ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆ ಹೆಚ್ಚಾಗಿ ಶಾಂತಿ ಸೌಹಾರ್ದತೆ ಕದಡುತ್ತಿದೆ. ಭಯೋತ್ಪಾದಕತೆ ಹೆಚ್ಚಾಗುತ್ತಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ, ಕೊಲೆಯಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಶಾಸಕ ಧೀರಜ್ ಮುನಿರಾಜ್ ಆರೋಪಿಸಿದರು.
ನೇಹಾಳನ್ನು ಹತ್ಯೆ ಮಾಡಿದ ಕೊಲೆಗಾರನನ್ನು ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು. ರಾಜ್ಯದಲ್ಲಿ ಇಂತಹ ಹತ್ಯೆಗಳು ಮರುಕಳಿಸದಂತೆ ಸರ್ಕಾರ ಕ್ರಮವಹಿಸಬೇಕು. ಹೆಣ್ಣು ಮಕ್ಕಳ ಗೌರವ ಉಳಿಸುವವರೆಗೂ ಬಿಜೆಪಿ ಪ್ರತಿಭಟನೆ ನಡೆಸುತ್ತಲೇ ಇರುತ್ತದೆ. ಇದರಲ್ಲಿ ನಾವು ರಾಜಕೀಯ ನಡೆಸುವುದಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಲವ್ ಜಿಹಾದ್, ಬಲವಂತದ ಮತಾಂತರ ಸೇರಿದಂತೆ ಹಿಂದೂ ವಿರೋಧಿ ಚಟುವಟಿಕೆಗಳು ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ. ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು.ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಸಬಲರಾಗಬೇಕೆಂದು ಬಿಜೆಪಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯಾವ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ದೂರಿದರು.
ದೊಡ್ಡಬಳ್ಳಾಪುರದಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ, ವಿಶ್ವ ಹಿಂದು ಪರಿಷತ್, ಬಜರಂಗದಳ ಮತ್ತಿತರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.