ಶಿರಸಿ: ನಗರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದೇವೆ. ಈ ವರೆಗೂ ಸ್ಪಂದಿಸಿಲ್ಲ. ಈಗ ನಗರದ ರಸ್ತೆಗಳ ಅಗಲೀಕರಣ ನಡೆದಿದ್ದು, ಈಗಲಾದರೂ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ಭೀಮ ಗರ್ಜನೆ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ಮಾತನಾಡಿ, ನಗರದಲ್ಲಿ ಅಂಬೇಡ್ಕರ್ ಅವರ ೧೬ ಅಡಿ ಎತ್ತರದ ಪ್ರತಿಮೆ ಸ್ಥಾಪಿಸಬೇಕು. ಐದು ರಸ್ತೆ ಮರು ನಾಮಕರಣ ಮಾಡಿ ಅಂಬೇಡ್ಕರ್ ವೃತ್ತ ಎಂದು ಹೆಸರಿಡಬೇಕು ಎಂದರು.
ನಗರದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಹಲವು ವರ್ಷಗಳಿಂದ ಜಿಲ್ಲಾಡಳಿತಕ್ಕೆ ಬೇಡಿಕೆ ಸಲ್ಲಿಸಿದ್ದರೂ ಮರು ಉತ್ತರ ಬಂದಿಲ್ಲ. ಈಗಾಗಲೇ ನಗರದಲ್ಲಿ ರಸ್ತೆ ವಿಸ್ತರಣೆ ಕಾರ್ಯ ನಡೆದಿರುವುದರಿಂದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಸ್ಥಳಾವಕಾಶವೂ ಲಭ್ಯವಾಗಿದೆ. ಹೀಗಾಗಿ, ಈಗಲಾದರೂ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಆನಂತರ ಮೆರವಣಿಗೆಯಲ್ಲಿ ತೆರಳಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಸಂಜಯ ಜೋಗಳೇಕರ, ಪುನೀತ ಮರಾಠೆ, ರಾಜೇಶ ದೇಶಭಾಗ, ರಾಮಚಂದ್ರ ಶಿರ್ಸಿಕರ್, ರವಿ ಜೋಗಳೇಕರ್ ಇದ್ದರು.