ಹೆಣ್ಣುಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಿ: ರಾಜಶೇಖರ ಹಿಟ್ನಾಳ

KannadaprabhaNewsNetwork |  
Published : Feb 28, 2026, 02:30 AM IST
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ-2026ರ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಯೋಜನೆಯಡಿ ಸುಸ್ಥಿರ ಭವಿಷ್ಯಕ್ಕೆ ಹೆಣ್ಣುಮಕ್ಕಳ ಸಬಲೀಕರಣ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ-2026ರ ಕಾರ್ಯಕ್ರಮ ನಡೆಯಿತು.

ಕೊಪ್ಪಳ: ಪ್ರಸ್ತುತ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ದಕ್ಷತೆ ಸಾಬೀತುಪಡಿಸುತ್ತಿದ್ದು, ಅವರಿಗೆ ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಹಾಗೂ ಪ್ರಾಮುಖ್ಯ ನೀಡುವುದು ನಮ್ಮೆಲ್ಲರ ಆದ್ಯತೆ ಆಗಬೇಕು ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ಶುಕ್ರವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ (ಬೇಟಿ ಬಚಾವೋ ಬೇಟಿ ಪಡಾವೋ) ಯೋಜನೆಯಡಿ ಸುಸ್ಥಿರ ಭವಿಷ್ಯಕ್ಕೆ ಹೆಣ್ಣುಮಕ್ಕಳ ಸಬಲೀಕರಣ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ-2026ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮದು ಪಿತೃ ಪ್ರಧಾನ ಸಮಾಜವಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣ ಎನ್ನುವುದು ಇನ್ನೂ ಮರೀಚಿಕೆಯಾಗಿದೆ. ಆದರೆ ಹೆಣ್ಣು ಸ್ವಾವಲಂಬಿ ಹಾಗೂ ಸ್ವತಂತ್ರಳಾಗಬೇಕೆಂದರೆ ಮೊದಲು ಆಕೆಗೆ ಶಿಕ್ಷಣ ನೀಡಬೇಕು. ಪೋಷಕರ ಪ್ರಮುಖ ಜವಾಬ್ದಾರಿ ಅದು. ಹೆಣ್ಣುಮಕ್ಕಳ ಸಬಲೀಕರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಮಹತ್ವದ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳ ಸಮರ್ಪಕ ಅನುಷ್ಠಾನವಾಗಬೇಕು. 2029ಕ್ಕೆ ಸಂಸತ್ತಿನಲ್ಲಿ ಶೇ. 33ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ ಯೋಜನೆಯಿದೆ ಎಂದು ಹೇಳಿದರು.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ವಿ. ಗಡಾದ್ ಮಾತನಾಡಿ, ಹೆಣ್ಣುಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡಬೇಕು. ಹೆಣ್ಣುಮಕ್ಕಳ ಶ್ರೇಯೋಭಿವೃದ್ಧಿಗೆ ಪ್ರೋತ್ಸಾಹಿಸಬೇಕು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ಶ್ರೇಷ್ಠವಾದ ಸ್ಥಾನ ನೀಡಿದ್ದೇವೆ. ಅದನ್ನು ಗೌರವಿಸುವಂತೆ ಗಂಡುಮಗುವಿಗೂ ತಿಳಿವಳಿಕೆ ನೀಡಬೇಕು. ಸದೃಢ ಆರೋಗ್ಯ, ಪೌಷ್ಟಿಕ ಆಹಾರ ಪ್ರತಿ ಮಗುವಿನ ಹಕ್ಕು. ಪೋಷಕರು ಅದನ್ನು ಒದಗಿಸಬೇಕು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಮಾತನಾಡಿ, ಹೆಣ್ಣುಮಕ್ಕಳು ಕಾರ್ಯನಿರ್ವಹಿಸದ ಕ್ಷೇತ್ರಗಳಿಲ್ಲ. ಇತ್ತೀಚೆಗೆ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಹೆಣ್ಣುಮಕ್ಕಳೇ ಹೆಚ್ಚಿನ ಸ್ಥಾನ ಪಡೆದಿದ್ದಾರೆ. ಇದು ಆಶಾದಾಯಕ ಸಂಗತಿ. ಹೆಣ್ಣುಮಕ್ಕಳಿಗೆ ಶಿಕ್ಷಣವನ್ನು ಕಡ್ಡಾಯವಾಗಿ ನೀಡಬೇಕು. ವೃತ್ತಿ ಆಧಾರಿತ ಕೌಶಲ್ಯಗಳ ಬಗಗೆ ಹೆಚ್ಚಿನ ತರಬೇತಿ ನೀಡಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಟರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರದ ಬಾಲಕಿಯರ ಬಾಲಮಂದಿರದ ಮಕ್ಕಳು ಯೋಗ ನೃತ್ಯ ಪ್ರದರ್ಶಿಸಿದರು. ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ ಉಪಸ್ಥಿತರಿದ್ದರು. ಪೋಷಣ್ ಅಭಿಯಾನದಡಿ ಕ್ಯಾಲೆಂಡರ್ ಬಿಡುಗಡೆ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಕುರಿತು ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಷ್ಟಪಟ್ಟು ದುಡಿದರೂ ರೈತರಿಗೆ ತಪ್ಪದ ಸಂಕಷ್ಟ: ಯು. ಬಸವರಾಜ
ಅಘನಾಶಿನಿ ವೇದಾವತಿ ಜೋಡಣೆ ವಿರುದ್ಧ ನಿರಂತರ ಹೋರಾಟ