ಜನಸಾಮಾನ್ಯರಿಗೆ ಕಾನೂನು ಅರಿವು, ನೆರವು ಕಲ್ಪಿಸಿ: ಹೊಸಮನಿ ಪುಂಡಲೀಕ

KannadaprabhaNewsNetwork |  
Published : Nov 30, 2024, 12:46 AM IST
ಚಿತ್ರ :  29ಎಂಡಿಕೆ2 : ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ  ಮಾತನಾಡಿದರು.  | Kannada Prabha

ಸಾರಾಂಶ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಆಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಮಾಜದ ಎಲ್ಲಾ ಬಡವರು ಮತ್ತು ಅಸಹಾಯಕರಿಗೆ ಕಾನೂನಿನ ಅರಿವು ಮತ್ತು ನೆರವು ಕಲ್ಪಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಹೊಸಮನಿ ಪುಂಡಲೀಕ ಕರೆ ನೀಡಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಆಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.

ರಾಷ್ಟ್ರದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆ ನಿಟ್ಟಿನಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯ ತಿಳಿಸಲಾಗಿದೆ. ಆದ್ದರಿಂದ ಮೂಲಭೂತ ಹಕ್ಕು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆ ದಿಸೆಯಲ್ಲಿ ಕಾನೂನು ಸೇವಾ ಪ್ರಾಧಿಕಾರವು ಕಾನೂನಿನ ಅರಿವು ಮತ್ತು ನೆರವು ನೀಡುತ್ತಿದೆ ಎಂದರು.

ಕಾನೂನಿನಲ್ಲಿ ಜನರೇ ಮಾಡಿರುವ ಕಾನೂನುಗಳು ಮತ್ತು ನಿಸರ್ಗ ಮಾಡಿದ ಕಾನೂನು ಎಂಬ ಎರಡು ವರ್ಗ ಇವೆ. ಎರಡನ್ನೂ ಪಾಲಿಸಿದಲ್ಲಿ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಕಾನೂನುಗಳನ್ನು ಪಾಲಿಸಿ ಅಸ್ತಿತ್ವ ಉಳಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ವಿವರಿಸಿದರು.

ಸಮಾಜದಲ್ಲಿ ಇಂದಿಗೂ ಹಲವು ಕುಟುಂಬಗಳು ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ತಿಣುಕಾಡುತ್ತಿವೆ. ಆದ್ದರಿಂದ ಇಂತಹ ಕುಟುಂಬಗಳಿಗೆ ಅಗತ್ಯ ಕಾನೂನು ನೆರವು ನೀಡುವಂತಾಗಬೇಕು. ಸಮಾಜವು ಅನಾಗರಿಕತೆಯಿಂದ ನಾಗರಿಕತೆಯ ಎಡೆಗೆ ಮುನ್ನಡೆಯಬೇಕು ಎಂದು ನ್ಯಾಯಾಧೀಶರು ಸಲಹೆ ಮಾಡಿದರು.

ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಕಾನೂನು ಸ್ವಯಂ ಸೇವಕರು ಕಾನೂನು ಸೇವಾ ಪ್ರಾಧಿಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕೆಲಸ ಮಾಡುವಂತಾಗಬೇಕು ಎಂದು ತಿಳಿಸಿದರು.

ಸಮಾಜದಲ್ಲಿನ ಎಲ್ಲರಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸಿ, ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವುದು ಆದ್ಯತೆಯಾಗಬೇಕು. ಕಾನೂನು ದುರ್ಬಳಕೆ ಆಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ಎಂ.ಎ.ನಿರಂಜನ್ ಪ್ರತಿಪಾದಿಸಿದರು.

ಕುಟುಂಬ ಅಥವಾ ಇನ್ನಿತರ ಯಾವುದೇ ರೀತಿಯ ಭಿನ್ನಾಭಿಪ್ರಾಯ/ ಸಮಸ್ಯೆಗಳನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಲು ಮುಂದಾಗಬೇಕು. ಸಣ್ಣಪುಟ್ಟ ವಿಚಾರಗಳಿಗೆ ನ್ಯಾಯಾಲಯಕ್ಕೆ ಹೋಗಬಾರದು. ಸಾಧ್ಯವಾದಷ್ಟು ತಳಹಂತದಲ್ಲಿಯೇ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಕವಿಮಾತು ಹೇಳಿದರು.ಇತ್ತೀಚಿನ ದಿನಗಳಲ್ಲಿ ಮಡಿಕೇರಿ ನ್ಯಾಯಾಲಯಕ್ಕೆ ತಿಂಗಳಿಗೆ 10-15 ವಿಚ್ಛೇದನ ಪ್ರಕರಣಗಳು ದಾಖಲಾಗುತ್ತಿವೆ. ಈ ಹಿಂದೆ ಒಂದು ವರ್ಷಕ್ಕೆ ಇಷ್ಟು ಪ್ರಕರಣಗಳು(10 ರಿಂದ 15) ದಾಖಲಾಗುತ್ತಿದ್ದವು ಎಂದು ಎಂ.ಎ.ನಿರಂಜನ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಶ್ರೀಸಾಮಾನ್ಯರಿಗೆ ಕಾನೂನು ಸೇವೆ ತಲುಪಿಸುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಕೈಜೋಡಿಸುವಂತಾಗಬೇಕು ಎಂದು ಕೋರಿದರು.

ವಕೀಲ ಕೆ.ಎಂ.ಮೀನಾ ಕುಮಾರಿ ಅವರು ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನಿನ ಅರಿವು ಕುರಿತು ಹಾಗೂ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಅಧಿಕಾರಿ ಕೆ.ಜಿ.ವಿಮಲ ಅವರು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸೌಲಭ್ಯ ಬಗ್ಗೆ ಮಾಹಿತಿ ನೀಡಿದರು.

ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಪ್ರಶಾಂತಿ ಜಿ., ಮೂರನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಬಸವರಾಜ ಸಿ.ಕೆ., ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಸುಬ್ರಮಣಿ ಎನ್., ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸಿಜೆಎಂ. ಎನ್.ಬಿ. ಜಯಲಕ್ಷ್ಮಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ಮುನಿರತ್ನಮ್ಮ ಸಿ.ಎನ್., ಅಪರ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನಾಗೇಶ್ ಎನ್.ಎ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ