ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : May 01, 2024, 01:27 AM IST
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ನೇತೃತ್ವದಲ್ಲಿ ಸೋಮವಾರ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಗಾಯತ್ರಿ ಶಾಂತೇಗೌಡ, ರೇಖಾ ಹುಲಿಯಪ್ಪಗೌಡ, ಶಬಾನ ಸುಲ್ತಾನ. ಸವಿತಾ ರಮೇಶ್‌ ಹಾಗೂ ಕಾರ್ಯಕರ್ತರು ಇದ್ದರು.  | Kannada Prabha

ಸಾರಾಂಶ

ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ನೇತೃತ್ವದಲ್ಲಿ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭವಾರ್ತೆ ಚಿಕ್ಕಮಗಳೂರು

ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ಮಂಗಳವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ತಾಲೂಕು ಕಚೇರಿಯಿಂದ ಮೆರವಣಿಗೆ ಆರಂಭಿಸಿದ ಮಹಿಳಾ ಕಾರ್ಯಕರ್ತೆಯರು ಹಾಗೂ ಮುಖಂಡರು ಸಂಸದ ಪ್ರಜ್ವಲ್ ಹಾಗೂ ಹೊಳೇನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಧಿಕ್ಕಾರ ಕೂಗುತ್ತಾ ಇಂಥವರಿಂದ ಮಹಿಳೆಯರಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಪೂಜ್ಯನೀಯ ಸ್ಥಾನವಿದೆ. ಅದರಲ್ಲೂ ಜೆಡಿಎಸ್‍ನಲ್ಲಿ ತೆನೆಹೊತ್ತ ಮಹಿಳೆ ಗುರುತಿಗೆ ವಿರುದ್ಧವಾಗಿ ಸಂಸದರು ಹಾಗೂ ಶಾಸಕರು ನಡೆದುಕೊಳ್ಳುತ್ತಿರುವುದು ನಾಚಿಕೇಡಿನ ಸಂಗತಿ ಎಂದು ಕಿಡಿ ಕಾರಿದರು.

ಅಪ್ಪ-ಮಗ ಇಬ್ಬರೂ ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ನೊಂದ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. ಸಾರ್ವಜನಿಕರೆದುರು ಪ್ರಜ್ವಲ್ ಹಾಗೂ ರೇವಣ್ಣ ಹೀನಕೃತ್ಯವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೇ ಈ ಹಿಂದಿನ ಮಹಿಳೆಯರ ಮೇಲೆ ದೌರ್ಜನ್ಯವನ್ನು ಮುಕ್ತವಾಗಿ ಹೇಳುವ ಮೂಲಕ ರಕ್ಷಣೆ ಒದಗಿಸಲು ಹೋರಾಟ ಮಾಡುತ್ತಿದ್ದಾರೆ ಎಂದರು.

ಕಾಮದಾಸೆಗಾಗಿ ಮನೆಕೆಲಸದ ಕೂಲಿ ಕಾರ್ಮಿಕರು, ರಾಜಕೀಯ ಹಾಗೂ ಸರ್ಕಾರಿ ವೃತ್ತಿಯಲ್ಲಿರುವ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರನ್ನು ಬಳಸಿಕೊಂಡಿರುವುದು ನಾಡಿನ ದೊಡ್ಡ ದುರಂತ. ಶೋಷಣೆಗೆ ಒಳಗಾಗಿರುವ ಮಹಿಳೆಯರನ್ನು ರಕ್ಷಿಸುವ ಸಲುವಾಗಿ ರಾಜ್ಯದ ಮಹಿಳೆಯರು ಒಗ್ಗಟ್ಟಾಗಿ ಕೈ ಜೋಡಿಸಿ ಕಾಮುಕರನ್ನು ಮಟ್ಟ ಹಾಕಲು ಪ್ರಕರಣ ದಾಖಲಿಸಬೇಕು ಎಂದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದಿಂದಲೇ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇನ್ನೊಂದೆಡೆ ಎಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಹಣದಿಂದ ಸ್ವಾಭಿಮಾನದ ಜೀವನ ನಡೆಸುತ್ತಿರುವ ಮಹಿಳೆಯರನ್ನು ಸಹಿಸಿಕೊಳ್ಳಲಾಗದೇ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದಿದ್ದಾರೆ. ಆದರೆ ನೈತಿಕವಾಗಿ ಹಾದಿ ತಪ್ಪುವ ಕೆಲಸ ಅವರ ಕುಟುಂಬದವರು ಮಾಡುತ್ತಿದ್ದಾರೆ ಎಂದು ದೂರಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ. ಸಂಸದ ಪ್ರಜ್ವಲ್‍ರ ಹಿಂದೆ ವಿಕೃತಕಾಮಿ ಹಾಗೂ ಗೋಮುಖವ್ಯಾಘ್ರ ಮುಖವಾಡವಿದೆ. ಮನೆ ಕೆಲಸಕ್ಕೆಂದು ತೆರಳುವ ಬಡ ಹಾಗೂ ಹಿಂದುಳಿದ ವರ್ಗದ ಮಹಿಳೆಯರನ್ನು ಕಾಮದಾಸೆಗಾಗಿ ಬಳಸಿಕೊಂಡಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಹ ಪ್ರಕರಣವಾಗಿದೆ ಎಂದು ಹೇಳಿದರು.

ವಯಸ್ಸಿನ ಅಂತರವನ್ನು ಗಮನಿಸದೇ ಹಾಲಿ ಸಂಸದರು ಮಹಿಳೆಯರನ್ನು ಬಳಸಿಕೊಂಡು ವಿಕೃತ ರೀತಿಯಲ್ಲಿ ಮೆರೆದಿರುವುದು ವಿಪರ್ಯಾಸ. ಅಲ್ಲದೇ ತಮ್ಮ ವೀಡಿಯೋ ತಾನೇ ಚಿತ್ರಿಸಿಕೊಂಡಿದ್ದು ಗಮನಿಸಿದರೆ ಇಂಥ ಕಾಮುಕ ಸಂಸದರಾಗಿ ಕರ್ತವ್ಯ ನಿರ್ವಹಿಸಲು ಅನರ್ಹರೆನಿಸುತ್ತದೆ. ತಮ್ಮ ತಾಯಿಯ ತವರು ಹಾಸನ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಬಾನ ಸುಲ್ತಾನ ಮಾತನಾಡಿ, ನಾಡಿನ ಹೆಣ್ಣು ಮಕ್ಕಳನ್ನು ಗೌರವಿಸುವ ಗುಣ ಇಲ್ಲದಿರುವ ಸಂಸದರು ಜನಸಾಮಾನ್ಯರ ಬದುಕನ್ನು ಹಸನುಗೊಳಿಸಲು ಸಾಧ್ಯವಿಲ್ಲ. ಇಂಥ ನೀಚ ಹಾಗೂ ಅನಾಗರೀಕ ವ್ಯಕ್ತಿತ್ವ ಹೊಂದಿರುವ ಪ್ರಜ್ವಲ್ ಅವರನ್ನು ಯಾವ ದೇಶದಲ್ಲಿ ಅಡಗಿದ್ದಾರೆಂದು ಮಾಹಿತಿ ತಿಳಿದು ಅಲ್ಲಿಂದಲೇ ಬಂಧಿಸಿ ತಂದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್, ನಿಡಘಟ್ಟ ಉಪಾಧ್ಯಕ್ಷೆ ಹೇಮಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಶೀಲಾ, ನಗರಾಧ್ಯಕ್ಷೆ ಇಂದಿರಾ ಶಂಕರ್, ಮುಖಂಡರಾದ ಯಶೋಧ, ಮಲ್ಲಿಕಾ ಹಾಗೂ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು
ಸಮಸ್ಯೆ ಬಗೆ ಹರಿಸದಿದ್ದರೇ ತೀವ್ರ ಹೋರಾಟ