
ಮಡಿಕೇರಿ: ಪ್ರಧಾನಮಂತ್ರಿಯವರ ‘ವಿಶ್ವಕರ್ಮ’ ಯೋಜನೆ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 111 ಅರ್ಜಿ ಸ್ವೀಕರಿಸಲಾಗಿದ್ದು, ಇದರಲ್ಲಿ 111 ಅರ್ಜಿ ಅಂಗೀಕರಿಸಲಾಗಿದೆ ಎಂದು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 419 ಅರ್ಜಿ ಸ್ವೀಕರಿಸಲಾಗಿದ್ದು, 111 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 307 ಅರ್ಜಿಗಳು ವಿವಿಧ ಹಂತದಲ್ಲಿ ಬಾಕಿ ಇದ್ದು, 1 ಅರ್ಜಿ ತಿರಸ್ಕೃತಗೊಂಡಿದೆ ಎಂದು ಕೆ. ಹನುಮಂತರಾಯ ಹೇಳಿದರು. ಈ ಸಂದರ್ಭ ಮಾತನಾಡಿದ ಸಮಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ, ತರಬೇತಿ ಪಡೆದವರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆಯೇ, ಸರ್ಕಾರದ ಕಾರ್ಯಕ್ರಮ ಉಪಯೋಗ ಆಗುತ್ತಿದೆಯೇ ಎಂಬ ಬಗ್ಗೆ ಮಾಹಿತಿ ಒದಗಿಸುವಂತಾಗಬೇಕು ಎಂದರು.‘ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇರ್ ಅವರು ಸಮಿತಿ ಸದಸ್ಯರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಬೇಕು. ಸರ್ಕಾರದ ಕಾರ್ಯಕ್ರಮಗಳು ಅರ್ಹರಿಗೆ ತಲುಪುತ್ತಿವೆಯೇ ಎಂಬ ಬಗ್ಗೆ ತಿಳಿಸಬೇಕು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಕೆಎಸ್ಎಸ್ಐಡಿಸಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಟಿ. ವೇದಾವತಿ, ಕೆಐಎಡಿಬಿ ಮಾಧುಸ್ವಾಮಿ, ನಗರಸಭೆ ಪೌರಾಯುಕ್ತರಾದ ಎಚ್.ಆರ್. ರಮೇಶ್, ಸಣ್ಣ ಕೈಗಾರಿಕಾ ಘಟಕಗಳ ಅಧ್ಯಕ್ಷ ಕೆ.ಎ. ಸಂದೀಪ್ ಕುಮಾರ್, ಕೊಡಗು ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಹಾಗೂ ಮೈಸೂರು ಕೆಐಎಡಿಬಿ ಕೈಗಾರಿಕಾ ಕಾರ್ಯಪಾಲಕ ಅಭಿಯಂತರರು, ಕೆಎಸ್ ಎಸ್ ಐಡಿಸಿ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಇದ್ದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದವರು ಮಾತನಾಡಿ, ನಿಗಮದ ಮಂಡಳಿ ಸಭೆ ಕರೆದು ಈ ವಿಷಯವಾಗಿ ಕೂಲಂಕಷವಾಗಿ ಚರ್ಚಿಸಿ, ಕಾಂಪ್ಲೆಕ್ಸ್ ಮೌಲ್ಯಕ್ಕೆ ವಿಲೇವಾರಿಯಾಗದ ಕಾರಣ ನವೀಕರಣಗೊಳಿಸಲು ರೇಖಾ ಅಂದಾಜು ಪಟ್ಟಿಯನ್ನು ಸಲ್ಲಿಸಲು ಹಾಗೂ ಪ್ರಸ್ತುತ ಕಟ್ಟಡದ ಭೌತಿಕ ಸ್ಥಿತಿ-ಗತಿಗಳ ವಿಷಯದ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಕಟ್ಟಡ ಕಾಮಗಾರಿಯನ್ನು ನಿಗಮದ ವತಿಯಿಂದ ನವೀಕರಣಗೊಳಿಸಿ, ಬಾಡಿಗೆ ಆಧಾರದ ಮೇಲೆ ನೀಡುವಲ್ಲಿ ಸಭೆಯಲ್ಲಿ ನಿರ್ಣಯಿಸಿರುವ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಯಿತು.
ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ಆದಷ್ಟು ಶೀಘ್ರವಾಗಿ ಟೆಂಡರ್ ಕರೆದು, ನವೀಕರಣ ಪೂರ್ಣಗೊಳಿಸಿ ಕಟ್ಟವನ್ನು ಬಾಡಿಗೆ ಆಧಾರದ ಮೇಲೆ ಮಂಡಳಿಯ ನಿಯಮಾನುಸಾರ ಹಂಚಿಕೆ ಮಾಡಲು ಸೂಚಿಸಿದರು.ಕಾರ್ಯಪಾಲಕ ಅಭಿಯಂತರ ಮಾತನಾಡಿ, ಕೈಗಾರಿಕಾ ಪ್ರದೇಶ ಜಮೀನನ್ನು ಕೆಐಎಡಿಬಿ ಹೆಸರಿಗೆ ದಾಖಲಿಸಲು ಕುಶಾಲನಗರ ತಾಲೂಕು ತಹಸೀಲ್ದಾರ್ ಅವರು ಸೋಮವಾರಪೇಟೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ ಎಂದರು.