ಕನ್ನಡಪ್ರಭ ವಾರ್ತೆ ಖಾನಾಪುರ
ಬಿಹಾರ ಮತ್ತು ಗುಜರಾತ್ ರಾಜ್ಯಗಳಲ್ಲಿ ಜಾರಿಯಲ್ಲಿರುವಂತೆ ಕರ್ನಾಟಕದಲ್ಲೂ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸುವ ಮೂಲಕ ಪಾನಮುಕ್ತ ರಾಜ್ಯದ ಗ್ಯಾರಂಟಿಯನ್ನು ರಾಜ್ಯದ ಜನತೆಗೆ ಒದಗಿಸಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಂಘಟನೆ ಅಧ್ಯಕ್ಷ ನಟರಾಜ ಬಾದಾಮಿ ಕೋರಿದರು.ತಾಲೂಕಿನ ಪಾರಿಶ್ವಾಡ ಗ್ರಾಮದ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಗಾಂಧಿ ಸ್ಮತಿ, ಪಾನ ಮುಕ್ತರ ಅಭಿನಂದನೆ, ಜನಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಮದ್ಯವರ್ಜನ ಶಿಬಿರಗಳನ್ನು ಆಯೋಜಿಸಿ ಮದ್ಯವ್ಯಸನಿಗಳಿಗೆ ಹೊಸ ಜೀವನ ನೀಡುವ ಕೆಲಸ ಕಳೆದ 1997ರಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ. ಇದುವರೆಗೂ ನಡೆದ 2 ಸಾವಿರಕ್ಕೂ ಹೆಚ್ಚು ಮದ್ಯವರ್ಜನ ಶಿಬಿರಗಳಲ್ಲಿ ಲಕ್ಷಾಂತರ ಮದ್ಯವ್ಯಸನಿಗಳನ್ನು ಮದ್ಯಸೇವನೆ ದುಶ್ಚಟದಿಂದ ಹೊರಬಂದು ನವಜೀವನ ನಡೆಸುವಂತೆ ಪ್ರೇರೇಪಿಸಲಾಗಿದೆ. ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿದರೆ ಮದ್ಯವ್ಯಸನಿಗಳಿಂದ ಶೋಷಣೆಗೊಳಗಾಗುತ್ತಿರುವ ಅನೇಕ ಕುಟುಂಬಗಳು ನೆಮ್ಮದಿಯ ಬದುಕು ಜೀವಿಸಬಹುದಾಗಿದೆ. ಹೀಗಾಗಿ ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.ಯೋಜನೆಯ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಕಳೆದ 2 ವರ್ಷಗಳಲ್ಲಿ 7 ಮದ್ಯವರ್ಜನ ಶಿಬಿರಗಳನ್ನು ಸಂಘಟಿಸಿ 174 ಶಿಬಿರಾರ್ಥಿಗಳನ್ನು ಪಾನಮುಕ್ತರನ್ನಾಗಿಸಲಾಗಿದೆ. ಯೋಜನೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಯೋಜನೆಯಡಿ ವಿದ್ಯಾರ್ಥಿವೇತನ, ದುರ್ಬಲ ವರ್ಗದವರಿಗೆ ವಾತ್ಸಲ್ಯ ಯೋಜನೆಯಡಿ ಸೂರು ನಿರ್ಮಾಣ, ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆಗಳ ಜೀರ್ಣೋದ್ಧಾರ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರಲಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದ ಅಂಗವಾಗಿ ಪಾರಿಶ್ವಾಡ ಗ್ರಾಮದ ಬಸ್ ನಿಲ್ದಾಣದಿಂದ ದಾನಮ್ಮದೇವಿ ಕಲ್ಯಾಣ ಮಂಟಪದವರೆಗೆ ಮದ್ಯಪಾನದ ವಿರುದ್ಧ ಜನಜಾಗೃತಿ ಜಾಥಾ ನಡೆಯಿತು. ಇದೇ ವೇಳೆ ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಠರಾವು ಅಂಗೀಕರಿಸಿ ಠರಾವಿನ ಪ್ರತಿಯನ್ನು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪೊಲೀಸ್ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.ರಾಜ್ಯದಲ್ಲಿ ಮದ್ಯಪಾನದಿಂದ ಉಂಟಾಗುವ ಸಾಮಾಜಿಕ ನಷ್ಟದ ಬಗ್ಗೆ ವೈಜ್ಞಾನಿಕ ಅಧ್ಯಯನಕ್ಕೆ ಸಮಿತಿ ರಚಿಸಬೇಕು. ಅಬಕಾರಿ ಇಲಾಖೆಗೆ ಟಾರ್ಗೆಟ್ ಪದ್ಧತಿ ರದ್ದುಗೊಳಿಸಬೇಕು. ಮದ್ಯಪಾನದ ವಿರುದ್ಧ ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಇಲಾಖೆ ಮೂಲಕ ಜಾಗೃತಿ ಮೂಡಿಸಬೇಕು ಮತ್ತು ಈ ಮದ್ಯಪಾನದ ಬಗ್ಗೆ ಜನಜಾಗೃತಿ ಮೂಡಿಸುವ ಪಠ್ಯಕ್ರಮ ಅಳವಡಿಸಬೇಕು. ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಬಾರದು. ಅನಧೀಕೃತ ಮದ್ಯಮಾರಾಟ ತಡೆಯಬೇಕು ಎಂಬ ವಿಷಯಗಳು ಠರಾವಿನಲ್ಲಿದ್ದವು.
ಜಾಥಾದಲ್ಲಿ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಯೋಜನೆ ಸ್ವ-ಸಹಾಯ ಸಂಘಗಳ ಒಕ್ಕೂಟದ ನೂರಾರು ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಹಿರೇಮುನವಳ್ಳಿ ಶಾಂಡಿಲ್ಯಮಠದ ಶಂಭುಲಿಂಗ ಶಿವಾಚಾರ್ಯ ಶ್ರೀಗಳು ಆಶೀರ್ವಚನ ನೀಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ.ಆರ್.ಸೋನೇರ ಅಧ್ಯಕ್ಷತೆ ವಹಿಸಿದ್ದರು. ಪ್ರಮೋದ ಕೊಚೇರಿ, ಮಲ್ಲಿಕಾರ್ಜುನ ಗುಳಶೆಟ್ಟಿ, ಸತೀಶ ನಾಯ್ಕ, ಗೋಪಾಲ ಅಖೇಲಾ, ಶಾಂಭವಿ ಸೇರಿದಂತೆ ಜನಜಾಗೃತಿ ವೇದಿಕೆ, ಯೋಜನೆ ಸ್ವ-ಸಹಾಯ ಸಂಘಗಳ ಒಕ್ಕೂಟದ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು. ಯೋಜನಾಧಿಕಾರಿ ಗಣಪತಿ ನಾಯ್ಕ ಸ್ವಾಗತಿಸಿದರು. ಮೇಲ್ವಿಚಾರಕ ಯದುನಂದ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಮಹಾಂತೇಶ ಧೂಳಿಕೊಪ್ಪ ವಂದಿಸಿದರು.