ಭಟ್ಕಳ: ಪಟ್ಟಣದ ಸರ್ಕಾರಿ ಆಸ್ಪತ್ರೆ ರಸ್ತೆ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ರಸ್ತೆಯ ಹೊಂಡದಲ್ಲಿ ಗಿಡನೆಟ್ಟು ಸಾಂಕೇತಿಕವಾಗಿ ಪ್ರತಿಭಟಿಸಿದರು.
ಸಾಗರ ರಸ್ತೆಯಿಂದ ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ತೀರಾ ಹದಗೆಟ್ಟು ವರ್ಷಗಳೇ ಸಂದಿದ್ದರೂ ಕ್ರಮ ಕೈಗೊಂಡಿಲ್ಲ. ದಿನಕ್ಕೆ ಸರ್ಕಾರಿ ಆಸ್ಪತ್ರೆ ಸೇರಿದಂತೆ ಪಟ್ಟಣ ಭಾಗಕ್ಕೆ, ವಾರದ ಸಂತೆ ಇದ್ದಾಗ ಈ ರಸ್ತೆಯಲ್ಲಿ ಸಾವಿರಾರು ಜನರು ಸಂಚರಿಸುತ್ತಾರೆ. ರಸ್ತೆ ದುಸ್ಥಿತಿಯ ಬಗ್ಗೆ ಅರಿವು ಇರುವ ಜನಪ್ರತಿನಿಧಿಗಳು, ಅಧಿಕಾರಿಗಳು ಮಳೆಗಾಲದೊಳಗೆ ಕ್ರಮ ಕೈಗೊಂಡು ಮರುಡಾಂಬರೀಕರಣ ಮಾಡಿಸಬೇಕಿತ್ತು. ಆದರೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಮೌನ ತಾಳಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಕಾರಿ ಆಸ್ಪತ್ರೆ ರಸ್ತೆ ಸಂಚಾರಕ್ಕೆ ತೀರಾ ಅಗತ್ಯವಿರುವುದರಿಂದ ಕೂಡಲೇ ರಸ್ತೆ ಮರುಡಾಂಬರೀಕರಣಕ್ಕೆ ಮುಂದಾಗಿ ಜನ ಹಾಗೂ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಿದೆ. ಇದು ನಗರಸಭೆ ವ್ಯಾಪ್ತಿಗೆ ಒಳಪಟ್ಟಿದ್ದರಿಂದ ನಗರಸಭೆ ರಸ್ತೆಯ ಅವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜನರು ಒತ್ತಾಯಿಸಿದರು.ಸರ್ಕಾರಿ ಆಸ್ಪತ್ರೆಯ ರಸ್ತೆಯಲ್ಲಿ ಹೊಂಡ ಬಿದ್ದಿದ್ದರಿಂದ ಸಂಚಾರಕ್ಕೆ ತೀರಾ ತೊಂದರೆ ಆಗಿದೆ. ಕೂಡಲೇ ಸಂಬಂಧಿಸಿದವರು ರಸ್ತೆ ಮರುಡಾಂಬರೀಕರಣ ಅಥವಾ ರಿಪೇರಿಗೆ ಮುಂದಾಗಬೇಕು ಎಂದು ಆಟೋ ಚಾಲಕ ಗಣೇಶ ಹಳ್ಳೇರ ಮುಂಡಳ್ಳಿ ಹೇಳಿದರು.