ಪ್ರಗತಿಯ ಪೂರಕ ಮಾಹಿತಿ ಒದಗಿಸಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : May 09, 2025, 12:53 AM IST
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗುವ ರಾಜ್ಯಮಟ್ಟದ ಸಭೆ ಹಿನ್ನಲೆಯಲ್ಲಿ ಬಳ್ಳಾರಿ ಡಿಸಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಜರುಗಿತು.  ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.  | Kannada Prabha

ಸಾರಾಂಶ

ಇದೇ ಮೇ 21, 22 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಫಲಾನುಭವಿಗಳಿಗೆ ಯೋಜನೆ ತಲುಪಿಸಲು ಅಧಿಕಾರಿಗಳಿಗೆ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಇದೇ ಮೇ 21, 22 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ನಾನಾ ಯೋಜನೆಗಳಡಿ ಸಾಧಿಸಲಾದ ಪ್ರಗತಿಯ ಪೂರಕ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನಲ್ಲಿ ಸಿಎಂ ನೇತೃತ್ವದ ಸಭೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಸರಬರಾಜಾಗುವ ಕುಡಿಯುವ ನೀರಿನ ನಿಯಮಿತ ಪರೀಕ್ಷೆ, ಕ್ಲೋರಿನೇಷನ್ ತಪಾಸಣೆ ಹಾಗೂ ಇತರೆ ಕೈಗೊಳ್ಳುವ ಕಾರ್ಯದ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಬಿತ್ತನೆ ಕ್ಷೇತ್ರ, ರಸಗೊಬ್ಬರ ವಿತರಣೆ ಮತ್ತು ಬಾಕಿ ಇರುವ ದಾಸ್ತಾನು, ಬೆಳೆ ವಿಮೆಗೆ ರೈತರ ನೋಂದಣಿ ಸೇರಿದಂತೆ ಎಲ್ಲಾ ಸಂಪೂರ್ಣ ಮಾಹಿತಿ ಒದಗಿಸಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ವಿವಿಧ ನಿಗಮಗಳ ಗಂಗಕಲ್ಯಾಣ ಯೋಜನೆಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ, ಆಯ್ಕೆಗೊಂಡ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ವಿಳಂಬ ಆಗದ ರೀತಿಯಲ್ಲಿ ಯೋಜನೆ ತಲುಪಿಸಬೇಕು. ವಿದ್ಯುತ್ ಸರಬರಾಜು ಹಾಗೂ ಇತರೆ ಸಮಸ್ಯೆ ಇದ್ದಲ್ಲಿ ಅಧಿಕಾರಿಗಳ ಸಮನ್ವಯತೆಯಿಂದ ಪರಿಹಾರವಾಗಬೇಕು ಎಂದು ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಹೆಚ್ಚಿನ ಕಾಳಜಿ ತೋರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ವಿವಿಧೆಡೆ ಬಾಕಿ ಇರುವ ಇಂದಿರಾ ಕ್ಯಾಂಟೀನ್ ಗಳ ನಿರ್ಮಾಣ ಕಾಮಗಾರಿಯನ್ನು ಸ್ಥಳೀಯ ಶಾಸಕರ ಸಹಕಾರದಲ್ಲಿ ಪೂರ್ಣಗೊಳಿಸಬೇಕು. ಎಲ್ಲಾ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು ಎಂದು ಡಿಯುಡಿಸಿ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳ ಪ್ರಗತಿವಾರು ವರದಿ ಸಲ್ಲಿಸಬೇಕು. ಅರ್ಹ ಸಾರ್ವಜನಿಕರಿಗೆ ಯೋಜನೆಗಳು ತಲುಪಿಸುವಲ್ಲಿ ಆಗುವ ಸಮಸ್ಯೆ ಅಥವಾ ವಿಳಂಬ ಕುರಿತು ಪೂರಕ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಬಿ-ಖಾತಾ ವಿತರಣೆಯಲ್ಲಿ ಪ್ರಗತಿ ಹೊಂದಬೇಕು, ಬಿ-ಖಾತಾ ಅಭಿಯಾನ ಹೆಚ್ಚಾಗಿ ಆಯೋಜಿಸಬೇಕು. ತೆರಿಗೆ ಸಂಗ್ರಹಣ ವಿವರ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ನಡೆದ ಜನತಾ ದರ್ಶನ ಕಾರ್ಯಕ್ರಮಗಳಲ್ಲಿ ವಿವಿಧ ಇಲಾಖೆಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾದ ಅಹವಾಲು ವಿಲೇವಾರಿ ಬಗ್ಗೆ ವಿಚಾರಿಸಿದ ಜಿಲ್ಲಾಧಿಕಾರಿಗಳು, ಬಾಕಿಯಿರುವ ಎಲ್ಲಾ ಅರ್ಜಿಗಳನ್ನು ನಿಯಾಮನುಸಾರವಾಗಿ ಇಲಾಖೆಗಳು ವಿಲೇವಾರಿ ಮಾಡಬೇಕು, ಕೇವಲ ಹಿಂಬರಹ ನೀಡುವಂತಹದ್ದಲ್ಲ, ಯಾವುದೇ ಅರ್ಜಿಗಳನ್ನು ತಮ್ಮಲ್ಲಿ ಇಟ್ಟುಕೊಳ್ಳಬಾರದು. ಬಾಕಿಯಿರುವ ಪ್ರಕರಣಗಳನ್ನು ವಿಲೇ ಮಾಡುವ ಕಾರ್ಯವಾಗಬೇಕು. ಈ ಕುರಿತು ಪೂರಕ ಮಾಹಿತಿ ನೀಡಬೇಕು ಎಂದು ಎಲ್ಲಾ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳ ವಿಲೇವಾರಿ ಮಾಹಿತಿ, ಎಸ್ಸಿ-ಎಸ್ಪಿ ಮತ್ತು ಟಿಎಸ್ಪಿ ಯೋಜನೆ ಅನುದಾನ ಬಳಕೆ, ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿಯಿರುವ ಅರ್ಜಿಗಳ ಮಾಹಿತಿ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಸರ್ಕಾರಿ ಕಾಲೇಜುಗಳ ಜಮೀನು, ವಸತಿ ನಿಲಯ, ಅಂಗನವಾಡಿ, ಸ್ಮಶಾನ ಭೂಮಿ ಖರೀದಿ ಯಾವುದೇ ಬಾಕಿ ಇದ್ದರೂ ಗಮನಕ್ಕೆ ತರಬೇಕು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗಿಯಾಗುವುದರಿಂದ ತಮ್ಮ ಇಲಾಖೆಗಳಿಗೆ ಬೇಕಾದ ಪ್ರಸ್ತಾವನೆ, ಬೇಡಿಕೆಗಳಿದ್ದಲ್ಲಿ ಮಾಹಿತಿ ನೀಡಿ ಎಂದರು.

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡ ಅವರು, ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ವಾರದೊಳಗಾಗಿ ಸಂಪೂರ್ಣ ಮಾಹಿತಿಯನ್ನು ಸೂಕ್ತ ನಮೂನೆಯಲ್ಲಿ ತಪ್ಪಿಲ್ಲದಂತೆ ಅಧಿಕಾರಿಗಳೇ ಖುದ್ದಾಗಿ ನಮೂದಿಸಬೇಕು. ಕಡ್ಡಾಯವಾಗಿ ಪ್ರಗತಿ ವರದಿಯನ್ನು ನಿಗದಿತ ಅವಧಿಯೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದರು.

ಎಡಿಸಿ ಮಹಮ್ಮದ್ ಝುಬೇರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಕೃಷಿ ಜಂಟಿ ನಿರ್ದೇಶಕ ಸೋಮ್ ಸುಂದರ್, ಜಿಪಂ ಯೋಜನಾಧಿಕಾರಿ ವಿನೋದ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ