ಬೆಳೆಹಾನಿ ಸಮೀಕ್ಷೆ ನಿಖರ ಮಾಹಿತಿ ಒದಗಿಸಿ: ಎನ್.ಎಸ್.ಭೋಸರಾಜು

KannadaprabhaNewsNetwork |  
Published : Sep 17, 2025, 01:08 AM IST

ಸಾರಾಂಶ

ಬೆಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸಬೇಕು. ರೈತರಿಗೆ ಅನ್ಯಾಯವಾಗದಂತೆ ಗಮನ ಹರಿಸಬೇಕು ಎಂದು ಶಾಸಕ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕಳೆದ ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾಹಿತಿ ಪಡೆದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಳೆ ಹಾನಿ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಕಳೆದ ನಾಲ್ಕು ತಿಂಗಳು ಸುರಿದ ಧಾರಾಕಾರ ಮಳೆಯಿಂದ ರಸ್ತೆ, ಸೇತುವೆ, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು, ಹಾಗೆಯೇ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಆಗಿದ್ದು, ಈ ಬಗ್ಗೆ ನಿಖರ ಅಂಕಿ ಅಂಶ ನೀಡುವಂತೆ ಸಚಿವರು ನಿರ್ದೇಶನ ನೀಡಿದರು.

ಸಭೆಯ ಆರಂಭದಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಈ ಬಾರಿ ಜೂನ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, 2025 ರ ಜನವರಿ 1 ರಿಂದ ಸೆ. 14 ರವರೆಗೆ 2,331 ಮಿ.ಮೀ. ವಾಡಿಕೆ ಮಳೆಗೆ, 2,799 ಮಿ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದರು.

ಈ ಬಾರಿ ಮರ ಬಿದ್ದು ಇಬ್ಬರು, ಮನೆ ಗೋಡೆ ಕುಸಿದು ಒಬ್ಬರು ಮೃತ ಪಟ್ಟಿದ್ದಾರೆ. ಹಾಗೆಯೇ 23 ಜಾನುವಾರುಗಳು ಮೃತ ಪಟ್ಟಿದ್ದು, ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.

ವಿಪತ್ತು ಸಮರ್ಪಕ ನಿರ್ವಹಣೆ:

ಕಳೆದ ಬಾರಿಯಂತೆ ಈ ಬಾರಿಯೂ ಸಹ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ವಿಪತ್ತನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದರು.

ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬತ್ತ, ಅಡಿಕೆ, ಸಂಬಂಧಿಸಿದಂತೆ ಬೆಳೆ ಹಾನಿ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಕೃಷಿ, ತೋಟಗಾರಿಕೆ, ಕಂದಾಯ ಹಾಗೆಯೇ ಕಾಫಿ ಮಂಡಳಿಯವರು ಬೆಳೆ ಹಾನಿ ಸಂಬಂಧ ಜಂಟಿ ಸಮೀಕ್ಷೆ ಕೈಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವಿವರಿಸಿದರು.

ಪ್ರಸ್ತುತ ಪ್ರಾಕೃತಿಕ ವಿಕೋಪ ನಿಧಿಯಡಿ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 3505.14 ಲಕ್ಷ ರು. ಹಣವಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಹಾನಿ ಸಂಬಂಧ 4.52 ಕೋಟಿ ರು. ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಹಾಗೆಯೇ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಗರ್ವಾಲೆ ಗ್ರಾಮದ ಅಂಗನವಾಡಿಗೆ ಮರ ಬಿದ್ದು ಹಾನಿಯಾಗಿತ್ತು. ಉಳಿದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಕಂಬಗಳು, ವಿದ್ಯುತ್ ಪರಿವರ್ತಕಗಳು ಹಾನಿಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾಹಿತಿ ನೀಡಿ ಮುಂಗಾರು ಸಂದರ್ಭದಲ್ಲಿ ಮುಟ್ಲು ಗ್ರಾಮ ವ್ಯಾಪ್ತಿಯಲ್ಲಿ ಬತ್ತ ಬೆಳೆಗೆ ಹಾನಿಯಾಗಿದೆ ಎಂದು ತಿಳಿಸಿದರು.

ನಿಖರ ಮಾಹಿತಿ ಒದಗಿಸಿ:

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಬೆಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸಬೇಕು. ರೈತರಿಗೆ ಅನ್ಯಾಯವಾಗದಂತೆ ಗಮನಹರಿಸಬೇಕು ಎಂದರು.

ರೈತರಲ್ಲಿ ವಿಶ್ವಾಸ ಮೂಡಿಸಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕು. ಎನ್‍ಡಿಆರ್‌ಎಫ್, ಎಸ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಸಮೀಕ್ಷೆ ಕೈಗೊಳ್ಳಬೇಕು ಎಂದು ಹೇಳಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ ಅವರು ತೋಟಗಾರಿಕೆ ಬೆಳೆಯಲ್ಲಿ ಅಡಿಕೆ ಬರಲಿದ್ದು, ಈ ಸಂಬಂಧ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

14 ಕೋಟಿ ರು. ಬಿಡುಗಡೆ:

ಈ ಸಂದರ್ಭದಲ್ಲಿ ಮಾತನಾಡಿದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಅವರು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಳೆ ಹಾನಿ ಸಂಬಂಧ 4.52 ಕೋಟಿ ರು.. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಸ್ತೆ ನಿರ್ವಹಣೆಗಾಗಿ ಸರ್ಕಾರದಿಂದ 14 ಕೋಟಿ ರು. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್ ಅವರು ಮಾಹಿತಿ ನೀಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ, ಸೇತುವೆ, ತಡೆಗೋಡೆ, ಮೋರಿ, ಕೆರೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, 54 ಕೋಟಿ ರು.. ಬಿಡುಗಡೆಗೆ ಎನ್‍ಡಿಆರ್‍ಎಫ್ ನಡಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಪಂಚಾಯತ್ ರಾಜ್ ಎಂಜಿನಿಯರ್ ವಿಭಾಗ ಮತ್ತು ಉಪ ವಿಭಾಗದಲ್ಲಿ ಸಹಾಯಕ ಹಾಗೂ ಕಿರಿಯ ಎಂಜಿನಿಯರ್‌ಗಳ ಕೊರತೆ ಇದ್ದು, ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ ಎಂದು ಸಭೆಯಲ್ಲಿ ಅವಲತ್ತುಕೊಂಡರು.

ಮಳೆಗಾಲ ಸಂದರ್ಭದಲ್ಲಿ ಗ್ರಾಮೀಣ ರಸ್ತೆಯ ಗುಂಡಿಯನ್ನು ಮುಚ್ಚಲಾಗಿದ್ದು, ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸಲಾಗಿದೆ ಎಂದರು.

ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಕಳೆದ ಬಾರಿಯ ಮಳೆಹಾನಿಯ ಕಾಮಗಾರಿಯ ಮಾಹಿತಿ ನೀಡುವಂತೆ ಸೂಚಿಸಿದರು.

ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ಹಣ ಬೇಕು ಎಂದು ಎಂಜಿನಿಯರ್‌ಗಳು ಮನವಿ ಮಾಡುತ್ತಾರೆ. ಆದರೆ ಹಣವೇ ಬೇಡವೆಂದು ಹೇಳುತ್ತಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದರು.

ಅಭಿವೃದ್ಧಿ ಕೆಲಸಗಳು ನಿರಂತರ:

ಸಹಾಯಕ ಹಾಗೂ ಕಿರಿಯ ಎಂಜಿನಿಯರ್‍ಗಳು ಇಲ್ಲ ಎಂದು ಅಭಿವೃದ್ಧಿ ಕೆಲಸ ನಿಲ್ಲಿಸಲು ಸಾಧ್ಯವಿಲ್ಲ. ಮಳೆ ಹಾನಿ ಸೇರಿದಂತೆ ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಜೊತೆ ದೂರವಾಣಿ ಮುಖಾಂತರ ಚರ್ಚಿಸಿ ಸಹಾಯಕ ಹಾಗೂ ಕಿರಿಯ ಅಗತ್ಯ ಎಂಜಿನಿಯರ್‍ಗಳನ್ನು ನಿಯೋಜಿಸುವಂತೆ ಕೋರಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಇತರರು ಇದ್ದರು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ