ಹಾಸ್ಟೆಲ್‌ಗಳಿಗೆ ಸಮರ್ಪಕ ಸೌಲಭ್ಯ ಕಲ್ಪಿಸಲು ಆಗ್ರಹ, ರೋಣದಲ್ಲಿ ಎಬಿವಿಪಿ ಪ್ರತಿಭಟನೆ

KannadaprabhaNewsNetwork |  
Published : Jul 24, 2025, 12:45 AM IST
23 ರೋಣ 1. ವಿದ್ಯಾರ್ಥಿಗಳ ಸರ್ಕಾರಿ  ಹಾಸ್ಟೆಲ್ ಗಳಲ್ಲಿ ಸಮರ್ಪಕ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ರೋಣ ಪಟ್ಟಣದ ಪೋತದಾರ ರಾಜನ ಕಟ್ಟೆ ಬಳಿ ಎಬಿವಿಪಿ ಉಪ ತಹಶಿಲ್ದಾರ ಜೆ.ಟಿ.ಕೊಪ್ಪದ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಬುಧವಾರ ರೋಣ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪಟ್ಟಣದ ಪೋತದಾರ ರಾಜನ ಕಟ್ಟೆ ಬಳಿ ಪ್ರತಿಭಟನೆ ಜರುಗಿತು.

ರೋಣ: ಬಿಸಿಎಂ ಹಾಗೂ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ಸು, ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಬುಧವಾರ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪಟ್ಟಣದ ಪೋತದಾರ ರಾಜನ ಕಟ್ಟೆ ಬಳಿ ಪ್ರತಿಭಟನೆ ಜರುಗಿತು.

ಈ ವೇಳೆ ಎಬಿವಿಪಿ ಕಾರ್ಯದರ್ಶಿ ಸಚಿನ ಕುಂದರಗಿ ಮಾತನಾಡಿ, ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿನ ಶಿಕ್ಷಣ ವ್ಯವಸ್ಥೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಒದಗಿಸುವುದು ಸರ್ಕಾರಗಳ ಆದ್ಯ ಕರ್ತವ್ಯ. ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಅವುಗಳ ಸಮರ್ಪಕ ಅನುಷ್ಠಾನವಾಗದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಕೂಡಲೇ ಈ ಕುರಿತು ಸರ್ಕಾರ ಗಮನ ಹರಿಸಿ ಹಾಸ್ಟೆಲ್‌ಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ 1.258 ಹಾಸ್ಟೆಲ್‌ಗಳಿದ್ದು 1,68,833 ವಿದ್ಯಾರ್ಥಿಗಳು ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 1972 ವಸತಿ ನಿಲಯಗಳಿದ್ದು, 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಹಿಂದಿನ ವರ್ಷಗಳ ಸರ್ಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವುದು. ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು, ರೈತ ವಿದ್ಯಾನಿಧಿ ರದ್ದುಗೊಳಿಸಿರುವುದು, ಇನ್ನುಳಿದ ವಿದ್ಯಾರ್ಥಿ ವೇತನ ಸರಿಯಾಗಿ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಉಪ ತಹಸೀಲ್ದಾರ್‌ ಜೆ.ಟಿ. ಕೊಪ್ಪದ ಮನವಿ ಸ್ವೀಕರಿಸಿದರು. ಎಬಿವಿಪಿ ತಾಲೂಕು ಸಂಚಾಲಕ ವೀರೇಶ ಉಳ್ಳಾಗಡ್ಡಿ, ಎಸ್.ಪಿ. ಕುರಿ, ಸಹ ಕಾರ್ಯದರ್ಶಿ ಶಿವಕುಮಾರ ಬನಪ್ನವರ, ಭೀಮಪ್ಪ ಬಾವಿ, ಶರಣಪ್ಪ ಮುದಿಗೌಡ್ರ, ದಶರಥ, ಮುತ್ತಣ್ಣ ಭಾಗವಹಿಸಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ