ಲಕ್ಷ್ಮೇಶ್ವರ: ಕಳೆದ ತಿಂಗಳಿಂದ ಕುಡಿಯುವ ನೀರು ಪೂರೈಸಿಲ್ಲ ಎಂದು ಆರೋಪಿಸಿ ಮಂಗಳವಾರ ಪಟ್ಟಣದ 10 ಮತ್ತು 16ನೇ ವಾರ್ಡ್ಗಳ ಮಹಿಳೆಯರು ಪುರಸಭೆಗೆ ದೌಡಾಯಿಸಿ ಪ್ರತಿಭಟನೆ ನಡೆಸಿದರು.
ಮಹಿಳೆಯರು ಪುರಸಭೆ ಅಧ್ಯಕ್ಷ ಹಾಗೂ ಮುಖ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ವರ್ಷ ಪುರಸಭೆಗೆ ತುಂಬಬೇಕಾದ ನೀರಿನ ಕರ ತಪ್ಪದೆ ತುಂಬುತ್ತಿದ್ದೇವೆ. ಅದರೂ ಸಹ ನೀರು ಪೂರೈಸಲು ಪುರಸಭೆಯಿಂದ ಆಗುತ್ತಿಲ್ಲ. ನೀರು ಕೊಡದೆ ಕರ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಪುರಸಭೆ ಸದಸ್ಯ ಪ್ರವೀಣ ಬಾಳಿಕಾಯಿ, ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಜಿಲ್ಲಾ ಅಧ್ಯಕ್ಷ ಶರಣು ಗೋಡಿ, ತಾಲೂಕು ಘಟಕದ ಅಧ್ಯಕ್ಷ ನಾಗೇಶ ಅಮರಾಪುರ ಮಾತನಾಡಿ, ನೀರು ಪೂರೈಸುವಲ್ಲಿ ಪುರಸಭೆ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರಿಂದ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿ ಜನರು ಪರದಾಡಬೇಕಾಗಿದೆ. ಆದಷ್ಟು ಬೇಗನೆ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ ಮಾತನಾಡಿ, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.ಆದಷ್ಟು ಬೇಗನೇ ಸಮಸ್ಯೆ ಪರಿಹರಿಸಿ ಸರಿಯಾಗಿ ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವೇಳೆ ವಾರ್ಡನ ಮಹಿಳೆಯರು ಇದ್ದರು.