ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶುಕ್ರವಾರ ನೂರಾರು ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.ಶಿವಮೊಗ್ಗದ ವಕೀಲರ ಸಂಘದ ನೇತೃತ್ವದಲ್ಲಿ ನಡೆದ ಪತ್ರಿಭಟನೆ ಮೆರವಣಿಗೆ ನಗರದ ಕೋರ್ಟ್ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಬಾಲರಾಜ ಅರಸ್ ರಸ್ತೆ, ಸೀನಪ್ಪ ಶೆಟ್ಟಿ ವೃತ್ತ, ಅಮೀರ್ ಅಹ್ಮದ್ ವೃತದವರೆಗೆ ಹೋಗಿ ವಾಪಸ್ ಶೀನಪ್ಪ ಶೆಟ್ಟಿ ವೃತ್ತಕ್ಕೆ ಬಂದು ಪ್ರತಿಭಟನಾಸಭೆ ನಡೆಸಿದರು.
ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆಚಿಕ್ಕಮಗಳೂರಿನಲ್ಲಿ ವಕೀಲರ ಸಂಘದ ಸದಸ್ಯ ಪ್ರೀತಂ ಅವರು ಅಲ್ಲಿನ ನಗರದ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಠಾಣೆಗೆ ಎಳೆದುಕೊಂಡು ಹೋಗಿ ಲಾಠಿ, ದೊಣ್ಣೆಯಿಂದ ಥಳಿಸಿ, ಶೂ ಕಾಲಿನಿಂದ ಹಲ್ಲೆ ನಡೆಸಿದ್ದಾರೆ. ಇದು ಮಾರಣಾಂತಿಕ ಹಲ್ಲೆಯಾಗಿದೆ. ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ಅಮಾನತು ಮಾಡಿದರೆ ಸಾಲದು ತಕ್ಷಣ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಮನವಿ ಸ್ವೀಕರಿಸಲು ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳೇ ಬರಬೇಕು ಎಂದು ಪಟ್ಟುಹಿಡಿದರು. ಸ್ಥಳಕ್ಕೆ ತಹಸೀಲ್ದಾರ್, ಡಿವೈಎಸ್ಪಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಂದರೂ ಮನವಿ ಕೊಡಲು ನಿರಾಕರಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಬರಬೇಕು ಎಂದು ಆಗ್ರಹಿಸಿದರು.
ಈ ಮಧ್ಯೆ ವಕೀಲರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ವಕೀಲರು ಪ್ರತಿಭಟನೆ ಹಿಂಪಡೆದರು.ಸಂಘದ ಅಧ್ಯಕ್ಷ ಬಿ.ಜಿ. ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ, ಉಪಾಧ್ಯಕ್ಷ ಟಿ.ಎಸ್. ಟೇಕೋಜಿರಾವ್, ಕೆ.ಪಿ, ಶ್ರೀಪಾಲ್, ಮಹೇಂದ್ರಕುಮಾರ್, ಎಸ್.ಗಿರೀಶ್, ಮಂಜು, ವೈ.ಬಿ.ಚಂದ್ರಕಾಂತ್, ಅಶೋಕ್ ಮತ್ತಿತರರು ಇದ್ದರು.
- - - -1ಎಸ್ಎಂಜಿಕೆಪಿ4:ಶಿವಮೊಗ್ಗದ ಶೀನಪ್ಪಶೆಟ್ಟಿ ವೃತ್ತದಲ್ಲಿ ಶುಕ್ರವಾರ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶುಕ್ರವಾರ ನೂರಾರು ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.