ಕುಷ್ಟಗಿ: ನಮಗೆ ಕುಡಿಯಲು ಶುದ್ಧ ನೀರು ಇಲ್ಲ, ಬಳಸಲು ನೀರು ಸಾಲುತ್ತಿಲ್ಲ, ನಮಗೆ ನೀರು ಕೊಡಿ ಎಂದು ತಾಲೂಕಿನ ಬಿಜಕಲ್ ಗ್ರಾಮಸ್ಥರು ಹಾಗೂ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶನ ಮಾಡುವ ಗ್ರಾಪಂ ಕಾರ್ಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದರು.ಹೌದು. ತಾಲೂಕಿನ ಬಿಜಕಲ್ನಲ್ಲಿ ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ವಾಂತಿ-ಭೇದಿಯಿಂದ ಓರ್ವ ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯದ ಗಮನ ಸೆಳೆದಿದ್ದ ಈ ಗ್ರಾಮದಲ್ಲಿ ಸದ್ಯ ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ನೀರಿಗಾಗಿ ಬೇಸತ್ತ ಗ್ರಾಮಸ್ಥರು ನಮಗೆ ನೀರು ಕೊಡಬೇಕು ಎಂದು ಖಾಲಿ ಕೊಡಗಳೊಂದಿಗೆ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಬಿಜಕಲ್ ಗ್ರಾಮದಲ್ಲಿ ಜೂನ್ ತಿಂಗಳಲ್ಲಿ ವಾಂತಿ-ಭೇದಿ ಪ್ರಾರಂಭವಾಗಿ ಬಾಲಕಿ ಮೃತಪಟ್ಟಿದ್ದಳು. ಈ ಸಂದರ್ಭದಲ್ಲಿ ಗ್ರಾಮಕ್ಕೆ ನೀರಿನ ಸಮಸ್ಯೆ ಉಂಟಾದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಪಂಚಾಯತ್ ರಾಜ್ ಇಲಾಖೆ ಹಿರಿಯ ಅಧಿಕಾರಿಗಳು ಶೀಘ್ರದಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ನೀರು ಪೂರೈಸುವ ಭರವಸೆ ನೀಡಿದ್ದರು ಆದರೆ 3-4 ತಿಂಗಳು ಕಳೆದರೂ ಭರವಸೆ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಂದು ಅಧಿಕಾರಿಗಳು ಜೆಜೆಎಂ ಗುತ್ತಿಗೆದಾರನಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಲಾವಕಾಶ ಕೊಡುತ್ತಲೇ ಬಂದಿದ್ದಾರೆ. ಆದರೆ ಕಾಮಗಾರಿ ಪೂರ್ಣಗೊಳಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಏಕೆ? ಎಂದು ಪ್ರಶ್ನಿಸಿದರು. ನಮಗೆ ಶುದ್ಧ ಕುಡಿಯುವ ನೀರು ಅಪರೂಪವಾಗಿದೆ ಎಂದು ಜನರು ಅಧಿಕಾರಿಗಳ ಈ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.ಗ್ರಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಾಪಂ ಇಒ ನಿಂಗಪ್ಪ ಮಸಳಿ ಭೇಟಿ ನೀಡಿ, ನಮಗೆ ವಾರ ಅವಕಾಶ ಕೊಡಿ. ವಾರದೊಳಗೆ ಜೆಜೆಎಂ ಕಾಮಗಾರಿ ಮುಗಿಸಿ ಜನರಿಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆಲಸ ಮುಗಿಸಲು ಅಸಮರ್ಥರಾದರೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ. ಅಲ್ಲಿಯವರೆಗೂ ಟ್ಯಾಂಕರ್ಗಳ ಮೂಲಕ, ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದಾದರೂ ನೀರು ಪೂರೈಕೆ ಮುಂದುವರಿಸಲಾಗುವುದು ಎಂದು ಭರವಸೆ ನೀಡಿದ್ದರಿಂದ ಗ್ರಾಮಸ್ಥರು ಧರಣಿ ಕೈಬಿಟ್ಟರು.