ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಸ್ನಾನಘಟ್ಟದ ಬಳಿ ಭೂಮಿತಾಯಿ ಹೋರಾಟ ಸಮಿತಿ ಹಿರಿಯ ಮುಖಂಡ ಕೆ.ಎಸ್.ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ರೈತ ಕಾರ್ಯಕರ್ತರು ಕಾವೇರಿ ನದಿಗಿಳಿದು ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹಿರಿಯ ಮುಖಂಡ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಬಹಳ ಹಿಂದಿನಿಂದಲೂ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದಕ್ಕೆ ನಮ್ಮನ್ನಾಳಿರುವ ಸರ್ಕಾರ ಹಾಗೂ ರಾಜಕಾರಣಿಗಳೇ ನೇರ ಹೊಣೆಗಾರರು, ಕಾವೇರಿ ನೀರಿನ ವಾಸ್ತವ ವಿಚಾರವನ್ನ ಪ್ರಾಧಿಕಾರದ ಮುಂದೆ ಸಮರ್ಪಕವಾಗಿ ಮಂಡನೆ ಮಾಡಲು ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.ಅಲ್ಲದೇ, ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇತ್ತೀಚಿಗೆ ರೈತರು ತಮ್ಮ ಜಮೀನುಗಳಲ್ಲಿ ನಾಟಿ ಮಾಡಬೇಡಿ, ನಾಟಿ ಮಾಡಿ, ನೀರು ಹರಿಸುವ ಒತ್ತಡ ಹೇರಬೇಡಿ ಎಂದು ಹೇಳಿದ್ದರು. ರೈತರು ಹೊಸ ಬೆಳೆ ಬೆಳೆಯಲು ಮುಂದಾಗುತ್ತಿಲ್ಲ, ಬದಲಿಗೆ ಲಕ್ಷಾಂತರ ಎಕರೆ ಜಮೀನಿನಲ್ಲಿರುವ ತೋಟಗಾರಿಕೆ ಬೆಳೆ ಸೇರಿದಂತೆ ಇತರೆ ಬೆಳೆಗಳನ್ನ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬ ಚಿಂತೆಯಲ್ಲಿದ್ದಾರೆ. ಈ ವಿಷಯವನ್ನು ಪ್ರಾಧಿಕಾರಕ್ಕೆ ಮನದಟ್ಟು ಮಾಡಿಕೊಟ್ಟರೆ, ಅವರು ಪ್ರಬುದ್ಧರಿದ್ದು ಸತ್ಯಾಸತ್ಯತೆ ಅರಿತು ರಾಜ್ಯದ ಜನರಿಗೆ ಅನುಕೂಲ ಮಾಡಿಕೊಡುವವರಿದ್ದರು. ಆದರೆ, ರಾಜ್ಯ ಕಾಂಗ್ರೆಸ್ ನಾಯಕರಿಗೆ ಇದರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದೆ, ಅಧಿಕಾರ ಹಂಚಿಕೊಳ್ಳಲು ದೆಹಲಿಯ ಕಾಂಗ್ರೆಸ್ ನಾಯಕನ ಭೇಟಿಗಾಗಿ ಬೆಳಗ್ಗೆಯಿಂದ ಸಂಜೆಯವರೆಗೆ ದೆಹಲಿಯಲ್ಲಿ ಸರ್ಕಸ್ ಮಾಡುತ್ತಾ ಕುಳಿತಿದ್ದಾರೆ ಎಂದು ಕಿಡಿಕಾರಿದರು.
ಈ ವೇಳೆ ಸಮಿತಿ ಮುಖಂಡರಾದ ರಾಮಕೃಷ್ಣ, ಮಹದೇವು, ಜಯರಾಮು ಮಂಜುನಾಥ್, ಕೃಷ್ಣ, ಶ್ರೀನಿವಾಸ್, ಲೋಕೇಶ್, ರವಿಲಕ್ಷ್ಮಣ, ಮಹದೇವು ಉಂಡವಾಡಿ ಸೇರಿದಂತೆ ಇತರ ಮುಖಂಡರು ನದಿಗಿಳಿದು ಪ್ರತಿಭಟಿಸಿದರು.