)
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ವಿಧಾನ ಪರಿಷತ್ ಅಧಿವೇಶನದಲ್ಲಿ ಈ ಕುರಿತು ಪ್ರಶ್ನೆಗೆ ಉತ್ತರ ಪಡೆದು ಮಾತನಾಡಿದ ಅವರು, ಜಿಲ್ಲೆಯ ಅನೇಕ ತಾಲೂಕುಗಳು ಬರಪೀಡಿತ ಪ್ರದೇಶವಾಗಿದ್ದು, ನೀರಿನ ಸಮಸ್ಯೆ ಎದುರಿಸುತ್ತಿವೆ. ಅದರಲ್ಲೂ ಹನೂರು ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿತ ಕಂಡ ಪರಿಣಾಮ ಅಲ್ಲಿನ ನಿವಾಸಿಗಳು ಹೆಚ್ಚಿನ ಫ್ಲೋರೈಡ್ ಅಂಶವುಳ್ಳ ನೀರಿನ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ತಾಲೂಕಿನ ಮಾರ್ಟಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಕಳೆದ ಕೆಲವು ದಿನಗಳ ಹಿಂದೆ ಕಿಡ್ನಿ ವೈಫಲ್ಯದಿಂದ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು ಜನರ ಕಿಡ್ನಿಯು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿರುವ ಧಾರುಣ ಪರಿಸ್ಥಿತಿ ನಿರ್ಮಾಣವಾಗಿದೆ.ಡೆಂಟಲ್ ಫ್ಲೋರೋಸಿಸ್ನಿಂದ ಮಕ್ಕಳ ಹಲ್ಲುಗಳಲ್ಲಿ ಬಿಳಿ ಅಥವಾ ಕಂದು ಕಲೆಗಳು ಉಂಟಾಗಿ ಹಲ್ಲುಗಳ ದುರ್ಬಲವಾಗುತ್ತಿವೆ. ಸ್ಕೆಲೆಟಲ್ ಫ್ಲೋರೋಸಿಸ್ನಿಂದ ಹಿರಿಯರಲ್ಲಿ ಮೂಳೆಗಳು ದುರ್ಬಲವಾಗಿ ಕೀಲು ನೋವು ಭಾದಿಸುತ್ತಿದೆ ಎಂದು ಸಮಸ್ಯೆಯನ್ನು ತೆರೆದಿಟ್ಟರು.
ಒಂದೆಡೆ ಬೀಸಿಲ ತಾಪ ಏರಿಕೆ ಕಾಣುತ್ತಿದೆ. ಮತ್ತೊಂದೆಡೆ ನೀರಿನ ಸಮಸ್ಯೆ ಇದೆ. ಇನ್ನೂ ನಾಲ್ಕೈದು ತಿಂಗಳಲ್ಲಿ ಪರಿಹಾರ ಕಲ್ಪಿಸದಿದ್ದರೆ ಈ ಭಾಗದ ಜನರ ಸ್ಥಿತಿ ಪರಿತಪಿಸುವಂತಾಗಲಿದೆ ಎಂದು ಹೇಳಿದರು.
ಈ ನಿಟ್ಟಿನಲ್ಲಿ ಇಲ್ಲಿನ ಗ್ರಾಮ ಪಂಚಾಯಿತಿಗಳು ಪ್ರತೀ ಹದಿನೈದು ದಿನಕ್ಕೊಮ್ಮೆ ನಿರಂತರವಾಗಿ ಫ್ಲೋರೈಡ್ ಪರೀಕ್ಷೆ ಮಾಡಬೇಕು, ಕಚೇರಿಯಲ್ಲಿ ಪರೀಕ್ಷಾ ಫಲಕ ಅಳವಡಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಶೀಲಿಸಬೇಕು. ಈಗಾಗಲೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.ಈ ಭಾಗದಲ್ಲಿ ನೀರಿನ ಶೇಖರಣೆಗೆ ಹೆಚ್ಚಿನ ಚೆಕ್ ಡ್ಯಾಂ ನಿರ್ಮಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮಾಡಬೇಕು. ಕೆರೆಗಳಿಗೆ ನೀರು ತುಂಬಿಸಬೇಕು. ಜಂಟಿ ಟಾಸ್ಕ್ ಫೋರ್ಸ್ ಸಮಿತಿ ನೇಮಿಸಿ ಈ ಭಾಗದ ನೀರಿನ ಬವಣೆಯನ್ನು ಪರಿಹರಿಸಬೇಕು ಎಂದು ಹೇಳಿದರು.
ಪ್ರಸ್ತುತ ಮುಖ್ಯಮಂತ್ರಿಗಳು ಈ ಸಾಲಿನ ಬಜೆಟ್ನಲ್ಲಿ ಈ ಭಾಗದ ನೀರಾವರಿ ಸೌಲಭ್ಯಕ್ಕಾಗಿ ಎಡತೊರೆಹಳ್ಳ ಯೋಜನೆಗೆ 490 ಕೋಟಿ ಅನುದಾನ ಒದಗಿಸಿರುವುದು ಶ್ಲಾಘನೀಯ ಎಂದರು.ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿ, ಕಳೆದ ಒಂದುವರೆ ವರ್ಷದಿಂದ ನೀರಿನ ಕೊರತೆ ಎದುರಿಸುತ್ತಿರುವ ಗ್ರಾಮಗಳಲ್ಲಿ ನೀರಿನ ಸೌಲಭ್ಯ ಒದಗಿಸಲು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಈ ಭಾಗದ ಸಮಸ್ಯೆ ಪರಿಹರಿಸಲು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ತುರ್ತಾಗಿ ಕ್ರಿಯಾಯೋಜನೆ ಸಲ್ಲಿಸುವಂತೆ ತಿಳಿಸಲಾಗಿದೆ. ಸದ್ಯಕ್ಕೆ ಖಾಸಗಿ ಬೋರ್ ವೆಲ್ ಹಾಗೂ ಟ್ಯಾಂಕರ್ಗಳಿಂದ ನೀರನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ನಮ್ಮ ಸರ್ಕಾರವು ನೀರಿನ ಗುಣಮಟ್ಟ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಪ್ರತೀ ತಿಂಗಳು ನಾನೆ ಸಭೆ ನಡೆಸುತ್ತಿದ್ದೇನೆ. ನಿರಂತರವಾಗಿ ಇನ್ನೂ ಹೆಚ್ಚಿನ ಪರೀಕ್ಷೆ ಮಾಡಲು ಸೂಚಿಸಲಾಗುವುದು. ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಆರೋಗ್ಯ ಶಿಬಿರ ಏರ್ಪಡಿಸಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು. ಪ್ರಮುಖವಾಗಿ ಜಲಮೂಲಗಳ ಸಂರಕ್ಷಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.