ಕಂಪ್ಲಿ: ಕ್ಷೇತ್ರದ ಜನತೆಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.13ಕ್ಕೆ ಪಟ್ಟಣದಲ್ಲಿ ಸಂಕೇತಿಕ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜನ ಶಕ್ತಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ವಸಂತರಾಜ್ ಕಹಳೆ ತಿಳಿಸಿದರು.
ಕಂಪ್ಲಿಯ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಮುಂದಾಗುವ ಮೂಲಕ ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಬೇಕು. ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ನೂತನ ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕು. ಕ್ಷೇತ್ರದಲ್ಲಿನ ವಸತಿ ರಹಿತರಿಗೆ ನಿವೇಶನ ಒದಗಿಸಲು ಶಾಸಕರು ಹಾಗೂ ಅಧಿಕಾರಿಗಳು ಮುಂದಾಗಬೇಕು. ಸರ್ಕಾರಿ ಶಾಲೆಗಳಿಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಪಟ್ಟಣದಲ್ಲಿ ಬಸ್ ಡಿಪೋ ಆರಂಭಿಸಿ ವಿವಿಧ ಊರುಗಳಿಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.13ರಂದು ಹೋರಾಟ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ತಹಸೀಲ್ದಾರಗೆ ಮನವಿ ಸಲ್ಲಿಸಲಾಗುವುದು ಎಂದರು.ಸಭೆಯಲ್ಲಿ ಪ್ರಮುಖರಾದ ವಿ.ಎಸ್. ಶಿವಶಂಕರ, ಮರಿಸ್ವಾಮಿ ಸಣಾಪುರ, ಎಸ್.ಬಸವರಾಜ್, ಕುರ್ಶಿದ್ ಬೇಗಂ, ಎಚ್.ಬಸಪ್ಪ, ಉಮೇಶ್ ಜೆ., ಬಂಡಿ ಬಸವರಾಜ್, ಆರ್. ನಾಗರಾಜ್, ಪ್ರಾಂತ ರೈತ ಸಂಘ, ಕರ್ನಾಟಕ ಜನ ಶಕ್ತಿ, ಅಂಬೇಡ್ಕರ್ ಸೇನೆ, ಕಟ್ಟಡ ಕಾರ್ಮಿಕರ ಸಂಘ, ಬಿಸಿಯೂಟ ನೌಕರರ ಸಂಘದ, ಸಿಐಟಿಯು ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.