ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಅರ್ಹರೆಲ್ಲರಿಗೂ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿಸಿ

KannadaprabhaNewsNetwork | Published : Jun 8, 2025 2:08 AM

ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಸವಲತ್ತುಗಳು ಜಿಲ್ಲೆಯ ಎಲ್ಲಾ ಫಲಾನುಭವಿಗಳಿಗೆ ತಲುಪಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಸವಲತ್ತುಗಳು ಜಿಲ್ಲೆಯ ಎಲ್ಲಾ ಫಲಾನುಭವಿಗಳಿಗೆ ತಲುಪಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್‌ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಸದಸ್ಯರು ಪ್ರತಿ ತಿಂಗಳು ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಸಭೆಯಲ್ಲಿ ತಮ್ಮ ತಾಲೂಕು ವ್ಯಾಪ್ತಿಗೆ ಒಳಪಡುವ ಜನರಿಗೆ ಗ್ಯಾರಂಟಿ ಯೋಜನೆಗಳು ಸವಲತ್ತುಗಳು ದೊರಕುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು, ಒಂದು ವೇಳೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕದೇ ಇರುವುದು ಕಂಡುಬಂದಲ್ಲಿ ಸಂಬಂಧಿಸಿ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಬಗೆಹರಿಸಿ, ಸೌಲಭ್ಯಗಳನ್ನು ಒದಗಿಸಿಕೊಡುವಂತೆ ತಿಳಿಸಿದರು.

ಪಂಚಾಯತ್ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಸೌಲಭ್ಯಕ್ಕಾಗಿ ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳನ್ನು ಗುರುತಿಸಬೇಕು, ಅವರಿಗೆ ಯೋಜನೆಯ ಸೌಲಭ್ಯ ದೊರೆಯುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು.

ಪಡಿತರ ಚೀಟಿದಾರರಿಗೆ ಸರ್ಕಾರ ನಿಗದಿಪಡಿಸಿರುವಂತೆ ಪಡಿತರ ವಿತರಿಸಬೇಕು. ಪಡಿತರ ವಿತರಣೆಯಲ್ಲಿ ಯಾವುದೇ ಲೋಪದೋಷಗಳಾಗಬಾರದು. ಅಂಗಡಿ ಮಾಲೀಕರು ಪಡಿತರ ಚೀಟಿದಾರರಿಗೆ ಪಡಿತರ ವಿತರಿಸುವಲ್ಲಿ ತೊಂದರೆ ಕೊಡಬಾರದು. ಒಂದು ವೇಳೆ ಪಡಿತರ ಅಂಗಡಿ ಮಾಲೀಕರು ಗ್ರಾಹಕರಿಗೆ ಪಡಿತರ ನೀಡುವಲ್ಲಿ ತೊಂದರೆ ನೀಡುತ್ತಿದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದರು.ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸುವಂತೆ ಕೆ.ರಾಜು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.