುಡಿಯಲು ಯೋಗ್ಯವಾಗಿಲ್ಲ. ಘಟಕಕ್ಕೆ ಯಾವುದೇ ಭದ್ರತೆಯೂ ಇಲ್ಲ. ಆದ್ದರಿಂದ ಅದನ್ನು ಗ್ರಾಮದ ಶ್ರೀಮಾರಮ್ಮ ದೇವಸ್ಥಾನದ ಎದುರಿನ ಸರ್ಕಾರಿ ಶಾಲಾ ಆವರಣಕ್ಕೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದರು.ಇದಲ್ಲದೆ ಗುಡ್ಡೆನಹಳ್ಳಿ ಗ್ರಾಮದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿದ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದಲ್ಲಿ ಅಗತ್ಯ ವೈದ್ಯಕೀಯ ಉಪಕರಣಗಳು, ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿ ಕೊರತೆಯಿದೆ. ಇದರಿಂದ ಅನಾರೋಗ್ಯ ಸಂದರ್ಭದಲ್ಲಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು. ನಾಮಕವಸ್ಥೆಗೆ ಸ್ಥಾಪಿಸಿರುವ ಆರೋಗ್ಯ ಕೇಂದ್ರದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಸಾರ್ವಜನಿಕ ಬಳಕೆಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದರು.ಈ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಬಗೆಹರಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ದಸಂಸ ಹಿರಿಯ ಮುಖಂಡ ಕೃಷ್ಣದಾಸ್, ರಂಗಸ್ವಾಮಿ, ಗುಡ್ಡೆನಹಳ್ಳಿ ಹಂದಿಜೋಗಿ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ವಿ. ಗೋವಿಂದರಾಜ್, ಚಂದ್ರಗುಪ್ತ ಮೌರ್ಯ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಉಳುವಾರೆ, ಸುರೇಶ್ ಛತ್ರನಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ