ಕುರಿಗಾರರಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಸಿಇಒ ರಾಹುಲ್

KannadaprabhaNewsNetwork |  
Published : Dec 25, 2024, 12:48 AM IST
ಜಿಪಂ ಕಚೇರಿ ಸಭಾಂಗಣದಲ್ಲಿ ಕುರಿಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಪಂ ಸಿಇಒ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಜಿಲ್ಲೆಯ ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಲು ಪಶು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.

ಕುರಿ, ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯ ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಲು ಪಶು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.

ಸೋಮವಾರ ಇಲ್ಲಿನ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಕುರಿಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

ಕುರಿ-ಮೇಕೆ ಸಾಕಾಣಿಕೆಗೆ ಮತ್ತು ಕುರಿಗಾರರಿಗೆ ಸರ್ಕಾರವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ, ಸಹಾಯಧನ ಸೌಲಭ್ಯ, ಅಗತ್ಯ ಪರಿಕರಗಳ ವಿತರಣೆ ಮತ್ತು ಜಾನುವಾರುಗಳಿಗೆ ಲಸಿಕೆ ಹೀಗೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಜಿಲ್ಲೆಯ ಕುರಿಗಾರರಿಗೆ ಜಾಗೃತಿ ಮೂಡಿಸಬೇಕು. ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಪ್ರಮಾಣ ಶೇ. 100 ಆಗಬೇಕು ಮತ್ತು ಸೌಲಭ್ಯ ವಿತರಣೆಯಲ್ಲೂ ಜಿಲ್ಲೆಯ ಪ್ರಗತಿ ಹೆಚ್ಚಾಗಬೇಕು. ಬಹಳಷ್ಟು ಕುರಿಗಾರರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಹೇಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂಬುದು ತಿಳಿದಿರುವುದಿಲ್ಲ ಎಂದರು.

ಸಂಚಾರಿ ಮತ್ತು ವಲಸೆ ಕುರಿಗಾರರಿಗೆ ಗುರುತಿನ ಚೀಟಿ ನೀಡುವ ಸರ್ಕಾರಿ ಆದೇಶದಂತೆ ಅಗತ್ಯ ಕ್ರಮ ಜರುಗಿಸಿ. ಅನುಗ್ರಹ ಯೋಜನೆಯಡಿ ಸತ್ತ ಕುರಿ-ಮೇಕೆಗಳಿಗೆ ಪರಿಹಾರ ವಿತರಣೆಯಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಅನುದಾನಕ್ಕಾಗಿ ಜಿಲ್ಲೆಯ ಕುರಿಗಾರರ ಬೇಡಿಕೆಯೊಂದಿಗೆ ಕೇಂದ್ರ ಕಚೇರಿಗೆ ಪತ್ರ ಬರೆದು ಪರಿಹಾರ ವಿತರಿಸುವಂತೆ ಕ್ರಮ ಕೈಗೊಳ್ಳಬೇಕು. ಮಳೆಯಿಂದ ಕುರಿಗಳ ಸಂರಕ್ಷಣೆಗೆ ತಾಡಪಾಲ ಶೆಡ್, ವಲಸೆ ಕುರಿಗಾರರ ಸಂರಕ್ಷಣೆಗೆ ತಾತ್ಕಾಲಿಕ ಶೆಡ್ ನಿರ್ಮಾಣ ಮತ್ತು ಕಂಬಳಿಗಳ ವಿತರಣೆ, ಸತ್ತ ಕುರಿ ಮೇಕೆಗಳಿಗೆ ಪರಿಹಾರ ಹಾಗೂ ಕುರಿಗಾರರ ಇತರೆ ಬೇಡಿಕೆಗಳ ಪಟ್ಟಿ ತಯಾರಿಸಿ ಯೋಜನೆಯ ಅಳವಡಿಕೆ ಮತ್ತು ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಕುರಿಗಾರರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು. ಈ ಹಿಲ್ಲೆಯಲ್ಲಿ ಪಶು ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿಗಾರರ ಸಂಘಗಳ ಸಹಕಾರದೊಂದಿಗೆ ಕುರಿಗಾರರ ಮಕ್ಕಳ ಶಿಕ್ಷಣದ ಸ್ಥಿತಿಗತಿಗಳ ಬಗ್ಗೆ ವರದಿ ಸಲ್ಲಿಸಬೇಕು. ಜಿಲ್ಲೆಯಲ್ಲಿರುವ ಪಶು ವೈದ್ಯರ ಕೊರತೆಯನ್ನು ನೀಗಿಸಲು ಅತಿಥಿ ಶಿಕ್ಷಕರ ರೀತಿಯಲ್ಲಿ ಜಿಲ್ಲೆಯ ಪಶು ವೈದ್ಯಾಧಿಕಾರಿಗಳನ್ನು ನೇಮಿಸಿಕೊಳ್ಳಬೇಕು. ಇದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ ಸದ್ಬಳಕೆ ಮಾಡಿಕೊಳ್ಳಲು ಅವಕಾಶವಿದ್ದು, ಪಶು ವೈದ್ಯಾಧಿಕಾರಿಗಳ ಸೇವೆಯನ್ನು ತ್ವರಿತವಾಗಿ ಪಡೆದುಕೊಳ್ಳುವಂತೆ ಸೂಚಿಸಿದರು.

ಅಳವಂಡಿ ಹೋಬಳಿಯ ಹಲಗೇರಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗುಡದಪ್ಪ ಬಸಪ್ಪ ಬನ್ನಪ್ಪನವರ ಮಾತನಾಡಿ, ಅಮೃತ ಯೋಜನೆಯಡಿ ಅರ್ಜಿ ಸಲ್ಲಿಸಿ, ಒಂದು ವರ್ಷ ಕಳೆದರೂ ಸಹ ಫಲಾನುಭವಿಗಳಿಗೆ ಸೌಲಭ್ಯಗಳು ಇನ್ನೂ ಸಿಗುತ್ತಿಲ್ಲ. ಕೂಡಲೇ ಯೋಜನೆಯ ಲಾಭವನ್ನು ಅರ್ಹ ಕುರಿಗಾರರಿಗೆ ತಲುಪಿಸುವ ಕೆಲಸವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಡಬೇಕು ಎಂದರು.

ಗಂಗಾವತಿಯ ಹಿಮಾಲಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸಿಇಒ ಕೆ.ಬಿ. ಜೂಡಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಡಾ. ಆನಂದ ದೇವರನಾವದಗಿ ಮಾತನಾಡಿದರು.

ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿನೋದ ಕುಮಾರ ದಿವಟರ, ಡಾ. ಶಿವರಾಜ ಎಂ. ಶೆಟ್ಟರ, ಡಾ. ಚನ್ನಬಸಪ್ಪ ಹಳ್ಳದ, ಡಾ. ಪ್ರಕಾಶ ಚೂರಿ, ಡಾ. ಜಾಕೀರ ಹುಸೇನ್, ಕುರಿಗಾರರಾದ ಮುಕ್ಕುಂದಪ್ಪ ಅಳವಂಡಿ, ಮಹಾಂತಪ್ಪ ಹನವಾಳ ಸೇರಿದಂತೆ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ