ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ಅಧ್ಯಕ್ಷ ಉಮೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ರೈತ ಸಂಘದ ಮುಖಂಡರು ಮತ್ತು ಕಾರ್ಯಕರ್ತರು ವಿ.ಸಿ. ನಾಲೆ ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡುವಲ್ಲಿ ಎರಡು ಇಲಾಖೆಗಳ ಅಧಿಕಾರಿಗಳ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರಾವರಿ ನಿಗಮ ಬೇಸಿಗೆ ಬೆಳೆಗೆ ಸಮರ್ಪಕವಾಗಿ ನೀರು ಹರಿಸದ ಕಾರಣ ನೂರಾರು ಎಕರೆ ಕಬ್ಬು ಮತ್ತು ಭತ್ತದ ಬೆಳೆ ಒಣಗುವ ಹಂತಕ್ಕೆ ಬಂದಿದೆ. ಈ ಬಗ್ಗೆ ರೈತರು ಹಲವು ಬಾರಿ ಕಾವೇರಿ ನೀರಾವರಿ ನಿಗಮದ ಎದುರು ಪ್ರತಿಭಟನೆ ನಡೆಸಿದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಟೀಕಿಸಿದರು.ತಾಲೂಕು ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ರೈತರ ಮತ್ತು ಜನಸಾಮಾನ್ಯರ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಜಿಡ್ಡು ಕಟ್ಟಿದ ಆಡಳಿತಕ್ಕೆ ಬಿಸಿ ಮುಟ್ಟಿಸುವುದು ಅನಿವಾರ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ರೈತ ಮುಖಂಡರಾದ ಲಿಂಗಪ್ಪಾಜಿ, ಶೆಟ್ಟಿಹಳ್ಳಿ ರವಿಕುಮಾರ್, ವಿನೋದ್ ಬಾಬು, ದೇಶಿಗೌಡ, ಮುಟ್ಟನಹಳ್ಳಿ ವೆಂಕಟೇಶ್, ಕೊಣಸಾಲೆಪ್ರಸನ್ನ, ಬನ್ನಹಳ್ಳಿ ರಮೇಶ, ಹೊಸಳ್ಳಿ ರವಿ ಮತ್ತಿತರು ಭಾಗವಹಿಸಿದ್ದರು.