ರೈತರಿಗೆ ಕೃಷಿ ಇಲಾಖೆ ಸೌಲಭ್ಯಗಳ ಮಾಹಿತಿ ನೀಡಿ: ವಾಗೀಶ ಶಿವಾಚಾರ್ಯ

KannadaprabhaNewsNetwork |  
Published : May 28, 2025, 12:00 AM IST
ಕುರುಗೋಡು 03 ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ವಾಗೀಶ ಶಿವಾಚಾರ್ಯ ಕೃಷಿ ಇಲಾಖೆಯ ಮಾಹಿತಿ ಪಡೆದರು | Kannada Prabha

ಸಾರಾಂಶ

ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಆರಂಭಗೊಂಡಿವೆ. ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಪ್ರಚಾರ ನಡೆಸಬೇಕು.

ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂಚನೆ

ಕನ್ನಡಪ್ರಭ ವಾರ್ತೆ ಕುರುಗೋಡು

ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಆರಂಭಗೊಂಡಿವೆ. ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಪ್ರಚಾರ ನಡೆಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಾಗೀಶ ಶಿವಾಚಾರ್ಯ ಸೂಚಿಸಿದರು.

ಇಲ್ಲಿನ ಪಟ್ಟಣದ ತಾಪಂ ಕಚೇರಿಯಲ್ಲಿ ಆಯೋಜಿಸಿದ್ದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ಈ ಕುರಿತು ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದಯಾನಂದ್, ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ಭೂಮಿ ನೀರಾವರಿ ವ್ಯಾಪ್ತಿಗೆ ಒಳಪಟ್ಟಿದೆ. ಕಡಿಮೆ ಪ್ರಮಾಣದಲ್ಲಿರುವ ಮಳೆಯಾಶ್ರಿತ ಭೂಮಿಯಲ್ಲಿ ಬಿತ್ತನೆ ಮಾಡಲು ಸಜ್ಜೆ, ತೊಗರಿ, ಹತ್ತಿ, ನವಣೆ, ಬೀಜ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನಿದೆ ಎಂದು ಮಾಹಿತಿ ನೀಡಿದರು.

ಮಣ್ಣಿನ ಫಲವತ್ತತೆಯ ರಕ್ಷಣೆಗೆ ಸೆಣಬು ಬೀಜ ಬಿತ್ತನೆ ಮಾಡುವುದು ಮತ್ತು ಉತ್ತಮ ಇಳುವರಿಗಾಗಿ ವರ್ಷದಿಂದ ವರ್ಷಕ್ಕೆ ಬೆಳೆ ಪರಿವರ್ತನೆ ಮಾಡುವಂತೆ ರೈತರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು.

ಆರೋಗ್ಯ ಇಲಾಖೆಯ ಮಾಹಿತಿ ಪಡೆದ ಉಪ ಕಾರ್ಯದರ್ಶಿ ವಾಗೀಶ ಶಿವಾಚಾರ್ಯ, ಮಳೆಗಾಲ ಪ್ರಾರಂಭವಾಗಿದೆ. ವಾಂತಿ-ಬೇಧಿ, ಮಲೇರಿಯಾ, ಡೆಂಘೀ, ಚಿಕುನ್ ಗುನ್ಯಾ ಹರಡದಂತೆ ಮುಂಜಾಗ್ರತೆ ವಹಿಸಬೇಕು. ಜನರಲ್ಲಿ ರೋಗ ನಿಯಂತ್ರಣ ಕುರಿತು ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು. ತಾಲೂಕಿನ ಎಲ್ಲ ಗ್ರಾಮಗಳಲ್ಲಿ ನೀರಿನ ಮೂಲಗಳ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿ ಕುಡಿಯಲು ಯೋಗ್ಯವಿದ್ದರೆ ಮಾತ್ರ ಸರಬರಾಜು ಮಾಡಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಬೇಕು ಎಂದರು.

ಚಿಕ್ಕಮಕ್ಕಳ ಹಾರೈಕೆಗಾಗಿ ಎನ್.ಐ.ಸಿ.ಯು. ವಾರ್ಡ್ ಪ್ರಾರಂಭಿಸುವಂತೆ ಸೂಚಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಮಂಜುನಾಥ, ಪ್ರಸ್ತುತ ಕುರುಗೋಡು ಪಟ್ಟಣದಲ್ಲಿರುವುದು ೩೦ ಹಾಸಿಗೆ ಸಾಮರ್ಥ್ಯದ ಸಮುದಾಯ ಆರೋಗ್ಯ ಕೇಂದ್ರ. ನಿತ್ಯ ೭೦ಕ್ಕೂ ಅಧಿಕ ಒಳರೋಗಿಗಳು ದಾಖಲಾಗುತ್ತಿದ್ದಾರೆ. ನಿರ್ಮಾಣ ಹಂತದಲ್ಲಿರುವ ೧೦೦ ಹಾಸಿಗೆ ಆಸ್ಪತ್ರೆ ಪ್ರಾರಂಭಗೊಂಡ ನಂತರ ಎನ್.ಐ.ಸಿ.ಯು. ವಾರ್ಡ್ ಪ್ರಾರಂಭಿಸಲಾಗುವುದು ಎಂದರು.

ಕೆಲವು ಗ್ರಾಮಗಳಲ್ಲಿ ಜೆಎಂಎಂ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಚರ್ಚೆ ಜರುಗಿತು.

ಕೆಲವು ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಗೈರಾಗಿದ್ದರು. ಅವರ ಪರವಾಗಿ ಬಂದ ಸಹ ಸಿಬ್ಬಂದಿ ಸಭೆಯಲ್ಲಿ ಮಾಹಿತಿ ನೀಡಲು ತಡಕಾಡಿದರು.

ಇಒ ಕೆ.ವಿ. ನಿರ್ಮಲಾ, ನರೇಗಾ ಎಡಿ ಶಿವರಾಮ ರೆಡ್ಡಿ, ಯೋಜನಾಧಿಕಾರಿ ರಾಧಿಕಾ ಮತ್ತು ಕಚೇರಿ ಪ್ರಭಾರ ವ್ಯವಸ್ಥಾಪಕ ಅನಿಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ