ಶಿವಮೊಗ್ಗ: ಸೋಗಾನೆ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಹಂಚದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ, ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿಯಿಂದ ಗುರುವಾರ ಬೆಳಗ್ಗೆಯಿಂದಲೇ ವಿಮಾನ ನಿಲ್ದಾಣದ ಮುಖ್ಯಧ್ವಾರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಸುಮಾರು 341 ಸಂತ್ರಸ್ತರಿದ್ದೇವೆ. ಈಗಾಗಲೇ ಕೆಎಚ್ಬಿ ಮೂಲಕ ನಿವೇಶನಗಳ ಸಿದ್ಧವಾಗಿವೆ. ಆದರೂ ಕೆಎಚ್ಬಿಗೆ ಸರ್ಕಾರದಿಂದ ಹಣಪಾವತಿಯಾಗಿಲ್ಲ ಎಂಬ ಕಾರಣದಿಂದ ಹಂಚಿಕೆಯನ್ನು ಉದ್ದೇಶಪೂರ್ವಕವಾಗಿ ವಿಳಂಬಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಜಿಲ್ಲಾಡಳಿತದ ಈ ವಿಳಂಬ ನೀತಿಯನ್ನು ವಿರೋಧಿಸಿ ಇಂದಿನಿಂದ ನಮಗೆ ನ್ಯಾಯ ಸಿಗುವವರೆಗೂ ಅನಿರ್ದಿಷ್ಟ ಕಾಲಾವಧಿವರೆಗೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂಧನೆ ಕೇಸನ್ನು ಕೂಡ ದಾಖಲಿಸುತ್ತೇವೆ. ನಮ್ಮ ಕಾನೂನು ಮತ್ತು ಬೀದಿ ಹೋರಾಟ ಮುಂದುವರಿಯುತ್ತದೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ನಮಗೆ ಲಿಖಿತರೂಪದಲ್ಲಿ ಸೂಚನೆ ನೀಡುವವರೆಗೆ ನಾವು ಅನಿರ್ದಿಷ್ಟಾವಧಿ ಧರಣಿ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬದ ಮಹಿಳೆಯರೂ ಸೇರಿದಂತೆ ರೈತರು ಮತ್ತು ಸಂತ್ರಸ್ತ ಕುಟುಂಬದವರು ಟ್ರ್ಯಾಕ್ಟರ್ಗಳೊಂದಿಗೆ ಧರಣಿ ಮುಂದುವರಿಸಿದ್ದಾರೆ. ಪ್ರತಿಭಟನೆಯಲ್ಲಿ ಕೃಷ್ಣಪ್ಪ, ಮಹಾದೇವ, ಶಿವಾನಂದ, ರಾಮಣ್ಣ, ನಾಗರಾಜ್, ಎನ್.ಟಿ.ಕುಮಾರ್, ವೀರಭದ್ರ, ರಾಘವೇಂದ್ರ, ಬಸವಲಿಂಗಪ್ಪ, ರಾಮಣ್ಣ, ರಂಗಪ್ಪ, ಅಂಬಿಕಾ, ನಾಗರತ್ನಮ್ಮ, ಸಾವಿತ್ರಮ್ಮ ಸೇರಿದಂತೆ ಹಲವರಿದ್ದರು.