ಕೈಗಾರಿಕಾ ಪ್ರದೇಶಗಳಿಗೆ ಮೂಲಸೌಕರ್ಯ ಒದಗಿಸಿ: ಹೆಗಡೆ

KannadaprabhaNewsNetwork |  
Published : Mar 13, 2024, 02:00 AM IST
ಪೋಟೊ: 12ಎಸ್‌ಎಂಜಿಕೆಪಿ02ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ 190ನೇ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ 23ನೇ ಕೈಗಾರಿಕಾ ಸ್ಪಂದನಾ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.  | Kannada Prabha

ಸಾರಾಂಶ

ಜಿಲ್ಲೆಯ ಕೈಗಾರಿಕೆಗಳ ವ್ಯವಸ್ಥಿತ ನಿರ್ವಹಣೆ ಅಗತ್ಯಗಳಿಗೆ ಅನುಕೂಲವಾಗಿರುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಶಿವಮೊಗ್ಗ: ಜಿಲ್ಲೆಯ ಕೈಗಾರಿಕೆಗಳ ವ್ಯವಸ್ಥಿತ ನಿರ್ವಹಣೆ ಅಗತ್ಯಗಳಿಗೆ ಅನುಕೂಲವಾಗಿರುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ 190ನೇ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ 23ನೇ ಕೈಗಾರಿಕಾ ಸ್ಪಂದನಾ ಸಭೆಯಲ್ಲಿ ಅವರು ಮಾತನಾಡಿ, ಶಿವಮೊಗ್ಗ ಸಮೀಪದ ನಿಧಿಗೆ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್‌ಪೋರ್ಟ್‌ ಕೈಗಾರಿಕಾ ಘಟಕದಿಂದಾಗುತ್ತಿರುವ ಮಾಲಿನ್ಯವನ್ನು ನಿಯಂತ್ರಿಸಲು ಘಟಕದವರು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಸರ ಅಧಿಕಾರಿಗಳು ಕೂಡಲೇ ಖುದ್ದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.

ನಗರದ ಆಟೋ ಕಾಂಪ್ಲೆಕ್ಸ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಕುಡಿಯುವ ನೀರಿನ ಘಟಕಕ್ಕೆ ಮುಂದಿನ 2-3 ದಿನಗಳೊಳಗಾಗಿ ನೀರಿನ ಸಂಪರ್ಕ ಕಲ್ಪಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸೋಗಾನೆ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಗುರುತಿಸಲಾಗಿರುವ 580 ಎಕರೆ ಜಮೀನಿಗೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ತಹಸೀಲ್ದಾರರಿಂದ ಪಡೆದುಕೊಳ್ಳಲಾಗಿದೆ. ಈಗಾಗಲೇ ಗುರುತಿಸಲಾಗಿರುವ ಸದರಿ ಭೂ ಪ್ರದೇಶವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳುವ ಮೊದಲು ಸಂಬಂಧಿತ ಇಲಾಖಾಧಿಕಾರಿಗಳ ಸಭೆಯನ್ನು ಆಯೋಜಿಸಿ ನಂತರ ಅವರ ಉಪಸ್ಥಿತಿಯಲ್ಲಿ ಸರ್ವೇ ನಡೆಸಿ, ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಮಾಚೇನ ಹಳ್ಳಿಯಲ್ಲಿ ಮತ್ತು ದೇವಕಾತಿಕೊಪ್ಪಗಳಲ್ಲಿ ಇರುವ ಕೆಲ ಆಯ್ದ ಕೈಗಾರಿಕೆಗಳನ್ನು ಬೇರೆ ಉದ್ಯಮಕ್ಕೆ ಪರಿವರ್ತಿಸಿಕೊಂಡಿರುವ ಘಟಕಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಸೋಗಾನೆ ಸರ್ವೇ ನಂ. 120ರಲ್ಲಿ ಸರ್ಕಾರಿ ಜಮೀನಿನಲ್ಲಿರುವ ಕಲ್ಲುಗಣಿಯನ್ನು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದ ಫೌಂಡ್ರಿ ಕೈಗಾರಿಕಾ ಘಟಕಗಳ ಮರಳು ತ್ಯಾಜ್ಯವನ್ನು ಸುರಿಯಲು ಹಂಚಿಕೆ ಮಾಡುವ ಸಂಬಂಧ ಪರಿಸರ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಟೋ ಕಾಂಪ್ಲೆಕ್ಸ್ ಕೈಗಾರಿಕಾ ಪ್ರದೇಶದಲ್ಲಿ ಮಳೆಗಾಲದಲ್ಲಿ ಮಳೆ ನೀರು ಕೈಗಾರಿಕೆಗಳಿಗೆ ನುಗ್ಗಿ ತೀವ್ರ ಪ್ರಮಾಣದ ಅಡಚಣೆ ಉಂಟಾಗುತ್ತಿದ್ದು, ಕಳೆದ 5 ವರ್ಷಗಳಿಂದ ನಿರಂತರವಾಗಿರುವ ಈ ಸಮಸ್ಯೆಗೆ ನಿಗದಿತ ಅವಧಿಯಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಹಾಗೂ ಮಳೆ ನೀರನ್ನು ತಿರುಗಿಸುವ ಕಾಮಗಾರಿ ಕೈಗೊಳ್ಳಲು ಇರುವ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಬೇಕು. ಈ ಪ್ರದೇಶದಲ್ಲಿ ಬಹುದಿನಗಳಿಂದ ಹಾಳಾಗಿರುವ ಬೀದಿದೀಪಗಳನ್ನು ಮುಂದಿನ ಒಂದು ವಾರದೊಳಗಾಗಿ ದುರಸ್ತಿಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಕಲ್ಲೂರು ಮಂಡ್ಲಿ ಕೈಗಾರಿಕಾ ಪ್ರದೇಶದಲ್ಲಿ ಎಂಯುಎಸ್ಎಸ್‌ ಸಬ್‍ಸ್ಟೇಷನ್ ಅತ್ಯವಶ್ಯವಾಗಿರುವ ಬಗ್ಗೆ ಉದ್ದಿಮೆದಾರರು ಬೇಡಿಕೆ ಇರಿಸಿದ್ದಾರೆ. ಅದಕ್ಕಾಗಿ ಅಗತ್ಯವಿರುವಷ್ಟು ಸೂಕ್ತ ಸ್ಥಳವನ್ನು ಗುರುತಿಸಿ ವರದಿ ನೀಡಿದಲ್ಲಿ ಕ್ರಮ ವಹಿಸುವುದಾಗಿ ತಿಳಿಸಿದ ಅವರು, ಅಲ್ಲಿನ ರಸ್ತೆಗಳು ಯು.ಜಿ.ಕೇಬಲ್ ಅಳವಡಿಸುವಾಗ ಹಾಳಾಗಿದ್ದು, ಅದರ ದುರಸ್ತಿ ಕ್ರಮಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೈಗಾರಿಕಾ ಸಂಘದ ಅಧ್ಯಕ್ಷ ಎನ್‌.ಗೋಪಿನಾಥ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಣೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಯುಭಾರ ಕುಸಿತ : ಮೂರು ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
''ಮತ್ತೆ ಮೊಳಗಲಿದೆ ಜೆಡಿಎಸ್ ಕಹಳೆ: ಎಚ್ಡಿಕೆ 2028ಕ್ಕೆ ಸಿಎಂ''