ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್
ಕಾರ್ಮಿಕರ ಹಕ್ಕು ರಕ್ಷಿಸಬೇಕು ಹಾಗೂ ಸಾರ್ವಜನಿಕ ವಲಯ ಮತ್ತು ಸರ್ಕಾರಿ ಉದ್ದಿಮೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸೆ. 4ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಅಖಿಲ ಭಾರತ ಮಟ್ಟದ ಕಾರ್ಮಿಕರ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಎನಿಸಿರುವ ಭಾರತದ ಪ್ರಗತಿಗೆ ಕಾರ್ಮಿಕರು ನೀಡುತ್ತಿರುವ ಕೊಡುಗೆ ಅಪಾರವಾಗಿದೆ. ಆದರೆ, ಈವರೆಗೆ ಅಧಿಕಾರಕ್ಕೆ ಬಂದಿರುವ ಸರ್ಕಾರಗಳು ದುಡಿವ ಜನರ ಹಿತ ಕಾಯುವ ಬದಲು ಕಾರ್ಮಿಕ ಹಕ್ಕುಗಳನ್ನು ದಮನ ಮಾಡುವ ನೀತಿಗಳನ್ನೇ ಅನುಸರಿಸುತ್ತಾ ಬಂದಿವೆ. ಕೇಂದ್ರದಲ್ಲಿ ಅಧಿಕಾರದಲ್ಲಿ ಬಿಜೆಪಿ ಸರ್ಕಾರ ಕಾರ್ಮಿಕ ವಿರೋಧಿ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ. ಇದರಿಂದ ದುಡಿವ ಜನರ ಪ್ರಜಾಸತ್ತಾತ್ಮಕ ಹಕ್ಕುಗಳು ನಾಶವಾಗುವ ಅಪಾಯ ಎದುರಾಗಿದೆ. ಬಂಡವಾಳ ಶಾಹಿಗಳ ಹಿತ ಕಾಯುವಕ್ಕಾಗಿಯೇ ಕಾರ್ಮಿಕ ವಿರೋಧಿ ನೀತಿಗಳ ಜಾರಿಗೆ ಕೇಂದ್ರ ಹೆಚ್ಚು ಆಸ್ಥೆ ವಹಿಸಿದೆ. ಹೀಗಾಗಿ ರಾಷ್ಟ್ರಮಟ್ಟದಲ್ಲಿ ಒಗ್ಗಟ್ಟಿನ ಹೋರಾಟ ಕಟ್ಟುವುದು ಅನಿವಾರ್ಯವಾಗಿದೆ. ದೆಹಲಿಯಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಚಳವಳಿ ಮುಂದಿನ ಹಂತದ ಹೋರಾಟಕ್ಕೆ ತಿರುವು ನೀಡಲಿದೆ ಎಂದರು.ಕಾರ್ಮಿಕರ ಹಕ್ಕು ಕಸಿದುಕೊಳ್ಳುವ 4 ಕಾರ್ಮಿಕ ಕಾಯ್ದೆ ರದ್ದುಗೊಳಿಸಬೇಕು. ಸಾರ್ವಜನಿಕ ವಲಯ ಮತ್ತು ಸರ್ಕಾರಿ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಸರ್ಕಾರಿ ಸ್ವಾಮ್ಯದ ವಲಯ ಬಲಗೊಳಿಸಬೇಕು. ವಿದ್ಯುತ್ (ತಿದ್ದುಪಡಿ) ಮಸೂದೆ 2023 ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ರದ್ದುಗೊಳಿಸಬೇಕು.